ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ಪುನರಾಚನೆ ಕುರಿತಾದ ಚರ್ಚೆಗಳು ತೀವ್ರಗೊಂಡಿರುವ ಬೆನ್ನಲ್ಲೇ, ಗೃಹ ಸಚಿವ ಜಿ. ಪರಮೇಶ್ವರ್ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. “ರಾಜ್ಯಸಭೆ ಚುನಾವಣೆಗೂ ಸಚಿವ ಸಂಪುಟ ಪುನರ್ರಚನೆಗೂ ಯಾವುದೇ ಸಂಬಂಧವಿಲ್ಲ, ಈ ಎರಡೂ ಪ್ರಕ್ರಿಯೆಗಳು ಸಂಪೂರ್ಣವಾಗಿ ಬೇರೆ ಬೇರೆಯಾಗಿ ನಡೆಯಲಿವೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ರಾಜ್ಯಸಭೆ ಚುನಾವಣೆಯ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯನ್ನು ಪಕ್ಷದ ಹೈಕಮಾಂಡ್ ಹಾಗೂ ಮುಖ್ಯಮಂತ್ರಿಗಳು ನಿರ್ಧರಿಸುತ್ತಾರೆ. ಅದು ಒಂದು ನಿಯಮಿತ ಪ್ರಕ್ರಿಯೆಯಾಗಿದೆ. ಹಾಗಾಗಿ, ಸಚಿವ ಸಂಪುಟ ಪುನರಾಚನೆ ನಿರ್ಧಾರಕ್ಕೂ ಅದಕ್ಕೂ ಯಾವುದೇ ಲಿಂಕ್ ಇಲ್ಲ” ಎಂದರು. ಜೂನ್ 18ರಂದು ಕರ್ನಾಟಕದ ನಾಲ್ಕು ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ಸಂಪುಟ ಬದಲಾವಣೆ ಆಗಬಹುದು ಎಂಬ ರಾಜಕೀಯ ವಲಯದ ಊಹಾಪೋಹಗಳಿಗೆ ಅವರು ಈ ಮೂಲಕ ತೆರೆ ಎಳೆದಿದ್ದಾರೆ.
ಮೂರು–ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಚಿವ ಸ್ಥಾನಕ್ಕಾಗಿ ಒತ್ತಾಯಿಸುತ್ತಿರುವ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, “ಹಿರಿಯ ಶಾಸಕರು ಸಚಿವ ಸ್ಥಾನ ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ. ಅವರಿಗೆ ಅದಕ್ಕೆ ತಕ್ಕ ಸಾಮರ್ಥ್ಯವೂ ಇದೆ. ಆದರೆ, ಸಚಿವ ಸಂಪುಟ ರಚನೆಯಲ್ಲಿ ಶೇಕಡಾ 15 ರಷ್ಟು ಮಾತ್ರ ಸಚಿವರನ್ನು ಸೇರಿಸಿಕೊಳ್ಳಲು ಮಿತಿ ಇರುವುದರಿಂದ ಎಲ್ಲರಿಗೂ ಒಂದೇ ಬಾರಿಗೆ ಅವಕಾಶ ನೀಡಲು ಸಾಧ್ಯವಾಗುವುದಿಲ್ಲ” ಎಂದು ಅಸಹಾಯಕತೆ ವ್ಯಕ್ತಪಡಿಸಿದರು.
ತಮ್ಮ ಖಾತೆ ಬದಲಾವಣೆ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ್, “ನಾನು ಕಳೆದ ಎಂಟು ವರ್ಷಗಳಿಂದ ಗೃಹ ಖಾತೆಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿದ್ದೇನೆ. ಈ ಬಗ್ಗೆ ನನಗೆ ಯಾವುದೇ ಬೇಸರವಾಗಲಿ, ನಿರಾಸೆಯಾಗಲಿ ಇಲ್ಲ. ನನಗೆ ಹೈಕಮಾಂಡ್ ಯಾವ ಖಾತೆ ನೀಡಿದರೂ ಅದನ್ನು ನಿಭಾಯಿಸುವ ಶಕ್ತಿ ನನಗಿದೆ. ಇನ್ನು ದೊಡ್ಡ ಜವಾಬ್ದಾರಿಯನ್ನು ಹೊರುವ ಸಾಮರ್ಥ್ಯ ಮತ್ತು ಆತ್ಮವಿಶ್ವಾಸ ನನ್ನಲ್ಲಿದೆ” ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


