ಪಾವಗಡ: ತಾಲೂಕಿನ ಪಳವಳ್ಳಿ ಗ್ರಾಮದ ಬಳಿಯಿರುವ ಡಾ. ಬಿ.ಆರ್. ಅಂಬೇಡ್ಕರ್ ಪರಿಶಿಷ್ಟ ವರ್ಗಗಳ ವಸತಿ ಶಾಲೆಯಲ್ಲಿ ಮಂಗಳವಾರ ಮೂವರು ವಿದ್ಯಾರ್ಥಿಗಳು ನಾಪತ್ತೆಯಾಗಿರುವ ಘಟನೆ ನಡೆದಿದ್ದು, ಈ ಪ್ರಕರಣದಲ್ಲಿ ಶಾಲಾ ಆಡಳಿತ ಮಂಡಳಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಂಭೀರ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ ಎಂದು ಪೋಷಕರು ಹಾಗೂ ಸ್ಥಳೀಯ ಮುಖಂಡರು ಆರೋಪಿಸಿದ್ದಾರೆ.
ಮಂಗಳವಾರ ಬೆಳಿಗ್ಗೆಯೇ ಮಕ್ಕಳು ಶಾಲೆಯಿಂದ ಕಾಣೆಯಾಗಿದ್ದರೂ, ಬೆಳಿಗ್ಗೆ 11 ಗಂಟೆಯವರೆಗೂ ಪೋಷಕರಿಗೆ ಯಾವುದೇ ಮಾಹಿತಿ ನೀಡದೆ ಪ್ರಾಂಶುಪಾಲರು ಉಡಾಫೆ ತೋರಿದ್ದಾರೆ. “ಮಕ್ಕಳು ಶಾಲೆಯ ಕಾಂಪೌಂಡ್ ಗೋಡೆ ಹತ್ತಿ ಹೊರಹೋಗಿದ್ದಾರೆ” ಎಂದು ಪ್ರಾಂಶುಪಾಲರು ಸಮರ್ಥಿಸಿಕೊಂಡಿದ್ದರೂ, ಶಾಲಾ ಆವರಣದಲ್ಲಿ ಗೋಡೆ ಹತ್ತಿ ಹೋಗಲು ಸಾಧ್ಯವೇ ಇಲ್ಲ, ಮಕ್ಕಳು ಮುಖ್ಯ ಗೇಟ್ ನಿಂದಲೇ ಹೊರಗೆ ಹೋಗಿದ್ದಾರೆ ಎಂದು ಪೋಷಕರು ಖಂಡಿಸಿದ್ದಾರೆ.
ಮಕ್ಕಳು ವಸತಿ ನಿಲಯದಿಂದ ಹೊರಹೋಗಲು ಕಾರಣವೇನು ಎಂಬುದನ್ನು ಪರಿಶೀಲಿಸುವ ಹಾಗೂ ಮಾಹಿತಿ ಪಡೆಯುವ ಕೆಲಸಕ್ಕೆ ಯಾವುದೇ ಅಧಿಕಾರಿಗಳು ಮುಂದಾಗಿಲ್ಲ. ಘಟನಾ ಸ್ಥಳಕ್ಕೆ ಭೇಟಿ ನೀಡಬೇಕಿದ್ದ ತಹಶೀಲ್ದಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಕ ಅಧಿಕಾರಿಗಳು (ಇಓ) ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ವಸತಿ ನಿಲಯಕ್ಕೆ ಭೇಟಿ ನೀಡದೆ, ತಮಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂಬಂತೆ ವರ್ತಿಸುತ್ತಿದ್ದಾರೆ ಎಂಬ ಆಕ್ರೋಶ ವ್ಯಕ್ತವಾಗಿದೆ.
ದೈಹಿಕ ಹಿಂಸೆ ಮತ್ತು ದೌರ್ಜನ್ಯದ ಆರೋಪ:
ಈ ಪ್ರಕರಣದ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿದ್ದು, ಶಾಲೆಯಲ್ಲಿ ಮಕ್ಕಳಿಗೆ ದೈಹಿಕವಾಗಿ ಹಿಂಸೆ ನೀಡಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ತಾಲೂಕಿನ ಹಲವು ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದ್ದರೂ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸುತ್ತಿಲ್ಲ. ಮಕ್ಕಳಿಗೆ ತೊಂದರೆಯಾಗುತ್ತಿರುವ ಬಗ್ಗೆ ಪೋಷಕರು ಧ್ವನಿ ಎತ್ತಿದರೂ, ಮೌನ ವಹಿಸುವಂತೆ ಅವರಿಗೆ ಬುದ್ಧಿ ಹೇಳಿ ಮತ್ತೆ ವಸತಿ ನಿಲಯಕ್ಕೆ ಕಳುಹಿಸಿದ ಘಟನೆಗಳೂ ನಡೆದಿವೆ.
ಈ ಶಾಲೆಯಲ್ಲಿ ಮಕ್ಕಳ ನಾಪತ್ತೆ ಪ್ರಕರಣ ಇದೇ ಮೊದಲೇನಲ್ಲ. ಹಿಂದೆ ಕೂಡ ಇಂತಹ ಹಲವಾರು ಘಟನೆಗಳು ನಡೆದಿದ್ದರೂ ಅವು ಹೊರಪ್ರಪಂಚಕ್ಕೆ ತಿಳಿಯದಂತೆ ಮುಚ್ಚಿಹಾಕಲಾಗಿತ್ತು. ಅದೃಷ್ಟವಶಾತ್ ಮಕ್ಕಳಿಗೆ ಯಾವುದೇ ಅಪಾಯವಾಗದೆ ಸುರಕ್ಷಿತವಾಗಿ ಮನೆಗೆ ಮರಳಿದ್ದಾರೆ.
ಪ್ರತಿಭಟನೆಯ ಎಚ್ಚರಿಕೆ:
ಘಟನೆ ಕುರಿತು ಪ್ರತಿಕ್ರಿಯಿಸಿರುವ ಪಾವಗಡ ತಾಲೂಕು ವಾಲ್ಮೀಕಿ ಜಾಗೃತಿ ವೇದಿಕೆಯ ಅಧ್ಯಕ್ಷ ಲೋಕೇಶ್ ಪಾಳೇಗಾರ ಅವರು, ಈ ಪ್ರಕರಣವನ್ನು ಸರಕಾರ ಹಾಗೂ ಸಂಬಂಧಪಟ್ಟ ಇಲಾಖೆ ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ. ಶಾಲೆಯ ಪ್ರಾಂಶುಪಾಲರ ಮೇಲೆ ಈಗಾಗಲೇ ಹಲವು ಆರೋಪಗಳಿದ್ದು, ರಾಜಕೀಯ ಪ್ರಭಾವ ಬಳಸಿ ಎಲ್ಲರನ್ನೂ ಬೆದರಿಸುತ್ತಿದ್ದಾರೆ. ಇಲ್ಲಿನ ಖಾಸಗಿ ಸಿಬ್ಬಂದಿ ವಿದ್ಯಾರ್ಥಿಗಳ ಮೇಲೆ ಹಾಗೂ ಪ್ರಶ್ನೆ ಮಾಡಿದ ಪೋಷಕರ ಮೇಲೆ ದಾಳಿ ಮಾಡಿರುವ ಉದಾಹರಣೆಗಳಿವೆ. ಆದ್ದರಿಂದ ಪ್ರಾಂಶುಪಾಲರು ಹಾಗೂ ದೌರ್ಜನ್ಯವೆಸಗುತ್ತಿರುವ ಖಾಸಗಿ ಸಿಬ್ಬಂದಿಯ ಮೇಲೆ ತಕ್ಷಣವೇ ಶಿಸ್ತುಕ್ರಮ ಜರುಗಿಸಿ, ಪ್ರಾಂಶುಪಾಲರನ್ನು ವರ್ಗಾವಣೆ ಮಾಡಬೇಕು; ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಪರಿಶಿಷ್ಟ ಪಂಗಡದ ಮುಖಂಡರಾದ ಭಾಸ್ಕರ ನಾಯಕ್ ಅವರು ಮಾತನಾಡಿ, ಶೇಕಡಾ 75% ರಷ್ಟು ಬಡ ಪರಿಶಿಷ್ಟ ಪಂಗಡದ ಕುಟುಂಬಗಳ ಮಕ್ಕಳು ವ್ಯಾಸಂಗ ಮಾಡುವ ಈ ವಸತಿ ಶಾಲೆಯಲ್ಲಿ ಮಕ್ಕಳಿಗೆ ಸೂಕ್ತ ರಕ್ಷಣೆ ಇಲ್ಲದಂತಾಗಿದೆ. ಖಾಸಗಿ ವ್ಯಕ್ತಿಗಳಿಂದ ಮಕ್ಕಳ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಪ್ರಾಂಶುಪಾಲರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವುದು ದುರಂತ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
