ತುಮಕೂರು: ಎಸ್ ಡಿಪಿಐ, ಪಿಎಫ್ ಐ ಸಂಘಟನೆಗಳಿಗೆ ಅಂತಾರಾಷ್ಟ್ರೀಯ ಉಗ್ರ ಸಂಘಟನೆಗಳೊಂದಿಗೆ ಸಂಪರ್ಕವಿದ್ದು, ಇಂತಹ ಸಂಘಟನೆಗಳಿಗೆ ಕಾಂಗ್ರೆಸ್ ಪಕ್ಷ ಬೆಂಬಲವಾಗಿ ನಿಂತಿದೆ ಎಂದು ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್ ಗಂಭೀರ ಆರೋಪ ಮಾಡಿದ್ದಾರೆ.
ತುಮಕೂರು ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವು ದಿನಗಳ ಹಿಂದೆ ಶಿವಮೊಗ್ಗ ನಗರದ ಹಿಂದೂ ಪರ ಸಂಘಟನೆಯ ಕಾರ್ಯಕರ್ತ ಹರ್ಷ ಹತ್ಯೆ ಆರೋಪಿಗಳನ್ನು ಬಂಧಿಸುವ ಮೂಲಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರವು ಜನರಲ್ಲಿ ವಿಶ್ವಾಸ ಮೂಡಿಸಿದೆ ಎಂದರು.
ಬಿಜೆಪಿ ಪಕ್ಷದ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆಯನ್ನು ಇಟ್ಟುಕೊಂಡು ಕಾಂಗ್ರೆಸ್ ಇಡೀ ಸದನವನ್ನು ಹಾಗೂ ಸದನದ ಕಾರ್ಯಕಲಾಪಗಳನ್ನು ನಡೆಯಲು ಬಿಡದೆ ತಮ್ಮ ಮೊಂಡುತನ ಪ್ರದರ್ಶನ ಮಾಡುವ ಮೂಲಕ ಇಡೀ ಅಧಿವೇಶನದ ಕಲಾಪವನ್ನು ಹಾಳುಮಾಡಿದ್ದಾರೆ . ರಾಜ್ಯದ ಅಭಿವೃದ್ಧಿ ಪರವಾಗಿ ಸಾಕಷ್ಟು ವಿಚಾರಗಳನ್ನು ಚರ್ಚಿಸ ಬೇಕಿತ್ತು. ಆದರೆ ಕೇವಲ ಒಂದು ವಿಚಾರವನ್ನು ಇಟ್ಟುಕೊಂಡು ಅಧಿವೇಶನವನ್ನು ನಡೆಯಲು ಬಿಡದೆ ಧರಣಿ ನಡೆಸಿ ಅಧಿವೇಶನವನ್ನು ಹಾಳುಮಾಡಿದ್ದಾರೆ. ಹೀಗಾದರೆ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳನ್ನು ಸರ್ಕಾರ ಹೇಗೆ ಮಾಡಲು ಸಾಧ್ಯವಾಗುತ್ತದೆ ಎಂದು ಕಾಂಗ್ರೆಸ್ ನಾಯಕರಿಗೆ ಪ್ರಶ್ನಿಸಿದ್ದಾರೆ.
ಜನವಿರೋಧಿ, ಸದನ ವಿರೋಧಿ, ಭಯೋತ್ಪಾದಕರ ಮತ್ತು ಉಗ್ರರ ಪರ ಇರುವ ಕಾಂಗ್ರೆಸ್ ಪಕ್ಷದ ವಿರುದ್ಧ ಇದೇ 27 ಮತ್ತು 28ರಂದು ರಾಜ್ಯಾದ್ಯಂತ ದೊಡ್ಡ ಮಟ್ಟದ ಹೋರಾಟ ಹಮ್ಮಿಕೊಂಡಿದ್ದೇವೆ ಎಂದರು.
ಎಸ್ ಡಿಪಿಐ, ಪಿಎಫ್ ಐ ಸಂಘಟನೆಗಳು ಕಾಂಗ್ರೆಸ್ ಪಕ್ಷದ ಕೂಸು. ಕಾಂಗ್ರೆಸ್ ನ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಂಘಟನೆಗಳ ವಿರುದ್ಧ ಇದ್ದ ಪ್ರಕರಣಗಳನ್ನು ಹಿಂದಕ್ಕೆ ಪಡೆದಿದ್ದಾರೆ. ಇದರಿಂದ ಈ ಸಂಘಟನೆಗಳು ಹೆಚ್ಚು ಸಕ್ರಿಯವಾಗಿದೆ ಎಂದು ಆರೋಪಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಲಕ್ಷ್ಮೀಶ್, ಟುಡಾ ಅಧ್ಯಕ್ಷ ಬಾವಿಕಟ್ಟೆ ನಾಗಣ್ಣ, ಪ್ರಧಾನ ಕಾರ್ಯದರ್ಶಿ ಹೆಬ್ಬಾಕ ರವಿ, ಉಪಾಧ್ಯಕ್ಷ ಹುಚ್ಚಯ್ಯ, ಮತ್ತು ಪಕ್ಷದ ಮುಖಂಡರು ಇದ್ದರು.
ವರದಿ: ಮಾರುತಿ ಪ್ರಸಾದ್, ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB