ತುರುವೇಕೆರೆ: ಪಟ್ಟಣದ ಖಾಸಗಿ ಹೋಟೆಲ್ ಮುಂಭಾಗದಲ್ಲಿ ನನ್ನ ಮತದಾನ ನನ್ನ ಹಕ್ಕು ಎಂಬ ಶೀರ್ಷಿಕೆಯಡಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐಆರ್) ಕುರಿತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷ ಮುರಳಿಧರಹಾಲಪ್ಪ, ಪ್ರಜಾಪ್ರಭುತ್ವದಲ್ಲಿ ಮತದಾನದ ಹಕ್ಕು ಪ್ರತಿಯೊಬ್ಬ ಪ್ರಜೆಗೂ ಅತ್ಯಮೂಲ್ಯವಾದುದು ಎಂದರು.
ಎಸ್ ಐಆರ್ ಫಾರಂ ಆನ್ ಲೈನ್ ನಲ್ಲಿ ಭರ್ತಿ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ಎದುರಾಗಬಹುದಾದ ತಾಂತ್ರಿಕ ತೊಂದರೆಗಳನ್ನು ಪರಿಹರಿಸಲು ಕೆಪಿಸಿಸಿಯಿಂದ ಪ್ರತ್ಯೇಕ ತಾಂತ್ರಿಕ ತಂಡವನ್ನು ರಚಿಸಲಾಗಿದೆ. ಫಾರಂ ಭರ್ತಿ ಮಾಡಲು ಸಾಧ್ಯವಾಗದವರು, ದಾಖಲೆಗಳ ಅಪ್ಲೋಡ್ ಸಂಬಂಧ ಗೊಂದಲಕ್ಕೊಳಗಾದವರು ಈ ತಂಡವನ್ನು ಸಂಪರ್ಕಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಅವರು ಸ್ಪಷ್ಟಪಡಿಸಿದರು.
ಗ್ಯಾರಂಟಿ ಸಮಿತಿ ಅಧ್ಯಕ್ಷ ಗುಡ್ಡೆನಹಳ್ಳಿ ಪ್ರಸನ್ನ ಕುಮಾರ್ ಮಾತನಾಡಿ, ಈ ಸೇವೆ ಸಂಪೂರ್ಣವಾಗಿ ಉಚಿತವಾಗಿದ್ದು, ಪಕ್ಷಾತೀತವಾಗಿ ಎಲ್ಲಾ ಮತದಾರರಿಗೂ ಲಭ್ಯವಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ಮತದಾನದ ಹಕ್ಕಿನ ಮಹತ್ವದ ಕುರಿತು ಈ ರೀತಿಯ ಜಾಗೃತಿ ಕಾರ್ಯಕ್ರಮಗಳು ತಾಲ್ಲೂಕಿನಾದ್ಯಂತ ಮುಂದುವರಿಯಲಿವೆ ಎಂದು ತಿಳಿಸಿದರು.
ಈ ವೇಳೆ ಪಟ್ಟಣದ ಮತದಾರರು ಪಾಲ್ಗೊಂಡು, ತಮ್ಮ ಎಸ್ ಐಆರ್ ಸಂಬಂಧಿತ ಸಂದೇಹಗಳನ್ನು ಪರಿಹರಿಸಿಕೊಂಡರು. ತಾಲ್ಲೂಕು ಮಹಿಳಾ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಟಿಎನ್ ಶಿವರಾಜ್, ಕುಮಾರ್ ಕೊಂಡಜ್ಜಿ, ನಂಜುಂಡಪ್ಪ ಗುಡ್ಡೆನಹಳ್ಳಿ, ಯಜಮಾನ ಮಹೇಶ್, ಉದಯ್ ಕುಮಾರ್ ಅರಳಿಕೆರೆ, ಮುಖಂಡರಾದ ಜೋಗಿಪಾಳ್ಯ ಶಿವರಾಜ್, ಮೇಲನಹಳ್ಳಿ ಮಂಜಯ್ಯ, ಕೀರ್ತಿರಾಜ್, ಪುಟ್ಟರಾಜ್, ಸತೀಶ್ ಕಾರ್ಯಕರ್ತರುಗಳು ಹಾಗೂ ಸಾರ್ವಜನಿಕರು ಇದ್ದರು.
ಚುನಾವಣೆ ಆಯೋಗ ಪ್ರಸ್ತುತ ಕೈಗೊಂಡಿರುವ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ತಾಲ್ಲೂಕಿನ ಪ್ರತಿಯೊಬ್ಬ ಅರ್ಹ ಮತದಾರರೂ ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಆಗದಿದ್ದಲ್ಲಿ ಮುಂಬರುವ ಚುನಾವಣೆಗಳಲ್ಲಿ ಮತದಾನದ ಹಕ್ಕಿನಿಂದ ವಂಚಿತರಾಗುವ ಸಾಧ್ಯತೆ ಇರುತ್ತದೆ. ಈ ಬಗ್ಗೆ ಯಾವುದೇ ನಿರ್ಲಕ್ಷ್ಯ ವಹಿಸದೆ ಪ್ರತಿಯೊಬ್ಬರೂ ತಮ್ಮ ಫಾರಂಗಳನ್ನು ಭರ್ತಿ ಮಾಡಿ ಸಲ್ಲಿಸಬೇಕು. ವಿಶೇಷವಾಗಿ ಗ್ರಾಮೀಣ ಪ್ರದೇಶದ ಮತದಾರರು, ಹಿರಿಯ ನಾಗರಿಕರು ಹಾಗೂ ಹೊಸದಾಗಿ ಮತದಾನದ ಅರ್ಹತೆ ಪಡೆದ ಯುವಜನರು ಈ ಪ್ರಕ್ರಿಯೆಯ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು.
– ಮುರಳಿಧರ ಹಾಲಪ್ಪ ಕೆಪಿಸಿಸಿ ಉಪಾಧ್ಯಕ್ಷರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
