ತುಮಕೂರು: ಹದಿ ಹರೆಯದ ವಯಸ್ಸಿನ ಗಂಡಾಗಲಿ, ಹೆಣ್ಣಾಗಲಿ ಸೋಷಿಯಲ್ ಮಿಡಿಯಾ ಬಳಸುವ ವೇಳೆ ಎಚ್ಚರಿಕೆಯಿಂದ ಇರುವಂತೆ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸಾ ಕಿವಿಮಾತು ಹೇಳಿದರು.
ತುಮಕೂರಿನ ಬಾಲಭವನದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಹಮ್ಮಿಕೊಂಡಿದ್ದ “ಶಾಲಾ ಮಟ್ಟದಲ್ಲಿ ಮಕ್ಕಳ ರಕ್ಷಣೆ ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮಕ್ಕಳಲ್ಲಿ ಜಾಗೃತಿ ಮೂಡಿಸಿದರು.
ಮಕ್ಕಳ ಮುಗ್ಧತೆಯನ್ನು ದುರುಪಯೋಗಪಡಿಸಿಕೊಳ್ಳುವವರ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿದ್ದು, ಶಾಲಾ, ಕಾಲೇಜುಗಳಲ್ಲಿ ಕಲಿಯುತ್ತಿರುವ, ಹದಿ ಹರೆಯದ ವಯಸ್ಸಿನ ಗಂಡಾಗಲಿ, ಹೆಣ್ಣಾಗಲಿ ಸೋಷಿಯಲ್ ಮಿಡಿಯಾ ಬಳಸುವ ವೇಳೆ ಎಚ್ಚರಿಕೆ ವಹಿಸಬೇಕು ಎಂದು ಅವರು ತಿಳಿಸಿದರು.
ನಿಮಗೆ ಗೊತ್ತಿಲ್ಲದೆಯೋ, ಗೊತ್ತಿದ್ದೋ, ಸಮಾಜಘಾತಕರೊಂದಿಗೆ ಸಂಪರ್ಕ ಪಡೆದರೆ, ಜೀವನವಿಡೀ, ಜೈಲು, ಕೋರ್ಟು, ವಿಚಾರಣೆ ಎಂದು ಓಡಾಡುವುದರಿಂದ ನಿಮಗೆ ವಿದ್ಯಾಭ್ಯಾಸವೂ ಕುಂಠಿತವಾಗಲಿದೆ. ನಿಮ್ಮ ಬಾಲ್ಯವೂ ಇಲ್ಲದಂತಾಗುತ್ತದೆ ಎಂದರು.
ಜಿಲ್ಲೆಯಲ್ಲಿ ಪ್ರತಿವರ್ಷದಿಂದ ವರ್ಷಕ್ಕೆ ಪೋಕ್ಸೋ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. 2025ರ ಜನವರಿ ತಿಂಗಳಲ್ಲಿಯೇ 18 ಪ್ರಕರಣಗಳು ದಾಖಲಾಗಿವೆ. ಹಾಗಾಗಿ ಎಚ್ಚರಿಕೆಯ ಹೆಜ್ಜೆಗಳನ್ನಿಡುವಂತೆ ನ್ಯಾ.ನೂರುನ್ನಿಸಾ ಸಲಹೆ ನೀಡಿದರು.
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಮಾತನಾಡಿ, ಸರಕಾರ ಪ್ರತಿವರ್ಷ ನವೆಂಬರ್ 14 ರಿಂದ ಜನವರಿ 31ರವರೆಗೆ ರಾಜ್ಯದ ಎಲ್ಲಾ ಗ್ರಾಮಪಂಚಾಯಿತಿಗಳಲ್ಲಿ ಮಕ್ಕಳ ಗ್ರಾಮಸಭೆಗಳನ್ನು ನಡೆಸಿ, ಮಕ್ಕಳ ಅಭಿಪ್ರಾಯಗಳನ್ನು ಆಲಿಸಲು ಕ್ರಮ ಕೈಗೊಂಡಿದೆ. ರಾಜ್ಯದ 5,927 ಗ್ರಾಮಪಂಚಾಯಿತಿಗಳಲ್ಲಿ ಈ ರೀತಿಯ ಕಾರ್ಯಕ್ರಮ ನಡೆದಿದೆ. ಇದರ ಹಿಂದಿನ ಉದ್ದೇಶ ಮಕ್ಕಳ ಅಭಿಪ್ರಾಯಗಳಿಗೆ ಮನ್ನಣೆ ಸಿಗಬೇಕು. ಅವರು ಸಹ ಗ್ರಾಮದ ಅಭಿವೃದ್ದಿಯಲ್ಲಿ ಪಾಲುದಾರರಾಗಬೇಕು ಎಂಬುದಾಗಿದೆ ಎಂದರು.
ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಪವಿತ್ರ ಮಾತನಾಡಿದರು. ವೇದಿಕೆಯಲ್ಲಿ ಮೊಬಲಿಟಿ ಇಂಡಿಯಾದ ಅಧಿಕಾರಿಗಳು, ವಿವಿಧ ಶಾಲೆಗಳ ಮಕ್ಕಳು, ಶಿಕ್ಷಕರು ಪಾಲ್ಗೊಂಡಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4