ಗುಬ್ಬಿ: ಪೆದ್ದನಹಳ್ಳಿ ದಲಿತ ಯುವಕರ ಹತ್ಯೆಯ ಮುಖ್ಯ ಆರೋಪಿಗಳನ್ನು ರಕ್ಷಣೆ ಮಾಡುವಲ್ಲಿ ಸ್ಥಳೀಯ ಶಾಸಕರು ಮುಂದಾಗಿದ್ದಾರೆ ಹೆಣ್ಣೂರು ಶ್ರೀನಿವಾಸ್ ಗಂಭೀರ ಆರೋಪ ಮಾಡಿದ್ದಾರೆ.
ಪೆದ್ದನಹಳ್ಳಿ ಯಲ್ಲಿ ನಡೆದ ಇಬ್ಬರು ದಲಿತ ಯುವಕನ ದಾರುಣ ಹತ್ಯೆಯಲ್ಲಿ ಶಾಮೀಲಾಗಿರುವ ಮುಖ್ಯ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ನಿರ್ಲಕ್ಷ್ಯ ತಾಳಿದ್ದಾರೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್ ಆರೋಪಿಸಿದರು.
ಗುಬ್ಬಿ ತಾಲೂಕಿನ ಪೆದ್ದನಹಳ್ಳಿ ಗ್ರಾಮದಲ್ಲಿ ನಡೆದ ದಲಿತ ಯುವಕರ ಹತ್ಯೆಯನ್ನು ಖಂಡಿಸಿ ಇಂದು ನಗರದ ಪ್ರವಾಸಿ ಮಂದಿರದಿಂದ ಹೊರಟಂತಹ ಕಾಲ್ನಡಿಗೆ ಜಾಥಾ ಹಾಗೂ ತುಮಕೂರು ಚಾಲೋ ಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣ ನಡೆಯುತ್ತಿದ್ದರೂ ಸರ್ಕಾರ ದಲಿತರ ರಕ್ಷಣೆ ಮಾಡಲು ಮುಂದಾಗುತ್ತಿಲ್ಲ ಪೆದ್ದನಹಳ್ಳಿ ಪ್ರಕರಣಗಳು ಗಂಭೀರವಾಗಿ ನಡೆದರೂ ಸಹ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ಸಾಕಷ್ಟು ನಿರ್ಲಕ್ಷ ತಾಳುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪ್ರಕರಣವು ಇಡೀ ರಾಜ್ಯವನ್ನೇ ಬೆಚ್ಚಿ ಬಿಡಿಸುವಂತಹ ಘಟನೆ ಆಗಿದ್ದರು ಸಹ ಪೊಲೀಸ್ ಇಲಾಖೆ ನಿರ್ಲಕ್ಷ್ಯ ವಹಿಸಿದ್ದಾರೆ. ಸ್ಥಳೀಯ ಶಾಸಕರು ಆರೋಪಗಳಿಗೆ ಬೆನ್ನೆಲುಬಾಗಿ ನಿಂತಿರುವಂತೆ ಕಾಣುತ್ತಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಾಹಪುರ್ ವಾಡ್ ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸುವಲ್ಲಿ ಮುಂದಾಗುವ ಬಗ್ಗೆ ನಮಗೆ ಸಂಪೂರ್ಣ ಭರವಸೆ ಇದೆ. ವರಿಷ್ಠಾಧಿಕಾರಿಗಳು ಯಾವುದೇ ರಾಜಕೀಯ ಒತ್ತಡಕ್ಕೆ ಹಾಗೂ ಪ್ರಭಾವಕ್ಕೆ ಒಳಗಾಗದೆ ಕೂಡಲೇ ಮುಖ್ಯ ಆರೋಪಿಗಳನ್ನು ಬಂಧಿಸುವಲ್ಲಿ ಮುಂದಾಗಬೇಕು ಎಂದು ಒತ್ತಾಯಿಸಿದರು.
ಸರಕಾರ ಹತ್ಯೆಯಾದ ಕುಟುಂಬಸ್ಥರಿಗೆ 25 ಲಕ್ಷ ರೂ. ಪರಿಹಾರ ಹಾಗೂ ಅವಲಂಬಿತರಿಗೆ ಸರ್ಕಾರಿ ನೌಕರಿಯನ್ನು ಕೂಡಲೇ ಮಂಜೂರು ಮಾಡಬೇಕು ಎಂದು ಇದೇ ವೇಳೆ ಅವರು ಒತ್ತಾಯಿಸಿದರು.
ರಾಜ್ಯ ರೈತಸಂಘದ ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ಮಾತನಾಡಿ, ಪೆದ್ದನಹಳ್ಳಿ ಪ್ರಕರಣ ಇಡೀ ಸಮಾಜ ತಲೆತಗ್ಗಿಸುವ ಘಟನೆಯಾಗಿದ್ದು, ಆರೋಪಿಗಳನ್ನು ಬಂಧಿಸುವ ಕೆಲಸ ಈಗಾಗಲೇ ನಡೆಯಬೇಕಿತ್ತು. ಸರ್ಕಾರ ಇಂತಹ ಘಟನೆಗಳು ನಡೆಯದಂತೆ ಹೆಚ್ಚಿನ ನಿಗಾವಹಿಸಬೇಕಿದೆ ಜೊತೆಗೆ ಸರ್ಕಾರ ಯುವಕರ ಕುಟುಂಬಕ್ಕೆ ಕೊಡಲೆ ಹೆಚ್ಚಿನ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಈ ವೇಳೆಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜಿ.ಹೆಚ್.ಜಗನ್ನಾಥ್, ಜಿಲ್ಲಾ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ನಿಟ್ಟೂರು ರಂಗಸ್ವಾಮಿ, ಜಿಲ್ಲಾ ಮುಖಂಡರಾದ ಕೊಟ್ಟ ಶಂಕರ್, ಕೊಡಿಯಾಲ ಮಹದೇವ್, ತಾಲೂಕು ಸಂಚಾಲಕ ಚೇಳೂರು ಶಿವನಂಜಪ್ಪ, ನರಸೀಯಪ್ಪ, ದೊಡ್ಡ ಗುಣಿ ಕೀರ್ತಿ, ಕಲ್ಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎಲ್.ರವಿಕುಮಾರ್, ಇಡಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಮೀಳಾ ಮಂಜುನಾಥ್, ಮಂಚಿಹಳ್ಳಿ ಶಿವಸ್ವಾಮಿ, ಕುಂದರನಹಳ್ಳಿ ನಟರಾಜ್, ಮಾರಶೆಟ್ಟಿ ಈಶ್ವರಪ್ಪ, ಬಸವರಾಜು, ಮಂಚಲದೊರೆ ರಮೇಶ್, ರಾಮಚಂದ್ರ ಪ್ಪ ಹಾಗೂ ಗುಬ್ಬಿ ತಾಲ್ಲೂಕಿನ ದಲಿತ ಮುಖಂಡರು ಹಾಗೂ ಗುಬ್ಬಿ ತಾಲ್ಲೂಕಿನ ವಾಲ್ಮೀಕಿ ಸಮಾಜದ ಮುಖಂಡರು ಹಾಜರಿದ್ದರು.
ವರದಿ: ಮಂಜುನಾಥ್, ಗುಬ್ಬಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5