ಮಧುಗಿರಿ: ಕ್ಷೀರ ಭಾಗ್ಯ ಯೋಜನೆಯು ಪೌಷ್ಟಿಕಾಂಶಗಳ ಕೊರತೆಯಿಂದ ಬಳಲುತ್ತಿರುವ ಮಕ್ಕಳಿಗೆ ವರದಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಪಟ್ಟಣದ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಕ್ಷೀರ ಭಾಗ್ಯ ಯೋಜನೆಯ ದಶಮಾನೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. 10 ವರ್ಷಗಳ ಹಿಂದೆ ನಮ್ಮ ಸರ್ಕಾರ ಪ್ರಾರಂಭಿಸಿದ್ದ ಈ ಯೋಜನೆಯು ನಿರಂತರವಾಗಿ ನಡೆದುಕೊಂಡು ಬರುತ್ತಿದೆ. ಶೇ.80ರಷ್ಟು ಶಾಲಾ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಪ್ರತಿ ಮಕ್ಕಳಿಗೆ 150 ಮಿಲಿ ಲೀ. ನಷ್ಟು ಹಾಲನ್ನು ವಿತರಿಸಲಾಗುತ್ತಿದೆ ಎಂದ ಅವರು, ನಮ್ಮ ಸರ್ಕಾರವು ನುಡಿದಂತೆ ನಡೆಯುತ್ತಿದ್ದು, ಸಂಕಷ್ಟದಲ್ಲಿದ್ದ ಹೈನುಗಾರಿಕೆಗೆ ಪ್ರೋತ್ಸಾಹ ನೀಡುತ್ತಿದೆ ನಷ್ಟದಲ್ಲಿದ್ದ ಒಕ್ಕೂಟಗಳಿಗೆ ಚೈತನ್ಯ ತುಂಬಿದೆ ಎಂದರು. ಎತ್ತಿನಹೊಳೆ ಯೋಜನೆ ಈ ಹಿಂದೆ ನಮ್ಮ ಸರ್ಕಾರ ಇದ್ದಾಗ ಪ್ರಾರಂಭಿಸಿದ್ದು, ಶೀಘ್ರದಲ್ಲೇ ಅದನ್ನು ಮುಕ್ತಾಯಗೊಳಿಸಿ ಈ ಭಾಗದ ಕೆರೆಗಳಿಗೆ ನೀರು ಹರಿಸುವುದಾಗಿ ತಿಳಿಸಿದ ಅವರು ಕೂಡ್ಲಿಗಿಯಿಂದ ಪಾವಗಡಕ್ಕೆ ಕುಡಿಯುವ ನೀರು ಒದಗಿಸುವ 2300 ಕೋಟಿ ರೂ. ಗಳ ಬೃಹತ್ ಯೋಜನೆಯನ್ನು ರೂಪಿಸಲಾಗಿದ್ದು, ಶೀಘ್ರದಲ್ಲಿ ಅನುಷ್ಠಾನಗೊಳಿಸುವುದಾಗಿ ತಿಳಿಸಿದರು.
ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದಾಗಿ ತಿಳಿಸಿದ ಅವರು ಈ ಯೋಜನೆಗೆ ಕೇಂದ್ರ ಸರ್ಕಾರ ಒಂದು ನಯಾ ಪೈಸೆ ಹಣ ಬಿಡುಗಡೆ ಮಾಡಿಲ್ಲ ಆದರೂ ಯೋಜನೆಯನ್ನು ಪೂರ್ಣಗೊಳಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ ಎಂದರು. ಮಧುಗಿರಿ ಏಕಶಿಲಾ ಬೆಟ್ಟಕ್ಕೆ ರೋಪ್ ವೇ ಅಳವಡಿಸುವ ಕಾರ್ಯವನ್ನು ನಮ್ಮ ಸರ್ಕಾರ ಕೈಗೆತ್ತಿಕೊಳ್ಳಲಿದೆ ಎಂದು ತಿಳಿಸಿದರು.
ಮಧುಗಿರಿಯನ್ನು ಕಂದಾಯ ಜಿಲ್ಲೆಯನ್ನಾಗಿ ಮಾಡಲು ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ ಹಾಗೂ ಮದುಗಿರಿಗೆ ಅಗತ್ಯವಾಗಿರುವ ತಾಯಿ- ಮಗು ಆಸ್ಪತ್ರೆಗೆ ಮುಂದಿನ ಆರ್ಥಿಕ ವರ್ಷದಲ್ಲಿ ಮಂಜೂರಾತಿ ನೀಡುವುದು ಎಂದು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಾತನಾಡಿ, ಮಧುಗಿರಿ ಉಪ ವಿಭಾಗವು ಬರಪೀಡಿತ ಪ್ರದೇಶವಾಗಿದ್ದು, ಕಂದಾಯ ಜಿಲ್ಲೆಯನ್ನಾಗಿ ಮಾಡಿದರೆ ಅಭಿವೃದ್ಧಿಯಾಗಲಿದೆ ಹಾಗೂ ಎತ್ತಿನಹೊಳೆ ಯೋಜನೆಯನ್ನು ತ್ವರಿತವಾಗಿ ಜಾರಿಗೊಳಿಸಿದರೆ ಈ ಭಾಗದ ರೈತರ ಬದುಕು ಹಸನಾಗಲಿದೆ ಎಂದರು.
ಸಹಕಾರ ಸಚಿವ ಕೆ. ಎನ್. ರಾಜಣ್ಣ ಮಾತನಾಡಿ, ನುಡಿದಂತೆ ನಡೆಯುವ ಮುಖ್ಯಮಂತ್ರಿಗಳು ಮಧುಗಿರಿಯನ್ನು ಕಂದಾಯ ಜಿಲ್ಲೆಯನ್ನಾಗಿ ಘೋಷಿಸುವುದರ ಮೂಲಕ ಈ ಭಾಗದ ಜನತೆಯ ಅನೇಕ ವರ್ಷಗಳ ಕನಸನ್ನು ನನಸಾಗಿಸಬೇಕು ಎಂದರು.
ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ, ಕೆಎಂಎಫ್ ಅಧ್ಯಕ್ಷ ಎಲ್. ಬಿ. ಪಿ. ಭೀಮ ನಾಯ್ಕ ಪ್ರಾಸ್ತಾವಿಕ ನುಡಿಗಳ ನಾಡಿದರು. ಪಶು ಸಂಗೋಪನ ಖಾತೆ ಸಚಿವ ಕೆ. ವೆಂಕಟೇಶ್, ಶಾಸಕರಾದ ಟಿ. ಬಿ. ಜಯಚಂದ್ರ, ಡಾ. ಎಚ್. ಡಿ. ರಂಗನಾಥ್, ಎಚ್. ವಿ. ವೆಂಕಟೇಶ್, ಆರ್. ರಾಜೇಂದ್ರ, ಕೆ. ವೈ. ನಂಜೇಗೌಡ, ಎಸ್. ಆರ್. ಶ್ರೀನಿವಾಸ್, ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಉಪ ವಿಭಾಗ ಅಧಿಕಾರಿ ರಿಷಿ ಆನಂದ್, ತಾಸಿಲ್ದಾರ್ ಸಿಬ್ಗತ್ ವುಲ್ಲಾ, ಕೆಎಂಎಫ್ ಕಾಂತರಾಜ್, ಡಿಸಿಸಿ ಬ್ಯಾಂಕ್ ನಿರ್ದೇಶಕ ನಾಗೇಶ್ ಬಾಬು, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ. ಕೆ. ಜಗದೀಶ್, ಸಹಕಾರ ಸಂಘಗಳ ನಿಬಂಧಕ ಕ್ಯಾಪ್ಟನ್ ಕೆ. ರಾಜೇಂದ್ರ, ತುಮುಲ್ ಅಧ್ಯಕ್ಷ ಸಿ. ವಿ. ಮಹಾಲಿಂಗಯ್ಯ, ಶಾಸಕ ಕೆ. ಷಡಕ್ಷರಿ, ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್, ಜಿ. ಪಂ. ಸಿ ಇ ಒ ಜಿ. ಪ್ರಭು, ನಿವೃತ್ತ ಮುಖ್ಯ ಕಾರ್ಯದರ್ಶಿ ಎಸ್. ವಿ. ರಂಗನಾಥ್, ಕೆಎಂಎಫ್ ನಿವೃತ್ತ ವ್ಯವಸ್ಥಾಪಕ ನಿರ್ದೇಶಕ ಎ. ಎಸ್. ಪ್ರೇಮನಾಥ್, ನಂಜುಂಡಯ್ಯ ಹಾಗೂ ವಿವಿಧ ಹಾಲು ಒಕ್ಕೂಟಗಳ ಅಧ್ಯಕ್ಷರುಗಳು, ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.
ವರದಿ: ಅಬಿದ್ ಮಧುಗಿರಿ