ತುಮಕೂರು: ಪೂರಕ ಪೌಷ್ಟಿಕ ಆಹಾರ ಯೋಜನೆ ಹಾಗೂ ಪೋಷಣ್ ಯೋಜನೆಯಡಿ ಶೇಕಡಾ 100 ಕ್ಕಿಂತ ಕಡಿಮೆ ಸಾಧನೆ ಮಾಡಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದ್ದಾರೆ.
ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಂಬಂಧಿಸಿದಂತೆ 2025-2026 ನೇ ಸಾಲಿನ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪೌಷ್ಟಿಕ ಆಹಾರ ಪೂರೈಕೆಗೆ ಸಂಬಂಧಿಸಿದಂತೆ ಹಿಂದಿನ ಸಭೆಯಲ್ಲಿಯೇ ಸೂಚನೆ ನೀಡಲಾಗಿತ್ತು. ಆದರೂ ಸಮರ್ಪಕವಾಗಿ ಆಗಿಲ್ಲ. ಈ ಹಿನ್ನೆಲೆಯಲ್ಲಿ ಶೇ.100 ಕ್ಕಿಂತ ಕಡಿಮೆ ಸಾಧನೆ ಮಾಡಿದ ಜಿಲ್ಲೆಯ ನಾಲ್ವರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸುವಂತೆ ಅವರು ಇಲಾಖೆ ಉಪ ನಿರ್ದೇಶಕ ಡಾ.ಸಿದ್ಧರಾಮಣ್ಣ ಅವರಿಗೆ ಸೂಚಿಸಿದರು.
ಕೇಂದ್ರ ಪುರಸ್ಕೃತ ಯೋಜನೆಯಾದ ಮಿಷನ್ ಶಕ್ತಿ ಯೋಜನೆಯಡಿ ಮಹಿಳಾ ಸಬಲೀಕರಣಕ್ಕಾಗಿ ಇಲಾಖೆಯಿಂದ ಹಲವಾರು ತರಬೇತಿ, ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ವಿಷಯದಲ್ಲಿ ಉತ್ತಮ ಪ್ರಗತಿಯಾಗಿದೆ. ಈ ಬಗ್ಗೆ ಜಿಲ್ಲಾ ಮಟ್ಟದಲ್ಲಿ ವಿಡಿಯೋ ಚಿತ್ರೀಕರಣ ಮಾಡುವಂತೆ ಅವರು ಸೂಚಿಸಿದರು. ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ರಕ್ಷಣೆ, ಸಖಿ ಒನ್ ಸ್ಟಾಪ್ ಯೋಜನೆಯಡಿ ನೊಂದ ಮಹಿಳೆಯರಿಗೆ ವೈದ್ಯಕೀಯ ಸಲಹೆ, ತಾತ್ಕಾಲಿಕ ರಕ್ಷಣೆ, ಪೊಲೀಸ್ ನೆರವು ಇತ್ಯಾದಿ ಕ್ರಮಗಳನ್ನು ಸಮರ್ಪಕವಾಗಿ ನಿರ್ವಹಿಸಿರುವ ಬಗ್ಗೆ ಇಲಾಖೆ ಉಪ ನಿರ್ದೇಶಕ ಡಾ.ಸಿದ್ಧರಾಮಣ್ಣ ಅವರು ಸಭೆಯ ಗಮನಕ್ಕೆ ತಂದರು.
ಅಲ್ಲದೆ, ಮಹಿಳೆಯ ಮತ್ತು ಮಕ್ಕಳ ಅನೈತಿಕ ಸಾಗಾಣೆ ತಡೆ ಕಾವಲು ಸಮಿತಿ, ಮಾತೃ ವಂದನಾ, ವರದಕ್ಷಿಣೆ ನಿಷೇಧ ಕಾಯ್ದೆಯಡಿ ದಾಖಲಿಸಿದ ಪ್ರಕರಣಗಳು ಇತ್ಯಾದಿ ವಿಷಯಗಳ ಮಾಹಿತಿಯನ್ನು ಸಭೆಯಲ್ಲಿ ಅವರು ನೀಡಿದರು. ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು ಸಮಿತಿಯ ಸದಸ್ಯರು ವಿವಿಧ ಇಲಾಖೆ ಮುಖ್ಯಸ್ಥರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
ಬಾಲ್ಯ ವಿವಾಹ ಹಾಗೂ ಪೋಕ್ಸೋ ಪ್ರಕರಣಗಳ ಮಾಹಿತಿ ನೀಡಿದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಆರ್.ಜೆ ಪವಿತ್ರ ಅವರು 16 ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿರುವುದಾಗಿ ಹಾಗೂ ಈ ಎಲ್ಲ ಪ್ರಕರಣಗಳಲ್ಲಿ ಸಂಬಂಧಿಸಿದ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿರುವುದಾಗಿ ತಿಳಿಸಿದರು. ಕಳೆದ ವರ್ಷ 20 ಕ್ಕೂ ಅಧಿಕ ಪ್ರಕರಣಗಳಿದ್ದು ಈ ಸಾಲಿನಲ್ಲಿ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿರುವ ಬಗ್ಗೆ ಜಿಲ್ಲಾಧಿಕಾರಿಗಳ ಪ್ರಶ್ನೆಗೆ ಪವಿತ್ರ ಅವರು ತಿಳಿಸಿದರು. ಅದೇ ರೀತಿ ಜಿಲ್ಲೆಯಲ್ಲಿ ದಾಖಲಾಗಿರುವ ಪೋಕ್ಸೋ ಪ್ರಕರಣಗಳ ಮಾಹಿತಿ ಪಡೆದರು.
ಜಿಲ್ಲಾ ಸಾಂತ್ವನ ಕೇಂದ್ರ ಮುಂದುವರಿಯಲಿ:
2027 ನೇ ಸಾಲಿನ ಅಂತ್ಯಕ್ಕೆ ಜಿಲ್ಲಾ ಮಟ್ಟದ ಸಾಂತ್ವನ ಕೇಂದ್ರಗಳನ್ನು ಸ್ಥಗಿತಗೊಳಿಸಿ ತಾಲೂಕು ಕೇಂದ್ರಗಳಿಗೆ ಸ್ಥಳಾಂತರಿಸುವಂತೆ ಕೇಂದ್ರ ಕಚೇರಿಯಿಂದ ಸುತ್ತೋಲೆ ಬಂದಿದೆ. ತುಮಕೂರು ಜಿಲ್ಲೆಯಲ್ಲಿ 10 ಸಾಂತ್ವನ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು ಜಿಲ್ಲಾ ಕೇಂದ್ರದಲ್ಲಿರುವ ನಗರ ಸಾಂತ್ವನ ಕೇಂದ್ರವನ್ನು ಖಾಲಿ ಇರುವ ತಾಲೂಕು ಕೇಂದ್ರಕ್ಕೆ ಸ್ಥಳಾಂತರಿಸಬೇಕಾಗಿದೆ. ಜಿಲ್ಲಾ ಸಮನ್ವಯ ಸಮಿತಿಯಿಂದ ಇದಕ್ಕೆ ಅನುಮೋದನೆ ಬೇಕಾಗಿದೆ ಎಂದು ಉಪನಿರ್ದೇಶಕರು ಮಾಹಿತಿ ನೀಡಿದರು. ನಗರ ಸಾಂತ್ವನ ಕೇಂದ್ರ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವುದನ್ನು ಖಚಿತಪಡಿಸಿಕೊಂಡ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ರವರು ಈ ಕೇಂದ್ರವನ್ನು ಎಲ್ಲಿಗೂ ಸ್ಥಳಾಂತರಿಸುವುದು ಬೇಡ. ಇಲ್ಲಿಯೇ ಉಳಿಸಿ ಮುಂದುವರೆಸಿ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


