ಸರಗೂರು: 12ನೇ ಶತಮಾನದ ಆದ್ಯ ವಚನಕಾರ, ಶಿವಶರಣ ಶ್ರೀ ಹಡಪದ ಅಪ್ಪಣ್ಣ ಅವರ ತತ್ವಾದರ್ಶಗಳು ಇಂದಿನ ಸಮಾಜಕ್ಕೂ ಪೂರಕವಾಗಿದ್ದು, ಪ್ರತಿಯೊಬ್ಬರೂ ಅವರ ವಿಚಾರಧಾರೆಗಳನ್ನು ತಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಮೋಹನಕುಮಾರಿ ಕರೆ ನೀಡಿದರು.
ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಬುಧವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಶ್ರೀ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.
ಜಗಜ್ಯೋತಿ ಬಸವಣ್ಣನವರ ಸಮಕಾಲೀನರಾಗಿದ್ದ ಹಡಪದ ಅಪ್ಪಣ್ಣನವರು ತಮ್ಮ 200ಕ್ಕೂ ಹೆಚ್ಚು ವಚನಗಳ ಮೂಲಕ ಸಮಾಜದಲ್ಲಿ ಮಹತ್ತರ ಬದಲಾವಣೆಗೆ ಮುನ್ನುಡಿ ಬರೆದವರು. ಸಮಾನತೆ, ಶ್ರಮ ಹಾಗೂ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಸಮಾಜ ಸುಧಾರಕರಾದ ಅವರ ಆದರ್ಶಗಳನ್ನು ಅಳವಡಿಸಿಕೊಂಡಾಗ ಮಾತ್ರ ಮಾನವ ಬದುಕು ಹಸನಾಗುತ್ತದೆ ಎಂದು ತಹಶೀಲ್ದಾರ್ ಬಣ್ಣಿಸಿದರು.
ಕಾರ್ಯಕ್ರಮದಲ್ಲಿ ಸವಿತಾ ಸಮಾಜದ ಮುಖಂಡರು ತಾಲೂಕು ಮಟ್ಟದ ಸಭೆ-ಸಮಾರಂಭಗಳನ್ನು ನಡೆಸಲು ಸಮುದಾಯ ಭವನದ ಕೊರತೆ ಇರುವ ಬಗ್ಗೆ ತಹಸೀಲ್ದಾರ್ ಅವರ ಗಮನಕ್ಕೆ ತಂದರು.
ಇದಕ್ಕೆ ಸ್ಪಂದಿಸಿದ ತಹಸೀಲ್ದಾರ್ ಮೋಹನಕುಮಾರಿ, ಪಟ್ಟಣ ಹಾಗೂ ತಾಲೂಕಿನಲ್ಲಿ ಸರ್ಕಾರಿ ಜಾಗದ ಅಭಾವದಿಂದ ಈ ಸಮಸ್ಯೆ ಉಂಟಾಗಿದೆ. ಇತ್ತೀಚೆಗೆ ಹಂಚೀಪುರ ಗ್ರಾಮದ ಬಳಿ ಆಸ್ಪತ್ರೆ ಹಾಗೂ ಅಗ್ನಿಶಾಮಕ ದಳದ ಕಚೇರಿಗಾಗಿ ಜಾಗ ಗುರುತಿಸಲಾಗಿದೆ. ಉಳಿದಿರುವ ಸರ್ಕಾರಿ ಜಾಗವನ್ನು ಪರಿಶೀಲಿಸಿ, ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಸಮುದಾಯ ಭವನಕ್ಕೆ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಹಾಲಪ್ಪ ಮಾತನಾಡಿ, “ಸಂಖ್ಯೆಯಲ್ಲಿ ಸಣ್ಣದಾದರೂ ಸಂಘಟಿತವಾಗಿ ಮತ್ತು ಸಮರ್ಪಣಾ ಮನೋಭಾವದಿಂದ ಕಾರ್ಯನಿರ್ವಹಿಸಿದರೆ ಸಮಾಜದ ಅಭಿವೃದ್ಧಿ ಸಾಧ್ಯ. ಹಡಪದ ಅಪ್ಪಣ್ಣರ ಸೇವಾ ಮನೋಭಾವ ಮತ್ತು ಶಿಕ್ಷಣದ ಮಹತ್ವವನ್ನು ಯುವಪೀಳಿಗೆ ಮೈಗೂಡಿಸಿಕೊಳ್ಳಬೇಕು” ಎಂದರು.
ಇದೇ ಸಂದರ್ಭದಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿನಿಯರಾದ ದಿವ್ಯಾ ಮತ್ತು ಪಲ್ಲವಿ ಅವರನ್ನು ತಾಲೂಕು ಆಡಳಿತದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಸವಿತಾ ಸಮಾಜದ ಅಧ್ಯಕ್ಷ ನರಸಿಂಹ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಚೈತ್ರ ಸ್ವಾಮಿ, ಗೌರವಾಧ್ಯಕ್ಷ ದಡದಹಳ್ಳಿ ಶ್ರೀನಿವಾಸ, ಟೌನ್ ಅಧ್ಯಕ್ಷ ಬಸವರಾಜು, ಪ್ರಧಾನ ಕಾರ್ಯದರ್ಶಿ ಜಿ. ಪ್ರಭಾಕರ್, ಯಜಮಾನರಾದ ಮುರಾರಿ, ಸಹ ಕಾರ್ಯದರ್ಶಿ ನಿಂಗರಾಜು, ಗಡಿ ಯಜಮಾನ ಚಂದ್ರಶೇಖರ, ಉಪಾಧ್ಯಕ್ಷ ಮುಳ್ಳೂರು ರವಿಕುಮಾರ್, ಖಜಾಂಚಿ ಕಾಳಶಟ್ಟಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕ ಗುಣಧರ್, ಶಿರಸ್ತೇದಾರ್ ಮನೋಹರ್, ರಾಜಸ್ವ ನಿರೀಕ್ಷಕ ರವಿಚಂದ್ರನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಮಾಜದ ಮುಖಂಡರು ಭಾಗವಹಿಸಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
