ಶಿರಾ (ತುಮಕೂರು): ತಾಲ್ಲೂಕಿನ ಲಕ್ಕನಹಳ್ಳಿ ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ಅಂತ್ಯಕ್ರಿಯೆಗಾಗಿ ಪ್ರತ್ಯೇಕ ಖಬರಸ್ಥಾನ (ಸ್ಮಶಾನ) ಮಂಜೂರು ಮಾಡುವಂತೆ ಒತ್ತಾಯಿಸಿ ಶನಿವಾರ ಮುಸ್ಲಿಂ ಬಾಂಧವರು ಪ್ರತಿಭಟನೆ ನಡೆಸಿದರು. ಈದ್ ಉಲ್ ಫಿತ್ರ್ ಹಬ್ಬದ ಸಾಮೂಹಿಕ ಪ್ರಾರ್ಥನೆಯ ನಂತರ ಒಗ್ಗೂಡಿದ ಸಮುದಾಯದ ಮುಖಂಡರು ಮತ್ತು ಗ್ರಾಮಸ್ಥರು ಸರ್ಕಾರದ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
ಲಕ್ಕನಹಳ್ಳಿಯಲ್ಲಿ ಮುಸ್ಲಿಮರಿಗೆ ಅಂತ್ಯಕ್ರಿಯೆ ನಡೆಸಲು ಹಕ್ಕುಬದ್ಧವಾದ ಜಾಗವಿಲ್ಲ. ಸದ್ಯಕ್ಕೆ ಸರ್ಕಾರಿ ಜಾಗವೊಂದನ್ನು ಇದಕ್ಕಾಗಿ ಬಳಸಲಾಗುತ್ತಿದೆ. ಆದರೆ, ಆ ಜಾಗದಲ್ಲಿ ರೈತರು ಕೃಷಿ ಮಾಡುತ್ತಿರುವುದರಿಂದ ಅಂತ್ಯಕ್ರಿಯೆ ನಡೆಸಲು ಪದೇ ಪದೇ ಅಡೆತಡೆಗಳು ಎದುರಾಗುತ್ತಿವೆ. ಮೃತರನ್ನು ಗೌರವಯುತವಾಗಿ ಬೀಳ್ಕೊಡಲು ಸಾಧ್ಯವಾಗುತ್ತಿಲ್ಲ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.
ಕೆಲ ದಿನಗಳ ಹಿಂದೆ ಸಾಲಬಾಧೆಯಿಂದ ತುಮಕೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಲಕ್ಕನಹಳ್ಳಿಯ ಒಂದೇ ಕುಟುಂಬದ ಐವರು ಸದಸ್ಯರ ಅಂತ್ಯಕ್ರಿಯೆ ಸಂದರ್ಭದಲ್ಲಿ ಈ ಸಮಸ್ಯೆ ತೀವ್ರವಾಗಿ ಕಾಡಿತ್ತು. ಸ್ವಗ್ರಾಮದಲ್ಲಿ ಸೂಕ್ತ ಸ್ಮಶಾನವಿಲ್ಲದ ಕಾರಣ, ಮೃತರ ಶವಗಳನ್ನು ಶಿರಾ ಪಟ್ಟಣಕ್ಕೆ ತೆಗೆದುಕೊಂಡು ಹೋಗಿ ಅಂತ್ಯಕ್ರಿಯೆ ಮಾಡಬೇಕಾಯಿತು. ಈ ಘಟನೆಯು ಗ್ರಾಮಸ್ಥರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಈಗಾಗಲೇ ಈ ಸಂಬಂಧ ಸ್ಥಳೀಯ ಶಾಸಕ ಟಿ.ಬಿ.ಜಯಚಂದ್ರ ಅವರಿಗೆ ಮನವಿ ಸಲ್ಲಿಸಲಾಗಿದೆ. ಅಲ್ಲದೆ, ಸಚಿವ ಜಮೀರ್ ಅಹಮದ್ ಖಾನ್ ಸೇರಿದಂತೆ ಸಮುದಾಯದ ಪ್ರಮುಖ ನಾಯಕರ ಗಮನಕ್ಕೆ ತಂದಿದ್ದರೂ ಇದುವರೆಗೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರರು ದೂರಿದ್ದಾರೆ.
ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಲಕ್ಕನಹಳ್ಳಿಯಲ್ಲಿ ಖಬರಸ್ಥಾನಕ್ಕೆ ಅಗತ್ಯವಿರುವ ಜಾಗವನ್ನು ಮಂಜೂರು ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


