ಬೆಂಗಳೂರು: ಗ್ಯಾರಂಟಿ ಯೋಜನೆಗಳ ಕ್ಯಾಲೆಂಡರ್ ನ್ನು ಮುಂದಿನ ಬಜೆಟ್ ಅಧಿವೇಶನದಲ್ಲಿ ಬಿಡುಗಡೆ ಮಾಡಿ, ಹಣ ಜಮಾ ಮಾಡುವ ದಿನಾಂಕ ನಿಗದಿ ಮಾಡಿ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಸಮಯಕ್ಕೆ ಸರಿಯಾಗಿ ಫಲಾನುಭವಿಗಳಿಗೆ ಡಿಬಿಟಿ ವರ್ಗಾವಣೆಯನ್ನು ಖಚಿತಪಡಿಸಬೇಕೆಂದು ಒತ್ತಾಯಿಸಿರುವ ಅವರು, ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ.
ಗ್ಯಾರಂಟಿ ಯೋಜನೆಯ ಹಣ ಬಿಡುಗಡೆ ವಿಳಂಬ ಸಾಕು, ಕಾರಣ ಬೇಡ, ಕಟಾ ಕಟ್ ಹಣ ವರ್ಗಾಯಿಸಿ ಎಂದು ಆಗ್ರಹಿಸಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಗೃಹಲಕ್ಷ್ಮಿ ಮತ್ತು ಯುವ ನಿಧಿ ಸೇರಿದಂತೆ 5 ಗ್ಯಾರಂಟಿ ಯೋಜನೆಗಳ ಭರವಸೆಯೊಂದಿಗೆ ಅಧಿಕಾರಕ್ಕೆ ಏರಿತ್ತು. ಪ್ರತಿ ತಿಂಗಳು ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡುವುದಾಗಿ ಹೇಳಿತ್ತು ಎಂದಿದ್ದಾರೆ.
ಮುಖ್ಯಮಂತ್ರಿಗಳು ಹಾಗೂ ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯನವರು 4 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ರೂಪಿಸುವಲ್ಲಿ ನಿರತರಾಗಿದ್ದಾರೆ. ವಿಪರ್ಯಾಸವೆಂದರೆ, ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಹಣಕ್ಕಾಗಿ 3-4 ತಿಂಗಳು ಕಾಯಬೇಕಾಗಿದೆ. ಯಾವುದಾದರೂ ಚುನಾವಣೆಗಳು ಸಮೀಪಿಸಿದಾಗ ಮಾತ್ರ ಮ್ಯಾಜಿಕ್ ಆಗಿ ಹಣ ಜಮವಾಗುತ್ತದೆ ಎಂದು ಅವರು ಟೀಕಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4