ಶಿವಮೊಗ್ಗ: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ವತಿಯಿಂದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ನೀಟ್–ಯುಜಿ 2026) ಯು ನಗರದಲ್ಲಿ ಜೂನ್ 21 ರಂದು ಮಧ್ಯಾಹ್ನ 2 ರಿಂದ ಸಂಜೆ 05.15 ರವರೆಗೆ ನಡೆಯಲಿದ್ದು ಪರೀಕ್ಷೆ ಯಶಸ್ವಿಯಾಗಿ ನಡೆಯಲು ಅಗತ್ಯವಾದ ಸಕಲ ಸಿದ್ದತೆ ಹಾಗೂ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.
ಜಿಲ್ಲಾಡಳಿತ ಕಚೇರಿಯಲ್ಲಿ ಶುಕ್ರವಾರ ನೀಟ್(ಯುಜಿ)–2026 ಪರೀಕ್ಷೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಶಿವಮೊಗ್ಗ ನಗರದ ಒಟ್ಟು 14 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಆಯೋಜಿಸಲಾಗಿದೆ. ಒಟ್ಟು 4832 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು ಪರೀಕ್ಷೆಯನ್ನು ಪಾರದರ್ಶಕವಾಗಿ ಮತ್ತು ಸುಸೂತ್ರವಾಗಿ ನಡೆಸಲು ಜಿಲ್ಲಾಡಳಿತವು ಎಲ್ಲಾ ರೀತಿಯ ಪೂರ್ವಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದರು.
ನಿಷೇಧಾಜ್ಞೆ ಜಾರಿ: ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಭದ್ರತೆ ಕೈಗೊಳ್ಳುವ ಹಿನ್ನೆಲೆಯಲ್ಲಿ ಮಧ್ಯಾಹ್ನ 1 ರಿಂದ ಸಂಜೆ 6 ಗಂಟೆವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ರ ಕಲಂ 163 ರನ್ವಯ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.
ಬಿಗಿ ಭದ್ರತೆ: ಪ್ರತಿ ಕೇಂದ್ರಕ್ಕೆ ಒಬ್ಬರಂತೆ ಡ್ಯೂಟಿ ಮ್ಯಾಜಿಸ್ಟ್ರೇಟ್ ರನ್ನು ನೇಮಕ ಮಾಡಲಾಗಿದೆ. ಪರೀಕ್ಷಾ ಅಕ್ರಮ ತಡೆಯಲು ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆಯಲಾಗಿದ್ದು, ಸೂಕ್ತ ಭದ್ರತೆ ಒದಗಿಸಲಾಗುವುದು.
ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಅಗತ್ಯ ಸಿಬ್ಬಂದಿಯನ್ನು ನೇಮಕ ಮಾಡಿಕೊಂಡು ತರಬೇತಿ ನೀಡಿದ್ದಾರೆ. ಪರೀಕ್ಷಾ ಕಾರ್ಯಕ್ಕೆ ನೇಮಿಸಲ್ಪಟ್ಟಿರುವ ಅಧಿಕಾರಿ ಮತ್ತು ಸಿಬ್ಬಂದಿಗಳು ಪರೀಕ್ಷಾ ಮಾರ್ಗಸೂಚಿಯಂತೆ ಕರ್ತವ್ಯ ನಿರ್ವಹಿಸಲು ಮತ್ತು ಪರೀಕ್ಷಾ ದಿನದಂದು ಸಂಬಂಧಪಟ್ಟ ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 9.30 ಕ್ಕೆ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ತಿಳಿಸಲಾಗಿದೆ ಎಂದರು.
ಪರೀಕ್ಷೆಯ ಅವಧಿಯಲ್ಲಿ ಯಾವುದೇ ಅಡಚಣೆಯಿಲ್ಲದೆ ನಿರಂತರ ವಿದ್ಯುತ್ ಪೂರೈಸಲು ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಪರೀಕ್ಷಾರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಅಗತ್ಯ ಆಸನ ಮತ್ತು ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಸೂಚಿಸಿದ ಅವರು, ಕೇಂದ್ರದೊಳಗೆ ಮೊಬೈಲ್, ಪುಸ್ತಕ, ಬ್ಯಾಗ್, ಪರ್ಸ್, ಎಲೆಕ್ಟ್ರಾನಿಕ್ಸ್ ಉಪಕರಣಗಳು ಹಾಗೂ ಸ್ಮಾರ್ಟ್ ವಾಚ್ಗಳು, ಪೆನ್, ಪೆನ್ಸಿಲ್ ಸೇರಿದಂತೆ ಮಾರ್ಗಸೂಚಿಯನ್ವಯ ವಸ್ತುಗಳನ್ನು ತರುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಹಾಗೂ ಪರೀಕ್ಷಾ ಕೇಂದ್ರಕ್ಕೆ ಅನಧಿಕೃತ ವ್ಯಕ್ತಿಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದ್ದು, ನಿಯೋಜಿತ ಸಿಬ್ಬಂದಿ ಮಾತ್ರ ಹಾಜರಿರಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದರು.
ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲರು ಹಾಗೂ ಎನ್ಟಿಎ ಸಿಟ್ಟಿಂಗ್ ನೋಡಲ್ ಅಧಿಕಾರಿ ರೇಖಾ ಜೋಷಿ ಮಾತನಾಡಿ ಪರೀಕ್ಷಾ ಕಾರ್ಯ ನಿಯೋಜಿಸಲ್ಪಟ್ಟ ಪರಿವೀಕ್ಷಕರು ಸಮರ್ಪಕವಾಗಿ ಮಾರ್ಗಸೂಚಿಯಂತೆ ತರಬೇತಿ ಹೊಂದಬೇಕು. ಅಭ್ಯರ್ಥಿಗಳು ಯಾವುದೇ ಗೊಂದಲ, ಆತಂಕಕ್ಕೆ ಎಡೆ ಮಾಡದೇ ಸಮಾಧಾನದಿಂದ ಪರೀಕ್ಷೆ ಬರೆಯಲು ಅನುವು ಮಾಡಿಕೊಡಬೇಕು. ವಿಕಲಚೇತನ ಅಭ್ಯರ್ಥಿಗಳಿಗೆ ಒಂದು ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿದ್ದು ಒಂದು ಗಂಟೆ ಹೆಚ್ಚಿನ ಸಮಯಾವಕಾಶ ನೀಡಲಾಗಿದೆ ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಮಾತನಾಡಿ, ಅಭ್ಯರ್ಥಿಗಳು, ಪರೀಕ್ಷೆ ನಿಯೋಜಿತ ಅಧಿಕಾರಿ, ನೌಕರರು ಪರೀಕ್ಷೆಗೆ ಹಾಜರಾಗಬೇಕಾದ ಸಮಯ, ಅನುಸರಿಸಬೇಕಾದ ಮಾರ್ಗಸೂಚಿಗಳ ಬಗ್ಗೆ ವಿವರಿಸಿದರು.
ಪರೀಕ್ಷೆಗೆ ಹಾಜರಾಗುವ ಎಲ್ಲಾ ಅಭ್ಯರ್ಥಿಗಳು ಈ ಕೆಳಗಿನ ಸೂಚನೆಗಳನ್ನು ಗಮನಿಸಲು ಸೂಚಿಸಲಾಗಿದೆ:
ಪಾರದರ್ಶಕ ನೀರಿನ ಬಾಟಲಿಗಳು: ಎಲ್ಲಾ ಅಭ್ಯರ್ಥಿಗಳು ಪಾರದರ್ಶಕವಾದ ನೀರಿನ ಬಾಟಲಿಗಳನ್ನು ತೆಗೆದುಕೊಂಡು ಹೋಗಬಹುದು.
ಧಾರ್ಮಿಕ ವಸ್ತುಗಳು: ಅಭ್ಯರ್ಥಿಗಳು ತಮ್ಮ ಧಾರ್ಮಿಕ ನಂಬಿಕೆಯ ವಸ್ತುಗಳನ್ನು ಅಥವಾ ಆಭರಣಗಳನ್ನು ಧರಿಸಲು ಅನುಮತಿಯಿದೆ. ಆದರೆ, ತಪಾಸಣೆಗೆ ಅನುಕೂಲವಾಗುವಂತೆ ಪರೀಕ್ಷಾ ಕೇಂದ್ರಕ್ಕೆ ಸಾಕಷ್ಟು ಮುಂಚಿತವಾಗಿಯೇ ವರದಿ ಮಾಡಿಕೊಳ್ಳಬೇಕು.
ಉಡುಪುಗಳು : ಹಗುರವಾದ ಬಟ್ಟೆಗಳನ್ನು ಧರಿಸಲು ಆದ್ಯತೆ ನೀಡಲಾಗುತ್ತದೆ. ಆದಾಗ್ಯೂ, ಅಭ್ಯರ್ಥಿಗಳಿಗೆ ಅಗತ್ಯವೆನಿಸಿದರೆ ಪೂರ್ಣ ತೋಳಿನ ಬಟ್ಟೆಗಳನ್ನು (ಫುಲ್ ಸ್ಲೀವ್ಸ್) ಅಥವಾ ಉಣ್ಣೆಯ ಬಟ್ಟೆಗಳನ್ನು ಧರಿಸಲು ಅನುಮತಿಯಿದೆ. ಆದರೆ, ತಪಾಸಣೆಗೆ ಸಹಕರಿಸಲು ಕೇಂದ್ರಕ್ಕೆ ಸಾಕಷ್ಟು ಮುಂಚಿತವಾಗಿ ತಲುಪಬೇಕು.
ಪಾದರಕ್ಷೆಗಳು: ಚಪ್ಪಲಿಗಳು ಮತ್ತು ಕಡಿಮೆ ಹೀಲ್ಸ್ ಇರುವ ಪಾದರಕ್ಷೆಗಳನ್ನು( ಲೋ ಹೀಲ್ಸ್) ಧರಿಸಲು ಆದ್ಯತೆ ನೀಡಲಾಗುತ್ತದೆ.
ಸಹಾಯವಾಣಿ ಮತ್ತು ಸಂಪರ್ಕ ಮಾಹಿತಿ: NEET (UG)-2026 ಗೆ ಸಂಬಂಧಿಸಿದ ಹೆಚ್ಚಿನ ಸ್ಪಷ್ಟೀಕರಣಕ್ಕಾಗಿ, ಅಭ್ಯರ್ಥಿಗಳು ದೂರವಾಣಿ ಸಂಖ್ಯೆ: 011-40759000 / 011-69227700 ಅಥವಾ ಇಮೇಲ್ neetug2026@nta.ac.in ಮೂಲಕ ಸಂಪರ್ಕಿಸಬಹುದು.
ಪರೀಕ್ಷೆಯ ಸುಗಮ ನಿರ್ವಹಣೆಗಾಗಿ ಅಭ್ಯರ್ಥಿಗಳು ಮೇಲಿನ ಸಲಹೆಗಳನ್ನು ಪಾಲಿಸಲು ಮತ್ತು ಪರೀಕ್ಷಾ ಸಿಬ್ಬಂದಿಯೊಂದಿಗೆ ಸಹಕರಿಸಬೇಕೆಂದು ವಿನಂತಿಸಿದರು.
ಸಭೆಯಲ್ಲಿ ಡಿಡಿಪಿಯು, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಐಎಸ್ಎಫ್ ಅಧಿಕಾರಿ, ಪರೀಕ್ಷೆಗೆ ನಿಯೋಜಿಸಲಾದ ಅಧಿಕಾರಿಗಳು ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


