ಬೆಂಗಳೂರು: ಹಿರಿಯ ನಟಿ ಲೀಲಾವತಿಯವರು ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾಗ ಸೋಲದೇವನಹಳ್ಳಿಯ ಅವರ ಮನೆಗೆ ಹೋಗಿ ಭೇಟಿ ಮಾಡಿದ್ದೆ. ತಾಯಿ-ಮಗನ ಬಾಂಧವ್ಯ ಅನ್ಯೋನ್ಯವಾಗಿತ್ತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು ಲೀಲಾವತಿಯವರ ಅಂತ್ಯಸಂಸ್ಕಾರಕ್ಕೆ ಮುನ್ನ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇರಿಸಲಾಗಿತ್ತು. ಅಂತಿಮ ದರ್ಶನ ಪಡೆದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇವತ್ತು ಲೀಲಾವತಿಯವರಿಗೆ ಸರ್ಕಾರದ ಎಲ್ಲಾ ಗೌರವಗಳೊಂದಿಗೆ ಅಂತ್ಯಕ್ರಿಯೆ ಮಾಡಲು ನಾನು ಆದೇಶ ನೀಡಿದ್ದೇನೆ. ಅವರು ಕರ್ನಾಟಕ ಚಲನಚಿತ್ರ ಕಂಡ ಅಪರೂಪದ ನೈಜ ನಟನೆಯ ಕಲಾವಿದೆ. ರಂಗಭೂಮಿಯಿಂದ ಸಿನಿಮಾರಂಗಕ್ಕೆ ಬಂದು 600ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯ ಮಾಡಿದ್ದಾರೆ. ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿಯೂ ನಟಿಸಿದ್ದಾರೆ.
ಅವರು ಬಹುಭಾಷೆ ಕಲಾವಿದೆ. ಯಾವುದೇ ಪಾತ್ರವಿರಲಿ ಅದಕ್ಕೆ ಜೀವ ತುಂಬುತ್ತಿದ್ದರು.ನಾನು ಕಾಲೇಜು ವಿದ್ಯಾರ್ಥಿ ದೆಸೆಯಿಂದ ಅವರ ಚಲನಚಿತ್ರಗಳನ್ನು ನೋಡುತ್ತಿದ್ದೆ. ಅಂದು ನಮ್ಮ ಕಾಲದಲ್ಲಿ ರಾಜ್ ಕುಮಾರ್-ಲೀಲಾವತಿ ಎಂದರೆ ಬಹಳ ಜನಪ್ರಿಯ ಜೋಡಿ. ಅವರಿಬ್ಬರೂ ಅಭಿನಯಿಸಿದ್ದ ಎಲ್ಲಾ ಚಿತ್ರಗಳನ್ನು ನಾನು ನೋಡಿದ್ದೇನೆ ಎಂದು ಹೇಳಿದರು.
ಸಾಮಾಜಿಕ ಕ್ಷೇತ್ರದಲ್ಲಿ ಕೂಡ ಲೀಲಾವತಿಯವರು ಕೆಲಸ ಮಾಡಿದ್ದಾರೆ. ಅವರು ಗಳಿಸಿದ ಹಣವನ್ನು ಕಷ್ಟದಲ್ಲಿರುವವರಿಗೆ, ಬಡವರಿಗೆ ದಾನ ಮಾಡುತ್ತಿದ್ದರು. ಅವರಿಗೆ ರಾಷ್ಟ್ರದಲ್ಲಿ ಕಲಾವಿದರಿಗೆ ಸಿಗಬೇಕಾದ ಅತ್ಯುನ್ನತ ಪ್ರಶಸ್ತಿ ಸಿಗಬೇಕಾಗಿತ್ತು ಎಂಬುದು ನನ್ನ ಭಾವನೆ ಎಂದರು.


