ಬೆಂಗಳೂರು: ಶಾಸಕರು ತಮಗೆ ನೀಡಲಾದ ಅನುದಾನದಿಂದ ಎಂದಿಗೂ ತೃಪ್ತರಾಗುವುದಿಲ್ಲ. ನಮ್ಮಲ್ಲಷ್ಟೇ ಅಲ್ಲ, ಎಲ್ಲಾ ಸರ್ಕಾರಗಳೂ ಈ ಸಮಸ್ಯೆಯನ್ನು ಎದುರಿಸುತ್ತವೆ ಎಂದು ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರ ವಿರುದ್ಧ ಶಾಸಕರ ಅಸಮಾಧಾನ ಎಲ್ಲಾ ಸರ್ಕಾರಗಳಲ್ಲೂ ಸಾಮಾನ್ಯ. ಶಾಸಕರ ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದು ಕಷ್ಟಸಾಧ್ಯ. ಹಾಗಾಗಿ ಸಣ್ಣಪುಟ್ಟ ಸಮಸ್ಯೆಗಳು ಇದ್ದೇ ಇರುತ್ತವೆ. ಮುಖ್ಯಮಂತ್ರಿಗಳು ಶಾಸಕರ ಜೊತೆ ಚರ್ಚೆ ಮಾಡಿ ಬಗೆಹರಿಸುತ್ತಾರೆ ಎಂದು ಹೇಳಿದರು.
ಈ ಮೊದಲು ಶಾಸಕಾಂಗ ಸಭೆಯಲ್ಲಿ ತಮ ಅಭಿಪ್ರಾಯಗಳನ್ನು ಹೇಳಿಕೊಳ್ಳಲು ಶಾಸಕರಿಗೆ ಅವಕಾಶ ನೀಡಲಾಗಿತ್ತು. ಸಾಕಷ್ಟು ಚರ್ಚೆಗಳೂ ಆಗಿವೆ. ಇದೆಲ್ಲಾ ಸಣ್ಣಪುಟ್ಟ ಸಮಸ್ಯೆ, ಬಗೆಹರಿಯುತ್ತದೆ. ಹೈಕಮಾಂಡ್ ಮುಖ್ಯಮಂತ್ರಿಯವರಿಗೆ ಯಾವ ರೀತಿಯ ಸೂಚನೆ ನೀಡಿದೆಯೋ ಗೊತ್ತಿಲ್ಲ. ಒಂದು ವೇಳೆ ಸೂಚನೆ ನೀಡಿದ್ದರೆ ಅದರಂತೆ ನಡೆದುಕೊಳ್ಳುತ್ತಾರೆಂದು ತಿಳಿಸಿದರು.
ಶಾಸಕರು ತಮ ಕ್ಷೇತ್ರದ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಿದ್ದಾರೆ. ಅದು ರಾಜ್ಯದ ಸಮಸ್ಯೆ ಅಲ್ಲ. ಕ್ಷೇತ್ರದ ಅಭಿವೃದ್ಧಿಗೆ ಪ್ರತಿಯೊಂದಕ್ಕೂ ತಲಾ 50 ಕೋಟಿ ರೂ.ಗಳ ಅನುದಾನ ನೀಡುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಎಲ್ಲಾ ಸಮಸ್ಯೆಗಳು ಇತ್ಯರ್ಥವಾಗುತ್ತವೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW