ಮಧುಗಿರಿ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಸ್ಥಳದಲ್ಲೇ ಅಹವಾಲುಗಳನ್ನು ಇತ್ಯರ್ಥ ಪಡಿಸುವ ಉದ್ದೇಶದಿಂದ ಪ್ರಪ್ರಥಮ ಬಾರಿಗೆ ಐ.ಡಿ. ಹಳ್ಳಿ ಹೋಬಳಿಯಲ್ಲಿ ಮೊದಲ ಜನಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.
ಮಧುಗಿರಿ ತಾಲ್ಲೂಕು.ಐಡಿ.ಹಳ್ಳಿ ಹೋಬಳಿಯ ಗ್ರಾಮ ಪಂಚಾಯಿತಿ ಕಾರ್ಯಾಲಯ ಮುಂಭಾಗದಲ್ಲಿ ನಡೆದ ಜನಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಂದಾಯ ಇಲಾಖೆ, ಆರ್.ಡಿ.ಪಿ.ಆರ್ ಇಲಾಖೆ ಗಳಿಗೆ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗುತ್ತಿವೆ. ಎಲ್ಲಾ ಇಲಾಖೆಗಳಿಗೆ ಸಾರ್ವಜನಿಕರು ಈಗಾಗಲೇ ಸಲ್ಲಿಸಿರುವ ಅರ್ಜಿಗಳನ್ನು ಶೀಘ್ರವಾಗಿ ಇತ್ಯರ್ಥಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ನಿವೇಶನ ಇರುವರಿಗೆ ಗೃಹ ನಿರ್ಮಾಣ ಸೌಲಭ್ಯ ಹಾಗೂ ನಿವೇಶನ ಇಲ್ಲದವರಿಗೆ ನಿವೇಶನಗಳನ್ನು ಮಂಜೂರು ಮಾಡಬೇಕು, ಆಗಸ್ಟ್ 30ರಂದು ಎಲ್ಲಾ ಅರ್ಹ ಮಹಿಳಾ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಲಿದೆ, ಗ್ಯಾರಂಟಿ ಯೋಜನೆಗಳನ್ನು ಸಾರ್ವಜನಿಕರಿಗೆ ಸೌಲಭ್ಯಗಳನ್ನು ತಲುಪುಸುವುದೇ ನಮ್ಮ ಸರ್ಕಾರದ ಮುಖ್ಯ ಗುರಿಯಾಗಿದೆ, ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಜನಸಂಪರ್ಕ ಸಭೆ ಏರ್ಪಡಿಸಿ ಪಂಚಾಯತ್ ಮಟ್ಟದ ಸಮಸ್ಯೆಗಳನ್ನು ಬಗೆಹರಿಸಲು ಕ್ರಮವಹಿಸಲಾಗುತ್ತದೆ ಎಂದರು.
ಡೆಪ್ಯೂಟಿ ತಹಶೀಲ್ದಾರ್ ಗಳು ಹಾಗೂ ಕಂದಾಯ ಅಧಿಕಾರಿಗಳು ಮೇಲೆ ಹಲವಾರು ದೂರುಗಳಿದ್ದು, ಯಾರೂ ಕೇಂದ್ರಸ್ಥಾನದಲ್ಲಿ ಇಲ್ಲದಿರುವುದು ಸರಿಯಲ್ಲ.ಜನರ ಸಮಸ್ಯೆಗೆ ಪರಿಹಾರ ನೀಡಿದರಷ್ಟೇ ನಿಮಗೆ ಬೆಲೆ. ದರಕಾಸ್ತು ಜಮೀನು, ಪವತಿ ಖಾತೆಗಳ ವಿಲೇವಾರಿಗೆ ಕ್ರಮವಹಿಸಬೇಕು. ಹಿಂದೆ ಶಾಲೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣಪತ್ರ ಸಿಗುತ್ತಿದ್ದು, ಈಗ ಮತ್ತೆ ಆರಂಭಿಸಬೇಕು. ಎತ್ತಿನಹೊಳೆ ಯೋಜನೆಯಲ್ಲಿ ಕೆರೆಗಳಿಗೆ 1 ವರ್ಷದಲ್ಲಿ ನೀರು ಹರಿಸುವ ವಿಶ್ವಾಸವಿದೆ ಎಂದರು.
ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲಾಗಿದೆ, ಅಗತ್ಯ ಇರುವ ಕಡೆ ಗೋಶಾಲೆಗಳನ್ನು ಸ್ಥಾಪಿಸಲಾಗುತ್ತಿದೆ, ಎತ್ತಿನಹೊಳೆ ಯೋಜನೆಯಡಿ ಹಲವು ಕೆರೆಗಳು ತುಂಬಿಸಲಾಗುತ್ತದೆ, ಅಗತ್ಯ ಇರುವವರಿಗೆ ಹಸು, ಕುರಿ, ಮೇಕೆ ಸಾಕಾಣಿಕೆಗೆ ಬಡ್ಡಿರಹಿತ ಸಾಲವನ್ನು ನೀಡಲು ಕ್ರಮ ವಹಿಸಲಾಗಿದೆ.
ಸಾರ್ವಜನಿಕ ಆಸ್ತಿಗಳ ಸಂರಕ್ಷಿಸಿ, ಅವುಗಳ ಉಪಯೋಗವನ್ನು ಮುಂದಿನ ಪೀಳಿಗೆಗೆ ತಲುಪಿಸಲಾಗುವ ಹೊಣೆಗಾರಿಕೆ ನಮ್ಮೆಲ್ಲರದಾಗಿದೆ, ಸಾರ್ವಜನಿಕರ ಸಮಸ್ಯೆಗಳು ಏನೇ ಇದ್ದರೂ ನನ್ನ ಗಮನಕ್ಕೆ ತರಬೇಕು, ಕಳೆದ ಬಾರಿ ಶಾಸಕರಾಗಿದ್ದ ಸಂದರ್ಭದಲ್ಲಿ ಸುಮಾರು 16,400 ಮನೆಗಳನ್ನು ತಾಲೂಕಿನಲ್ಲಿ ನಿರ್ಮಾಣ ಮಾಡಿಸಿ, ಗುಡಿಸಲು ಮುಕ್ತ ತಾಲೂಕನ್ನಾಗಿ ಮಾಡಲಾಯಿತು ಎಂದರು. ರೈತರು ಸಣ್ಣ ಪುಟ್ಟ ಸಮಸ್ಯೆ, ವ್ಯಾಜ್ಯಗಳಿಗೆ ಪರಸ್ಪರ ದ್ವೇಷ ಸಾಧಿಸಬಾರದು, ಪರಸ್ಪರ ಸಹಕಾರ, ನಂಬಿಕೆಯಿಂದ ಅಭಿವೃದ್ಧಿ ಸಾಧ್ಯ ಎಂದರು.
ಜಿಲ್ಲಾಧಿಕಾರಿ ಕೆ. ಶ್ರೀನಿವಾಸ ಮಾತನಾಡಿ, ಹೋಬಳಿ ಮಟ್ಟದ ಜನ ಸಂಪರ್ಕ ಹಾಗೂ ಸಾರ್ವಜನಿಕರ ಕುಂದುಕೊರತೆಗಳ ನಿವಾರಣೆ ಸಭೆಯ ಮೂಲಕ ಸಾರ್ವಜನಿಕರ ಸಮಸ್ಯೆಗಳನ್ನು ಸಮರ್ಪಕವಾಗಿ ಬಗೆಹರಿಸಬಹುದಾಗಿದ್ದು, ಇದೊಂದು ಉತ್ತಮ ಜನೋಪಕಾರಿ ಸಭೆಯಾಗಿದೆ, ವಿವಿಧ ಇಲಾಖೆಗಳು, ನಿಗಮಗಳ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ, ಸಾರ್ವಜನಿಕರು ಅರ್ಜಿ ಸಲ್ಲಿಸಿದ ಕೂಡಲೇ ಸ್ಥಳದಲ್ಲೇ ಅಹವಾಲುಗಳನ್ನು ಇತ್ಯರ್ಥಪಡಿಸುವಂತೆ ಸೂಚಿಸಲಾಗಿದೆ, ಸಾರ್ವಜನಿಕರು ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ನರಸಿಂಹಮೂರ್ತ, ಕೆಎಂಎಫ್ ಮೈದನಹಳ್ಳಿ ಕಾಂತರಾಜು, ಇಂದಿರಾ ದೇನ ನಾಯಕ್, ಸುವರ್ಣಮ್ಮ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಾಲಯ್ಯ, ಸದಾಶಿವ ರೆಡ್ಡಿ, ಶನಿವಾರರೆಡ್ಡಿ ಸುರೇಂದ್ರ , ಕೃಷಿ ಇಲಾಖೆಯ ಉಪ ನಿರ್ದೇಶಕಿ ದೀಪಶ್ರೀ, ಡಿಹೆಚ್ಒ ಡಾ ಮಂಜುನಾಥ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶ್ರೀಧರ್, ತಹಶೀಲ್ದಾರ್ ಸಿಬ್ಗತ್ ವುಲ್ಲಾ, ಇ ಓ ಲಕ್ಷ್ಮಣ್, ಮಧುಸೂದನ್, ಜಿಲ್ಲಾ ಅಲ್ಪಸಂಖ್ಯಾತರ ಅಧಿಕಾರಿ ಶಬ್ಬೀರ್, ಕೆಎಂಎಫ್ ಮೈದನಹಳ್ಳಿ ಕಾಂತರಾಜು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಗ್ರಾಮಸ್ಥರು ಇದ್ದರು.
ವರದಿ: ಆಬಿದ್ ಮಧುಗಿರಿ


