ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕೂನಿಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಐಮಂಗಲ ಹೋಬಳಿ ಬೀರೇನಹಳ್ಳಿ ಗ್ರಾಮದ ಸಮೀಪದ ಎನ್.ಹೆಚ್. 24ರಲ್ಲಿ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದ್ದು, ಬೆಂಗಳೂರು ನಗರದ ರಾಜಾಜಿನಗರ ನಿವಾಸಿ ಸಾಫ್ಟ್ವೇರ್ ಇಂಜನಿಯರ್ ಆಗಿರುವ ಹರೀಶ್ ಜೆ. ಅವರ ಪತ್ನಿ ರೇಣುಕಾ ಮಕ್ಕಳಾದ ಸುದೀಕ್ಷ, ಪ್ರತೀಕ್ಷ , ಹಾಗೂ ವಿಶಾಲಾಕ್ಷಿ ಅಪಘಾತದಲ್ಲಿ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನಲ್ಲಿರುವ ಸಂಬಂಧಿಕರ ಮದುವೆಗೆ ತೆರಳಿ, ಮದುವೆ ಕಾರ್ಯಕ್ರಮ ಮುಗಿಸಿ, ಹೊಸದುರ್ಗ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದರು. ರೇಣುಕಾ ಅವರು ಕಾರು ಚಲಾಯಿಸುತ್ತಿದ್ದು, ವೇಳೆ ಹಿರಿಯೂರು ತಾಲ್ಲೂಕಿನ ಬೀರೇನಹಳ್ಳಿ- ಭರಮಗಿರಿ ಸಮೀಪ ಯಾವುದೋ ಪ್ರಾಣಿ ರಸ್ತೆಗಡ್ಡವಾಗಿ ಬಂದಿದ್ದು, ಪ್ರಾಣಿಯನ್ನು ರಕ್ಷಿಸುವ ಭರದಲ್ಲಿ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ನಾಲ್ವರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಗ್ರಾಮಾಂತರ ಪೋಲಿಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಡಿ.ಜಿ. ಪರಮೇಶ್ ( P S I )ರವರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಪಟ್ಟಂತೆ ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 279/337/304(A) ಪ್ರಕಾರ ಕೇಸ್ ದಾಖಲಾಗಿದೆ.
ಇಲ್ಲಿ ಆಕ್ಸಿಡೆಂಟ್ ಹೊಸತಲ್ಲ:
ಈ ರಸ್ತೆಯಲ್ಲಿ ದಿಬ್ಬುಗಳು ಇದ್ದು ಸಂಬಂಧಪಟ್ಟ ಅಧಿಕಾರಿಗಳು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರು ಬರುತ್ತಾರೆ ಎಂಬ ಕಾರಣಕ್ಕೆ ಕಳೆದ ಮೂರು ತಿಂಗಳ ಹಿಂದೆಯಷ್ಟೇ ದಿಬ್ಬನ್ನು ತೆಗೆಸಿಹಾಕಿದರು. ಈ ರಸ್ತೆಯಲ್ಲಿ ಸಾಕಷ್ಟು ಅಪಘಾತಗಳಾಗುತ್ತಿದ್ದರೂ, ಅಪಘಾತವನ್ನು ತಪ್ಪಿಸಲು ಕೈಗೊಳ್ಳಬೇಕಾದ ಕ್ರಮಗಳನ್ನು ಸಂಬಂಧಪಟ್ಟವರು ಕೈಗೊಳ್ಳುತ್ತಿಲ್ಲ ಎನ್ನುವ ಆಕ್ರೋಶದ ಮಾತುಗಳು ಕೇಳಿ ಬಂದಿದೆ.
ವರದಿ: ಮುರುಳಿಧರನ್ ಆರ್., ಹಿರಿಯೂರು ( ಚಿತ್ರದುರ್ಗ ).
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB