ತಿಪಟೂರು: ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕ ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ನಗರಸಭೆ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅಧಿಕಾರಿಗಳಿಗೆ ಹಲವು ಮಹತ್ವದ ನಿರ್ದೇಶನಗಳನ್ನು ನೀಡಿದರು.
ಬೇಸಿಗೆ ಕಾಲ ಆರಂಭವಾಗುತ್ತಿರುವುದರಿಂದ ನಗರವಾಸಿಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿಗಳು ಸೂಚಿಸಿದರು. ವಾರ್ಡ್ಗಳ ಬೇಡಿಕೆಗೆ ಅನುಗುಣವಾಗಿ ನೀರು ಒದಗಿಸಬೇಕು ಹಾಗೂ ಅವಶ್ಯಕತೆ ಇರುವ ಕಡೆಗಳಲ್ಲಿ ಹೊಸ ಕೊಳವೆಬಾವಿಗಳನ್ನು ಕೊರೆಸಬೇಕು ಎಂದು ಸೂಚಿಸಿದರು.
ನಗರದಲ್ಲಿ ನಿರ್ಮಾಣವಾಗುತ್ತಿರುವ ವಾಣಿಜ್ಯ ಮತ್ತು ವಸತಿ ಸಂಕೀರ್ಣಗಳ ಮಾಹಿತಿ ಪಡೆದು, ಅವುಗಳ ನಿಯಮಬದ್ಧ ಪರಿಶೀಲನೆ ನಡೆಸಲು ಆದೇಶಿಸಿದರು. ರಜತಾದ್ರಿಪುರ ಮತ್ತು ಕೊನೇಹಳ್ಳಿಯಲ್ಲಿ ಬೆಸ್ಕಾಂ ಕಚೇರಿ, ಎಪಿಎಂಸಿ ಆವರಣದಲ್ಲಿ ಕೋಲ್ಡ್ ಸ್ಟೋರೇಜ್ ಹಾಗೂ ಅಮಾನಿಕೆರೆಯಲ್ಲಿ ಗಾಜಿನ ಮನೆ ನಿರ್ಮಾಣದ ಕುರಿತು ಚರ್ಚಿಸಲಾಯಿತು. ಮುಖ್ಯಮಂತ್ರಿಗಳು ಮಂಜೂರು ಮಾಡಿರುವ ಯೋಜನೆಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ತಾಕೀತು ಮಾಡಿದರು.
ಇನ್ನೂ, ಮಾಟನಹಳ್ಳಿ ಗ್ರಾಮದಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟದಿಂದ ಎರಡು ಮನೆಗಳು ಸುಟ್ಟು ಹೋಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ತಹಸೀಲ್ದಾರ್ ಮತ್ತು ಅಗ್ನಿಶಾಮಕ ದಳದಿಂದ ವರದಿ ಬಂದ ತಕ್ಷಣವೇ ಸಂಬಂಧಪಟ್ಟ ಗ್ಯಾಸ್ ಏಜೆನ್ಸಿ ವತಿಯಿಂದ ಪರಿಹಾರ ಕೊಡಿಸುವುದಾಗಿ ಜಿಲ್ಲಾಧಿಕಾರಿಗಳು ಭರವಸೆ ನೀಡಿದರು.
ನಗರದ ಕಲ್ಪತರು ಆಡಿಟೋರಿಯಂನಲ್ಲಿ ನಡೆದ ಕಂದಾಯ ಇಲಾಖೆಯ ಸಭೆಯಲ್ಲಿ ಬಾಕಿ ಇರುವ ಪ್ರಕರಣಗಳ ಶೀಘ್ರ ವಿಲೇವಾರಿಗೆ ಸೂಚಿಸಲಾಯಿತು. ಇ–ಸ್ವತ್ತು ಸಂಬಂಧಿತ ಕೆಲಸಗಳನ್ನು ಸರ್ಕಾರದ ಗುರಿಯಂತೆ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿಗಳು ಶನಿವಾರದೊಳಗೆ ತಮಗೆ ನೀಡಲಾದ ಗುರಿಯನ್ನು ಕಡ್ಡಾಯವಾಗಿ ತಲುಪಬೇಕು. ಸಾರ್ವಜನಿಕರಿಗೆ ಸೇವೆ ನೀಡುವಲ್ಲಿ ವಿಳಂಬ ಧೋರಣೆ ತೋರುವ ಅಧಿಕಾರಿಗಳ ವಿರುದ್ಧ ಕ್ರಮದ ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿಗಳ ಭೇಟಿಯ ಮಾಹಿತಿಯನ್ನು ಪತ್ರಕರ್ತರಿಗೆ ಹಾಗೂ ಸಾರ್ವಜನಿಕರಿಗೆ ಮುಂಚಿತವಾಗಿ ನೀಡದ ಇಲಾಖೆಯ ಕ್ರಮಕ್ಕೆ ಸ್ಥಳೀಯವಾಗಿ ತೀವ್ರ ಆಕ್ರೋಶ ವ್ಯಕ್ತವಾಯಿತು.
ಸಭೆಯಲ್ಲಿ ಶಾಸಕ ಕೆ.ಷಡಕ್ಷರಿ, ಉಪವಿಭಾಗಾಧಿಕಾರಿ ಬಿ.ಕೆ.ಸಪ್ತಶ್ರೀ, ಪೌರಾಯುಕ್ತ ವಿಶ್ವೇಶ್ವರ ಬದರಗಡೆ, ತಹಸೀಲ್ದಾರ್ ಮೋಹನ್ ಕುಮಾರ್, ಇಒ ಸುದರ್ಶನ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಚನ್ನಕೇಶವ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


