ತುಮಕೂರು: ಗ್ರಾಮಾಂತರ ಕ್ಷೇತ್ರದ ಹರಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐನಾಪುರ ಗ್ರಾಮದ ಮಾಜಿ ಗ್ರಾಮ ಪಂಚಾಯತ್ ಸದಸ್ಯ ಶಿವಪ್ರಸಾದ್ ಎಂಬುವವರು ಜೀವಂತವಿರುವಾಗಲೇ ಮೃತಪಟ್ಟಿದ್ದಾರೆ ಎಂದು ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದು ಹಾಕಿರುವ ಘಟನೆ ನಡೆದಿದೆ.
ಈ ಸಂಬಂಧ ತುಮಕೂರಿನ ತಾಲೂಕು ಕಚೇರಿ ಆವರಣದಲ್ಲಿ ಮಾಹಿತಿ ನೀಡಿದ ಐನಾಪುರ ಗ್ರಾ.ಪಂ. ಮಾಜಿ ಸದಸ್ಯ ಶಿವಕುಮಾರ್, ನಾನು ಜೀವಂತವಾಗಿರುವಾಗಲೇ , ನಾನು ಮೃತಪಟ್ಟಿದ್ದೇನೆ ಎಂಬ ಕಾರಣ ನೀಡಿ, ಮತದಾರರ ಪಟ್ಟಿಯಿಂದ ತೆಗೆದು ಹಾಕಿರುವ ಸಂದೇಶ ತಮ್ಮ ಮೊಬೈಲ್ ಸಂಖ್ಯೆಗೆ ಬಂದಿದ್ದು , ಈ ಮೂಲಕ ಗ್ರಾಮಾಂತರ ಭಾಗದಲ್ಲಿ ಜೆಡಿಎಸ್ ಪಕ್ಷದಲ್ಲಿ ಸಕ್ರಿಯವಾಗಿರುವ ಕಾರ್ಯಕರ್ತರನ್ನು ನೇರವಾಗಿ ಟಾರ್ಗೆಟ್ ಮಾಡುತ್ತಿದ್ದಾರೆ. ಈ ಮೂಲಕ ತಮ್ಮನ್ನು ತಮ್ಮ ಕಾರ್ಯಚಟುವಟಿಕೆಗಳನ್ನು ಕಟ್ಟಿಹಾಕುವ ಪ್ರಯತ್ನವನ್ನು ರಾಜಕೀಯ ವಿರೋಧಿಗಳು ನಡೆಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸ್ಥಳೀಯ ಅಧಿಕಾರಿಗಳು ಹಾಗೂ ತಹಸಿಲ್ದಾರ್ ಅವರ ಗಮನಕ್ಕೆ ತಂದಿದ್ದು , ಈ ವಿಷಯಕ್ಕೆ ಸಂಬಂಧಿಸಿದಂತೆ ತಹಸಿಲ್ದಾರ್ ಅವರು ಆನ್ಲೈನ್ ಮೂಲಕ ಅಪ್ಡೇಟ್ ಆಗಿದೆ ಎಂದು ಮಾಹಿತಿ ನೀಡಿದ್ದು, ಇದಕ್ಕೆ ಸಂಬಂಧಿಸಿದಂತೆ ತಾವು ಸ್ಥಳೀಯ ಸೈಬರ್ ಠಾಣೆಯಲ್ಲಿ ದೂರು ದಾಖಲಿಸುವುದಾಗಿ ತಿಳಿಸಿದ್ದಾರೆ.
ಇನ್ನು ಅದೇ ಗ್ರಾ.ಪಂ.ನ ಐನಾಪುರ ಗ್ರಾಮದ ಮತ್ತೋರ್ವ ಗ್ರಾಮ ಪಂಚಾಯತ್ ಸದಸ್ಯೆ ಶಾರದಾ ಎನ್ನುವವರ ಹೆಸರನ್ನು ಸಹ ಇದೇ ರೀತಿ ಮತದಾರರ ಪಟ್ಟಿಯಿಂದ ಕೈಬಿಟ್ಟು ನಂತರ ಪುನಹ ಸೇರ್ಪಡೆ ಮಾಡಿದ್ದಾರೆ. ಈ ಮೂಲಕ ನಮ್ಮನ್ನು ರಾಜಕೀಯ ವಿರೋಧಿಗಳು ಕಟ್ಟಿಹಾಕಲು ಪ್ರಯತ್ನಿಸುತ್ತಿದ್ದಾರೆ. ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯತ್ ಚುನಾವಣೆಗಳು ಹತ್ತಿರ ಬರುತ್ತಿದ್ದಂತೆ ಇಂತಹ ಘಟನೆಗಳು ನಡೆಯುತ್ತಿದ್ದು, ಇದ್ಯಾವುದಕ್ಕೂ ತಾವು ಜಗ್ಗುವುದಿಲ್ಲ ಎಂದು ಹಾಲಿ ಗ್ರಾಮ ಪಂಚಾಯತ್ ಸದಸ್ಯ ಶಾರದಾ ಮಾಹಿತಿ ನೀಡಿದ್ದಾರೆ.
ಇನ್ನು ಈ ಘಟನೆ ಸಂಬಂಧ ಇಂದು ತುಮಕೂರು ತಾಸಿಲ್ದಾರ್ ಮೋಹನ್ ಕುಮಾರ್ ಅವರನ್ನ ಇಬ್ಬರು ಸದಸ್ಯರು ಭೇಟಿ ಮಾಡಿ ಚರ್ಚಿಸಿದರು. ಜೀವಂತವಿರುವಾಗಲೇ ತಮ್ಮ ಹೆಸರುಗಳನ್ನು ಈ ರೀತಿಯಗಿ ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಎಷ್ಟು ಸರಿ? ಮುಂದೆ ಈ ರೀತಿ ಇಂತಹ ಘಟನೆಗಳು ಮರುಕಳಿಸದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಇಬ್ಬರು ಸದಸ್ಯರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ವರದಿ: ಉದಯ್ ಕುಮಾರ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB