ಹಲವಾರು ದಿನಗಳ ನಿರಂತರ ಸಂಘರ್ಷದ ನಂತರ, ರಷ್ಯಾ ಗುರುವಾರ ಉಕ್ರೇನ್ (ರಷ್ಯಾ-ಉಕ್ರೇನ್ ಘರ್ಷಣೆ) ಮೇಲೆ ದಾಳಿ ಮಾಡಿತು. ರಷ್ಯಾದ ಸೇನೆ ಮತ್ತು ಉಕ್ರೇನಿಯನ್ ಸೈನಿಕರ ನಡುವಿನ ಸಂಘರ್ಷ ಮುಂದುವರಿದಿದೆ. ಇದೆಲ್ಲದರ ಮಧ್ಯೆ ಉಕ್ರೇನ್ ಬಿಕ್ಕಟ್ಟಿನ ಕುರಿತು ಗುರುವಾರ ರಾತ್ರಿ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ರಷ್ಯಾ ಅಧ್ಯಕ್ಷ ಪುಟಿನ್ ಅವರೊಂದಿಗೆ ಪ್ರಧಾನಿ ಮೋದಿ ಮಾತುಕತೆ ನಡೆಸಿದ ನಂತರ, ಪಿಎಂಒ ಈ ಮಾಹಿತಿಯನ್ನು ನೀಡಿದೆ.
‘ಉಕ್ರೇನ್ಗೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Russian President Vladimir Putin) ಪ್ರಧಾನಮಂತ್ರಿ ನರೇಂದ್ರ ಮೋದಿಗೆ ವಿವರಿಸಿದರು. ಈ ವೇಳೆ ರಷ್ಯಾ ಮತ್ತು ನ್ಯಾಟೋ (NATO) ನಡುವಿನ ಭಿನ್ನಾಭಿಪ್ರಾಯಗಳನ್ನು ಪ್ರಾಮಾಣಿಕ ಸಂವಾದದ ಮೂಲಕ ಮಾತ್ರ ಪರಿಹರಿಸಬಹುದು ಎಂಬ ತಮ್ಮ ದೀರ್ಘಕಾಲದ ನಂಬಿಕೆಯನ್ನು ಪ್ರಧಾನಿ ಪುನರುಚ್ಚರಿಸಿದರು ಎಂದು ಪಿಎಂಒ ತಿಳಿಸಿದೆ.
ಪಿಎಂಒ ಹೊರಡಿಸಿದ ಅಧಿಕೃತ ಹೇಳಿಕೆಯ ಪ್ರಕಾರ, ಹಿಂಸಾಚಾರವನ್ನು ತಕ್ಷಣವೇ ಕೊನೆಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ರಷ್ಯಾದ ಅಧ್ಯಕ್ಷರಿಗೆ ಮನವಿ ಮಾಡಿದರು ಮತ್ತು ರಾಜತಾಂತ್ರಿಕ ಮಾತುಕತೆಯ ಹಾದಿಗೆ ಮರಳಲು ಎಲ್ಲಾ ಪಕ್ಷಗಳು ಸಂಘಟಿತ ಪ್ರಯತ್ನಗಳನ್ನು ಮಾಡುವಂತೆ ಕರೆ ನೀಡಿದರು. ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯ ನಾಗರಿಕರ, ವಿಶೇಷವಾಗಿ ವಿದ್ಯಾರ್ಥಿಗಳ ಸುರಕ್ಷತೆಯ ಬಗ್ಗೆ ಭಾರತದ ಕಳವಳಗಳನ್ನು ಪ್ರಧಾನಿ ರಷ್ಯಾದ ಅಧ್ಯಕ್ಷರಿಗೆ ತಿಳಿಸಿದರು.
ಅವರ ಸುರಕ್ಷಿತ ನಿರ್ಗಮನ ಮತ್ತು ಭಾರತಕ್ಕೆ ಮರಳಲು ಭಾರತವು ಮೊದಲ ಆದ್ಯತೆ ನೀಡುತ್ತದೆ ಎಂದು ಪ್ರಧಾನಿ ಹೇಳಿದರು. ವರದಿಗಳ ಪ್ರಕಾರ, ಪ್ರಧಾನಿ ಮೋದಿ ಮತ್ತು ರಷ್ಯಾ ಅಧ್ಯಕ್ಷರ ನಡುವೆ ಸುಮಾರು 25 ನಿಮಿಷಗಳ ಕಾಲ ಮಾತುಕತೆ ನಡೆದಿದೆ.ಇದಕ್ಕೂ ಮುನ್ನ ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರು ಭದ್ರತೆ ಕುರಿತ ಸಂಪುಟ ಸಮಿತಿ ( ಸಿಸಿಎಸ್) ಮಹತ್ವದ ಸಭೆ ನಡೆಸಿದರು. ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ , ರಕ್ಷಣಾ ಸಚಿವ ರಾಜನಾಥ್ ಸಿಂಗ್ , ವಿದೇಶಾಂಗ ಸಚಿವ ಎಸ್ ಜೈಶಂಕರ್, ಎನ್ಎಸ್ಎ ಅಜಿತ್ ದೋವಲ್ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವು ಉನ್ನತ ಅಧಿಕಾರಿಗಳು ಭಾಗವಹಿಸಿದ್ದರು. ಸಭೆಯ ನಂತರ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪತ್ರಿಕಾಗೋಷ್ಠಿಯಲ್ಲಿ, ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸುವುದು ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ತಿಳಿಸಿದೆ.
ಪತ್ರಿಕಾಗೋಷ್ಠಿಯಲ್ಲಿ, ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ ಅವರು ಉಕ್ರೇನ್ನಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರಧಾನಿ ಮೋದಿ ಅವರ ಅಧ್ಯಕ್ಷತೆಯಲ್ಲಿ ಭದ್ರತೆಯ ಕ್ಯಾಬಿನೆಟ್ ಸಮಿತಿ ( ಸಿಸಿಎಸ್ ) ಸಭೆಯನ್ನು ನಡೆಸಲಾಯಿತು ಎಂದು ಹೇಳಿದರು. ಉಕ್ರೇನ್ನಲ್ಲಿರುವ ಭಾರತೀಯ ನಾಗರಿಕರನ್ನು ರಕ್ಷಿಸುವುದು ಮತ್ತು ಅವರನ್ನು ಭಾರತಕ್ಕೆ ಕರೆತರುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಪ್ರಧಾನ ಮಂತ್ರಿ ಸಿಸಿಎಸ್ ಸಭೆಯಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ.
ಉಕ್ರೇನ್ನಿಂದ ಪೋಲೆಂಡ್ ಮತ್ತು ಹಂಗೇರಿ ಮೂಲಕ ಭಾರತೀಯರನ್ನು ಸ್ಥಳಾಂತರಿಸಲಾಗುವುದು ಎಂದು ಶ್ರಿಂಗ್ಲಾ ಹೇಳಿದ್ದಾರೆ. ತೆರವು ಕಾರ್ಯವನ್ನು ಅತ್ಯಂತ ಎಚ್ಚರಿಕೆಯಿಂದ ನಿರ್ವಹಿಸುತ್ತೇವೆ ಎಂದರು. ಕೀವ್ನಿಂದ ಭಾರತೀಯ ನಾಗರಿಕರನ್ನು ಸ್ಥಳಾಂತರಿಸಲು ಮತ್ತು ಸುರಕ್ಷಿತ ಸ್ಥಳಗಳನ್ನು ತಲುಪಲು ರಸ್ತೆಗಳನ್ನು ಸಿದ್ಧಪಡಿಸಲಾಗಿದೆ ಎಂದವರು ಮಾಹಿತಿ ನೀಡಿದರು.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB