ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನ್ಯಾಯಾಲಯದಿಂದ ದೊಡ್ಡ ಮಟ್ಟದ ನೆಮ್ಮದಿ ಸಿಕ್ಕಿದೆ. ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ‘ಬಿ-ರಿಪೋರ್ಟ್’ (ಅಂತಿಮ ವರದಿ) ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬುಧವಾರ (ಜನವರಿ 28) ಅಂಗೀಕರಿಸಿದೆ.
ಸಿಎಂ ಕುಟುಂಬಕ್ಕೂ ಕ್ಲೀನ್ ಚಿಟ್: ಕೇವಲ ಸಿದ್ದರಾಮಯ್ಯ ಮಾತ್ರವಲ್ಲದೆ, ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ, ಭಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಜಮೀನು ಮಾರಾಟ ಮಾಡಿದ್ದ ದೇವರಾಜ್ ಅವರಿಗೂ ನ್ಯಾಯಾಲಯ ರಿಲೀಫ್ ನೀಡಿದೆ. ಲೋಕಾಯುಕ್ತ ಪೊಲೀಸರು ನಡೆಸಿದ ಸುದೀರ್ಘ ತನಿಖೆಯಲ್ಲಿ ಸಿಎಂ ಕುಟುಂಬಸ್ಥರ ವಿರುದ್ಧ ಯಾವುದೇ ಅಕ್ರಮ ನಡೆದಿಲ್ಲ ಎಂಬ ಅಂಶ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಸಲ್ಲಿಸಲಾಗಿದ್ದ ವರದಿಯನ್ನು ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಎತ್ತಿ ಹಿಡಿದಿದ್ದಾರೆ.
ಇತರರ ವಿರುದ್ಧ ತನಿಖೆ ಮುಂದುವರಿಕೆ: ಮುಖ್ಯಮಂತ್ರಿಗಳ ವಿರುದ್ಧದ ತನಿಖೆಯನ್ನು ನ್ಯಾಯಾಲಯ ಕೈಬಿಟ್ಟಿದೆಯಾದರೂ, ಪ್ರಕರಣದ ಇತರ ಆರೋಪಿಗಳಾದ ಮುಡಾ ಅಧಿಕಾರಿಗಳು ಮತ್ತು ಕೆಲವು ಮಧ್ಯವರ್ತಿಗಳ ಪಾತ್ರದ ಕುರಿತು ತನಿಖೆ ಮುಂದುವರಿಸಲು ಪೊಲೀಸರಿಗೆ ನ್ಯಾಯಾಲಯ ಅನುಮತಿ ನೀಡಿದೆ.
ಪ್ರಕರಣದ ಹಿನ್ನೆಲೆ: ಮೈಸೂರಿನ ಕೆಸರೆ ಗ್ರಾಮದ 3 ಎಕರೆ 16 ಗುಂಟೆ ಜಮೀನನ್ನು ಮುಡಾ ವಶಪಡಿಸಿಕೊಂಡು, ಅದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ವಿಜಯನಗರದ ಪ್ರತಿಷ್ಠಿತ ಬಡಾವಣೆಯಲ್ಲಿ 14 ಬದಲಿ ನಿವೇಶನಗಳನ್ನು ನೀಡಲಾಗಿತ್ತು. ಇದರಲ್ಲಿ ಅಧಿಕಾರ ದುರುಪಯೋಗ ಮತ್ತು ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಈ ವಿಚಾರವಾಗಿ ವಿರೋಧ ಪಕ್ಷಗಳು ಸಿಎಂ ರಾಜೀನಾಮೆಗೆ ಒತ್ತಾಯಿಸಿ ದೊಡ್ಡ ಮಟ್ಟದ ಹೋರಾಟ ನಡೆಸಿದ್ದವು.
ಈಗ ನ್ಯಾಯಾಲಯವು ಬಿ–ರಿಪೋರ್ಟ್ ಅಂಗೀಕರಿಸಿರುವುದರಿಂದ ಸಿದ್ದರಾಮಯ್ಯ ಅವರ ಮೇಲಿದ್ದ ಕಾನೂನಾತ್ಮಕ ತೂಗುಗತ್ತಿ ದೂರಾದಂತಾಗಿದೆ. ಈ ತೀರ್ಪು ಕಾಂಗ್ರೆಸ್ ಸರ್ಕಾರ ಮತ್ತು ಸಿದ್ದರಾಮಯ್ಯ ಅವರಿಗೆ ದೊಡ್ಡ ನೈತಿಕ ಜಯ ತಂದುಕೊಟ್ಟಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


