ಬೆಂಗಳೂರು: ಖ್ಯಾತ ಸಾಹಿತಿ, ಹಿರಿಯ ಕತೆಗಾರ ಪ್ರೊ.ಮೊಗಳ್ಳಿ ಗಣೇಶ್ (64) ಭಾನುವಾರ ಅನಾರೋಗ್ಯದಿಂದ ಮನೆಯಲ್ಲಿ ನಿಧನರಾದರು. ಇವರು ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಹಂಪಿ ಕನ್ನಡ ವಿಶ್ವವಿದ್ಯಾಲಯ ಸುಮಾರು 28 ವರ್ಷ ಪ್ರಾಧ್ಯಾಪಕರಾಗಿದ್ದ ಮೊಗಳ್ಳಿ ಗಣೇಶ್ ತಮ್ಮ ವಿಶಿಷ್ಟ ಶೈಲಿಯ ಕಥೆಗಳ ಮೂಲಕ ಅವರು ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದವರು.
ಹಂಪಿಯ ಕನ್ನಡ ವಿಶ್ವವಿದ್ಯಾನಿಲಯದಲ್ಲಿ ಸೇವೆ ಸಲ್ಲಿಸಿದ್ದ ಅವರು ‘ಸೂರ್ಯನನ್ನು ಬಚ್ಚಿಡಬಹುದೆ?’ ಮತ್ತು ‘ಅನಾದಿ’ ಕಾವ್ಯ ಸಂಕಲನಗಳ ಮೂಲಕ ಹೆಸರು ಮಾಡಿದರು.
ಪ್ರಬಲ ದಲಿತ ಚಿಂತಕರಾಗಿದ್ದ ಅವರು ದೇಶದ ಪ್ರತಿಷ್ಠತ ವಿಶ್ವವಿದ್ಯಾಲಯಗಳಿಗೆ ಆಹ್ವಾನಿತರಾಗಿ ಹೋಗುತ್ತಿದ್ದರು. ಹಂಪಿ ವಿಶ್ವವಿದ್ಯಾಲಯದಲ್ಲಿ ಜಾನಪದ ಅಧ್ಯಯನ ವಿಭಾಗದ ಮುಖ್ಯಸ್ಥರಾಗಿದ್ದ ಇವರು ಸದ್ಯ ಹಾವೇರಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯರಾಗಿದ್ದರು.
ಬುಗುರಿ, ಮಣ್ಣು, ಅತ್ತೆ, ಭೂಮಿ, ಕನ್ನೆಮಳೆ, ದೇವರ ದಾರಿ, ಮೊಗಳ್ಳಿ ಕಥೆಗಳು (ಆವರೆಗಿನ ಬಹುಪಾಲು ಕಥೆಗಳ ಸಂಕಲನ) ಮುಂತಾದವು ಮೊಗಳ್ಳಿ ಗಣೇಶ್ ಅವರ ಕಥಾ ಸಂಕಲನಗಳು. ತೊಟ್ಟಿಲು, ಕಿರೀಟ ಅವರ ಕಾದಂಬರಿಗಳು. ‘ಬೇರು’ ಅವರ ಬೃಹತ್ ಕಾದಂಬರಿ. ‘ಕಥನ’ ಅವರ ಪ್ರಬಂಧ ಸಂಕಲನ. ‘ಸೊಲ್ಲು’, ‘ವಿಮರ್ಶೆ’, ‘ಶಂಬಾ ಭಾಷಿಕ ಸಂಶೋಧನೆ’, ‘ತಕರಾರು’ ಅವರ ವಿಮರ್ಶಾ ಕೃತಿಗಳು. ‘ವಿಶ್ಲೇಷಣೆ’ ಎಂಬ ಅಂಕಣ ಕೂಡಾ ಜನಪ್ರಿಯ. ‘ಅಂಬೇಡ್ಕರ್ ಎಂಬ ಮಹಾನದಿ ಮತ್ತು ದಲಿತೀಕರಣಗೊಂಡ ಗಾಂಧೀಜಿ’ ಅವರ ಚಿಂತನ ಕೃತಿ. ಗಣೇಶ್ ಇತರ ಭಾಷೆಗಳ ಕೃತಿಗಳನ್ನು ಕನ್ನಡಕ್ಕೆ ತಂದರೆ, ಅವರ ಅನೇಕ ಬರಹಗಳು ಇತರ ಭಾಷೆಗಳಿಗೆ ಅನುವಾದಗೊಂಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC