ಸಿರಾ: ರಾಜ್ಯದ ಪ್ರತಿಯೊಂದು ತಾಲೂಕಿನ ಹೋಬಳಿ ಕೇಂದ್ರಗಳಿಗೆ ವಿವಿಧ ಇಲಾಖೆಯ ಅಧಿಕಾರಿಗಳನ್ನು ವಾರಕ್ಕೊಮ್ಮೆ ಕರೆಯೊಯ್ದು ಸ್ಥಳದಲ್ಲಿಯೇ ಸಮಸ್ಯೆಗಳನ್ನು ಇತ್ಯರ್ಥಪಡಿಸುವ ಮಹತ್ವದ ಕಾರ್ಯಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ ಎಂದು ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದರು.
ಅವರು ತಾಲೂಕಿನ ಗೂಡಗೆರೆ ಗ್ರಾಪಂ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ನಡೆದ ಪ್ರಜಾಸೇವಾ ಆಂದೋಲನ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ತಾಲೂಕಿನ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸದಿದ್ದಲ್ಲಿ ಕಠಿಣ ಕ್ರಮ ಅನಿವಾರ್ಯವಾಗುತ್ತದೆ ಎಂದರು.
ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾರೋಗೆರೆ ಮಹೇಶ್ ಮಾತನಾಡಿ, ಸರ್ಕಾರವೇ ಜನರ ಬಳಿಗೆ ಬಂದಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು. ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು ಎಂದರು.
ಗೌಡಗೆರೆ ಗ್ರಾಪಂ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ನಡೆದ ಪ್ರಜಾಸೇವಾ ಆಂದೋಲನ ಸಭೆಯಲ್ಲಿ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಪಾಲ್ಗೊಂಡರು.
ಸಕಾಲಿ, ಜನಸ್ಪಂದನ ಒಟ್ಟುಗೂಡಿಕೆ ಪ್ರಜಾಸೇವಾ ಆಂದೋಲನ:
ರಾಜ್ಯ ಸರ್ಕಾರವು ಹಿಂದೆ ಇದ್ದ ಸಕಾಲಿ ಮತ್ತು ಜನಸ್ಪಂದನ ವ್ಯವಸ್ಥೆಗಳನ್ನು ಒಟ್ಟುಗೂಡಿಸಿ, ಸಾರ್ವಜನಿಕ ಸೇವೆಗಳನ್ನು ಇನ್ನಷ್ಟು ಸುಲಭಗೊಳಿಸಲು ಪ್ರಜಾಸೇವಾ ಇಲಾಖೆ ಎಂಬ ಹೊಸ ಇಲಾಖೆಯನ್ನು ಆರಂಭಿಸಿದೆ. ಸಾರ್ವಜನಿಕರ ಸಮಸ್ಯೆಗಳಿಗೆ ಇನ್ನು ಮುಂದೆ ಈ ಇಲಾಖೆ ಪ್ರಾಮಾಣಿಕವಾಗಿ ಸ್ಪಂದಿಸಲಿದೆ. ಪ್ರತಿ ಶನಿವಾರ ಹೋಬಳಿ ಮಟ್ಟದಲ್ಲಿ ಈ ಪ್ರಜಾಸೇವಾ ಸಭೆಗಳು ನಡೆಯಲಿವೆ ಎಂದು ಟಿ.ಬಿ.ಜಯಚಂದ್ರ ತಿಳಿಸಿದರು.
ಕಂದಾಯ ಇಲಾಖೆಯಲ್ಲಿ ಜಮೀನು ಮಂಜೂರಾಗಿದ್ದರೂ ಪೋಡಿ ಹಾಗೂ ದುರಸ್ತಿ ಆಗದೆ ಪಹಣಿ ದೊರೆಯದ ರೈತರ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗಿದೆ. 8,200 ರೈತರ ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, 5,200 ಪ್ರಕರಣಗಳನ್ನು ಸರ್ವೆಗಾಗಿ ನಿಗದಿಪಡಿಸಲಾಗಿದೆ. ಈ ಪೈಕಿ 3,200 ಕಡತಗಳ ಸರ್ವೆ ಕಾರ್ಯ ಪೂರ್ಣಗೊಂಡಿದೆ. 1,908 ರೈತರಿಗೆ ಪಹಣಿ, ಟಿಪ್ಪಣಿ ಹಾಗೂ ಆಕಾರ್ ಬಂದ್ ಪ್ರತಿಗಳನ್ನು ವಿತರಿಸಲಾಗಿದೆ.
— ಆನಂದ್ ಕುಮಾರ್, ತಹಸೀಲ್ದಾರ್.
ತಾಪಂ ಅಧಿಕಾರಿ ಹರೀಶ್, ಗ್ರೇಡ್ 2 ತಹಸೀಲ್ದಾರ್ ಸುನಿಲ್ ಕುಮಾರ್, ಕೃಷಿ ಇಲಾಖೆಯ ಅಧಿಕಾರಿ ಡಾ.ನಾಗರಾಜು, ಇಒ ಮಂಜುಪ್ರಸಾದ್, ತಾಲೂಕು ಆರೋಗ್ಯಧಿಕಾರಿ ಡಾ.ಸಿದ್ಧೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
