ಹೊಳೆನರಸೀಪುರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳು ಸಮಾಜದಲ್ಲಿ ಮಹಿಳೆಯರ ಸಬಲೀಕರಣಕ್ಕೆ ಪ್ರಮುಖ ಪಾತ್ರ ವಹಿಸುತ್ತಿದ್ದು, ಮಹಿಳೆಯರು ಈ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಕುಮಾರ್ ಕರೆ ನೀಡಿದ್ದಾರೆ.
ತಾಲ್ಲೂಕಿನ ಹಳ್ಳಿಮೈಸೂರು ಹೋಬಳಿಯ ನಗರನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಹಾಗೂ ತಾಲ್ಲೂಕು ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಾ, ಮಹಿಳೆಯರು ಆರ್ಥಿಕವಾಗಿ ಸದೃಢರಾದಾಗ ಮಾತ್ರ ಕುಟುಂಬ ಹಾಗೂ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಇದೇ ವೇಳೆ ಸಮಿತಿ ಸದಸ್ಯ ಹೆಚ್.ಆರ್. ಪ್ರಸನ್ನಕುಮಾರ್ ಮಾತನಾಡಿ, ನುಡಿದಂತೆ ನಡೆದ ಸರ್ಕಾರ ಯಾವುದಾದರೂ ಇದ್ದರೆ ಅದು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸರ್ಕಾರವಾಗಿದ್ದು, ಯೋಜನೆಗಳನ್ನು ಸಾಕಾರಗೊಳಿಸುವಲ್ಲಿ ಸರ್ಕಾರ ಸದಾ ಬದ್ಧವಾಗಿದೆ ಎಂದರು. ಅಲ್ಲದೆ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಡಿ ಬರುವ ಹಣವನ್ನು ಕೇವಲ ದೈನಂದಿನ ಖರ್ಚಿಗೆ ಬಳಸದೆ, ಸ್ವಲ್ಪ ಭಾಗವನ್ನು ಉಳಿತಾಯ ಮಾಡಿ ಸಣ್ಣಪುಟ್ಟ ಉದ್ಯಮಗಳನ್ನು ಆರಂಭಿಸುವ ಮೂಲಕ ಸ್ವಾವಲಂಬಿ ಜೀವನ ನಡೆಸಲು ಮುಂದಾಗಬೇಕು ಎಂದು ಸಲಹೆ ನೀಡಿದರು.
ಪ್ರಾಸ್ತಾವಿಕ ನುಡಿಯಲ್ಲಿ ಮಾತನಾಡಿದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು, ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳ ಬಗ್ಗೆ ಸಾರ್ವಜನಿಕರು ಸಂಪೂರ್ಣ ಮಾಹಿತಿ ಹೊಂದಿರಬೇಕು ಹಾಗೂ ಅವುಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಐವರು ಮುಖ್ಯಸ್ಥರು ಭಾಗವಹಿಸಿ ತಮ್ಮ ಇಲಾಖಾವಾರು ಪ್ರಗತಿ ವರದಿ ಮಂಡಿಸಿದರು. ಇದೇ ವೇಳೆ ರೈತ ಸಂಘದ ಮುಖಂಡರು ಹಾಗೂ ಗ್ರಾಮಸ್ಥರು ಸ್ಥಳೀಯ ಸಾರ್ವಜನಿಕ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಪರಿಹಾರ ಕಂಡುಕೊಂಡರು. ಕಾರ್ಯಕ್ರಮದಲ್ಲಿ ಸಮಿತಿ ಸದಸ್ಯರಾದ ಗೋವಿಂದರಾಜು, ರೇವಣ್ಣ ಸ್ವಾಮಿ, ಧರ್ಮೇಗೌಡ, ಶಿವರಾಜು ಸೇರಿದಂತೆ ಗ್ರಾಮದ ಪ್ರಮುಖರು ಹಾಗೂ ನೂರಾರು ಸಂಖ್ಯೆಯಲ್ಲಿ ಫಲಾನುಭವಿಗಳು ಉಪಸ್ಥಿತರಿದ್ದರು.
ವರದಿ: ಮಂಜು ಶ್ರವಣೂರು, ಹೊಳೆನರಸೀಪುರ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
