ತುಮಕೂರು: ಕಬ್ಬು ಖರೀದಿ ದರ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ರೈತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.
ಕಬ್ಬು ಖರೀದಿ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ನಗರದಲ್ಲೂ ಪ್ರತಿಭಟನೆ ನಡೆಸಿದರು. ಚಿಕ್ಕನಾಯಕನಹಳ್ಳಿ ತಾಲ್ಲೂಕು ಹುಳಿಯಾರಿನಲ್ಲಿ ಕಳೆದ ಒಂದು ತಿಂಗಳಿಂದ ಕಸ ವಿಲೇವಾರಿ ಘಟಕದ ರೈತರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿದರು.
ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎ.ಗೋವಿಂದರಾಜು ಮಾತನಾಡಿ, ಟನ್ ಕಬ್ಬಿಗೆ 3,500 ದರ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಆದರೆ ಸರ್ಕಾರ ಮಾತ್ರ ನಿರ್ಲಕ್ಷ್ಯ ಮಾಡುತ್ತಲೇ ಬಂದಿದೆ. ಪಕ್ಕದ ಮಹಾರಾಷ್ಟ್ರ ಸೇರಿದಂತೆ ಅಕ್ಕಪಕ್ಕದ ರಾಜ್ಯಗಳ ಸಕ್ಕರೆ ಕಾರ್ಖಾನೆಗಳು ಟನ್ ಕಬ್ಬಿಗೆ 3,400– 3,500 ಬೆಲೆ ನೀಡುತ್ತಿವೆ. ಆದರೆ ರಾಜ್ಯದಲ್ಲಿ 3,100 ಕೊಡಲಾಗುತ್ತಿದೆ. ಬೆಲೆ ಹೆಚ್ಚಿಸಲು ಸರ್ಕಾರ ಮನಸ್ಸು ಮಾಡುತ್ತಿಲ್ಲ ಎಂದು ದೂರಿದರು.
ರಾಜ್ಯದ 81 ಸಕ್ಕರೆ ಕಾರ್ಖಾನೆಗಳಲ್ಲಿ 50ಕ್ಕೂ ಹೆಚ್ಚು ಕಾರ್ಖಾನೆಗಳು ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಮಾಲೀಕತ್ವದಲ್ಲಿ ನಡೆಯುತ್ತಿವೆ. ಹಾಗಾಗಿ ಯಾವ ರಾಜಕೀಯ ಪಕ್ಷದವರು ಅಧಿಕಾರಕ್ಕೆ ಬಂದರೂ ಕಬ್ಬು ದರ ಹೆಚ್ಚಳಕ್ಕೆ ಮುಂದಾಗುವುದಿಲ್ಲ. ಇಂತಹ ಸರ್ಕಾರಗಳಿಗೆ ರಾಜಕಾರಣಿಗಳ ಹಿತ ಕಾಯುವುದೇ ಮುಖ್ಯವಾಗಿರುತ್ತದೆ. ಈ ಹಿಂದೆ 110 ದಿನಗಳ ಕಾಲ ಮಂಡ್ಯ ಜಿಲ್ಲೆಯ ಕಬ್ಬು ಬೆಳೆಗಾರರು ಹೋರಾಟ ಮಾಡಿದ್ದು, ಆ ಸಮಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ, ರೈತರಿಗೆ ಏನು ಮಾಡದಿದ್ದರೂ ಈಗ ಮೊಸಳೆ ಕಣ್ಣೀರು ಸುರಿಸುತ್ತಿದೆ. ಸ್ಥಳೀಯವಾಗಿ ಗೊಂದಲ ಮೂಡಿಸುವ ಬದಲು ಹೆಚ್ಚಿನ ಬೆಲೆ ನಿಗದಿಗೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಬೇಕು ಎಂದು ಆಗ್ರಹಿಸಿದರು.
ಹುಳಿಯಾರು ಪಟ್ಟಣದಲ್ಲಿ ಕಸ ವಿಲೇವಾರಿ ಘಟಕ ಸ್ಥಾಪಿಸಬೇಕು. ಸಂತೆ ಮೈದಾನದಲ್ಲಿ ನಡೆಯುತ್ತಿರುವ ಸಂತೆಯನ್ನು ಎಪಿಎಂಸಿಗೆ ಸ್ಥಳಾಂತರಿಸಬೇಕು. ಅಗತ್ಯ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಂಕರಪ್ಪ, ಮುಖಂಡರಾದ ದೊಡ್ಡಮಾಳಯ್ಯ, ಕೆ.ಎನ್.ವೆಂಕಟೇಗೌಡ, ಚಿಕ್ಕಬೋರೇಗೌಡ, ರಂಗಹನುಮಯ್ಯ ಮೊದಲಾದವರು ನೇತೃತ್ವ ವಹಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


