ಪಾವಗಡ: ತಾಲೂಕಿನ ಮುರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವಂತೆ ಒತ್ತಾಯಿಸಿ ವಸತಿ ಶಾಲೆಗಳ ಪ್ರಾಂಶುಪಾಲರು ಶಾಸಕ ಎಚ್. ವಿ. ವೆಂಕಟೇಶ್ ಅವರಿಗೆ ಮನವಿ ಸಲ್ಲಿಸಿದರು.
ಶಾಸಕರ ತೋಟದ ಮನೆಗೆ ಭೇಟಿ ನೀಡಿದ ಕ್ಷೇತ್ರದ ವಿವಿಧ ವಸತಿ ಶಾಲೆಗಳ ಪ್ರಾಂಶುಪಾಲರ ನಿಯೋಗವು ಅಧಿಕೃತವಾಗಿ ಮನವಿ ಪತ್ರವನ್ನು ಹಸ್ತಾಂತರಿಸಿತು. ಶಾಲಾ ಆವರಣಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗಾಗಿ ಹೈಮಾಸ್ಕ್ ವಿದ್ಯುತ್ ದೀಪಗಳನ್ನು ಅಳವಡಿಸಬೇಕು, ಜಲ್ ಜೀವನ್ ಮಿಷನ್ ಯೋಜನೆಯಡಿ ವಸತಿ ಶಾಲೆಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾದ ಇತರೆ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು ತುರ್ತಾಗಿ ಕೈಗೊಳ್ಳಬೇಕು ಎಂದು ಪ್ರಾಂಶುಪಾಲರು ಶಾಸಕರಲ್ಲಿ ವಿನಂತಿಸಿದರು.
ಮನವಿಯನ್ನು ಸ್ವೀಕರಿಸಿ ಮಾತನಾಡಿದ ಶಾಸಕ ಎಚ್. ವಿ. ವೆಂಕಟೇಶ್ ಅವರು, “ವಿದ್ಯಾರ್ಥಿಗಳ ಹಿತದೃಷ್ಟಿ ಹಾಗೂ ಅವರ ಉಜ್ವಲ ಭವಿಷ್ಯ ನಮಗೆ ಮುಖ್ಯ. ವಸತಿ ಶಾಲೆಗಳಿಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಶೀಘ್ರದಲ್ಲೇ ಚರ್ಚೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ವಸತಿ ಶಾಲೆಗಳ ಪ್ರಾಂಶುಪಾಲರುಗಳಾದ ತಿಪ್ಪೇಸ್ವಾಮಿ, ಶ್ರೀನಿವಾಸ್, ಶಶಿಧರ್, ಸಂತೋಷ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ವರದಿ: ನಂದೀಶ್ ನಾಯ್ಕ ಪಿ., ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


