ಸರಗೂರು: ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಬೆಟ್ಟದ ತಾಯಿ ಚಿಕ್ಕ ದೇವಮ್ಮ ಬೆಟ್ಟದಲ್ಲಿ ಆಷಾಢ ಅಮಾವಾಸ್ಯೆ ಅಂಗವಾಗಿ ಮಂಗಳವಾರದಂದು ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಅತ್ಯಂತ ಭಕ್ತಿಭಾವದಿಂದ ನೆರವೇರಿದವು.
ಆಷಾಢ ಅಮಾವಾಸ್ಯೆಯ ಹಿನ್ನೆಲೆಯಲ್ಲಿ ಬೆಟ್ಟದ ತಾಯಿ ಚಿಕ್ಕ ದೇವಮ್ಮನ ದರ್ಶನ ಪಡೆದರೆ ಕಷ್ಟಗಳು ನಿವಾರಣೆಯಾಗುತ್ತವೆ ಎಂಬ ದೃಢ ನಂಬಿಕೆಯಿಂದಾಗಿ, ಬೆಳಗ್ಗೆಯಿಂದಲೇ ದೇವಾಲಯಕ್ಕೆ ಸಹಸ್ರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು. ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಮಹಿಳೆಯರು, ಯುವಕರು ಹಾಗೂ ಕುಟುಂಬ ಸಮೇತ ಬಂದಿದ್ದ ಭಕ್ತಾದಿಗಳು ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ತಮ್ಮ ಇಷ್ಟಾರ್ಥಗಳ ಸಿದ್ಧಿಗಾಗಿ ಪ್ರಾರ್ಥಿಸಿದರು.
ದೇವಾಲಯದ ಅರ್ಚಕರು ದೇವಿಗೆ ವಿಶೇಷ ಅಭಿಷೇಕ, ಅಲಂಕಾರ ಹಾಗೂ ಮಹಾಮಂಗಳಾರತಿ ನೆರವೇರಿಸಿದರು. ಪೂಜಾ ಕಾರ್ಯಕ್ರಮಗಳ ಬಳಿಕ ಭಕ್ತರಿಗೆ ತೀರ್ಥ-ಪ್ರಸಾದ ವಿತರಣೆ ಮಾಡಲಾಯಿತು. ದಿನವಿಡೀ ಭಕ್ತರ ದಟ್ಟಣೆ ಹೆಚ್ಚಾಗಿದ್ದರಿಂದ, ಯಾವುದೇ ಅಹಿತಕರ ಘಟನೆ ನಡೆಯದಂತೆ ಅಗತ್ಯ ಮುನ್ನೆಚ್ಚರಿಕೆ ಹಾಗೂ ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸಲಾಗಿತ್ತು.
ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಚಿಕ್ಕದೇವಮ್ಮ ದೇವಸ್ಥಾನದ ಪಾರುಪತ್ತೇದಾರ ಮಹದೇವಸ್ವಾಮಿ, ಮುಖಂಡರಾದ ಪುರದಕಟ್ಟೆ ಬಸವರಾಜು, ಚಿಕ್ಕದೇವಣ್ಣ (ಉಪ್ಪಿ), ಶಿವಕುಮಾರ್, ವೀರಣ್ಣ, ದೇವಣ್ಣ, ಮನೋಹರ್, ನಿಂಗರಾಜು, ಮಣಿ, ಸಿದ್ದಲಿಂಗಸ್ವಾಮಿ, ಮಹದೇವಸ್ವಾಮಿ, ನಿಂಗಣ್ಣ, ರವಿ, ವಿನಯ್, ಸೋಮಶೇಖರ್, ಶ್ರೀಕಂಠ ಪ್ರಸಾದ್ ಸೇರಿದಂತೆ ಪ್ರಮುಖರು ಹಾಗೂ ನೂರಾರು ಭಕ್ತಾದಿಗಳು ಪಾಲ್ಗೊಂಡಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


