ಮಧುಗಿರಿ (ನಮ್ಮತುಮಕೂರು): ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡಿ, ಸಮಾಜದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕೆಂಬುದೇ ನಮ್ಮ ಮುಖ್ಯ ಗುರಿಯಾಗಿದೆ ಎಂದು ಬೆಂಗಳೂರಿನ ಎಂ.ಎಸ್.ಎ. (MSA) ಟ್ರಸ್ಟ್ ನ ಅಧ್ಯಕ್ಷರು ಹಾಗೂ ಶಾಲೆಯ ಹಳೆಯ ವಿದ್ಯಾರ್ಥಿಯಾದ ಶಿವರಾಮ ಶೆಟ್ಟಿ ತಿಳಿಸಿದರು.
ತಾಲ್ಲೂಕಿನ ನೇರಳೇಕೆರೆ ಗ್ರಾಮದ ಶ್ರೀರಂಗನಾಥ ಗ್ರಾಮಾಂತರ ಪ್ರೌಢಶಾಲೆಯ (ಸಿದ್ಧಗಂಗಾ ಮಠ) ಸಮುದಾಯ ಭವನದಲ್ಲಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ, ಶಾಲಾ ಬ್ಯಾಗ್, ನೋಟ್ಬುಕ್ ಹಾಗೂ ಅಗತ್ಯ ಶೈಕ್ಷಣಿಕ ಸಲಕರಣೆಗಳನ್ನು ವಿತರಿಸಿ ಅವರು ಮಾತನಾಡಿದರು.
ಕಳೆದ ಕೆಲವು ದಶಕಗಳಿಂದ ಟ್ರಸ್ಟ್ ಈ ಸೇವಾ ಕಾರ್ಯವನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ. “ಸರ್ಕಾರಿ ಶಾಲೆಯ ಮಕ್ಕಳು ಯಾವುದೇ ಕಾರಣಕ್ಕೂ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳಿಗಿಂತ ಕಡಿಮೆಯಿರಬಾರದು ಎಂಬ ಉದ್ದೇಶದಿಂದ ಅಗತ್ಯ ಸೌಲಭ್ಯಗಳನ್ನು ಪೂರೈಸುತ್ತಿದ್ದೇವೆ. ಇದನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ತಮ್ಮ ಕನಸನ್ನು ನನಸು ಮಾಡಿಕೊಳ್ಳಬೇಕು. ಮುಂದೆ ಉನ್ನತ ಹುದ್ದೆಗೇರಿದಾಗ ತಾವು ಓದಿದ ಶಾಲೆ ಹಾಗೂ ಹುಟ್ಟಿದೂರನ್ನು ಮರೆಯದೆ, ಅಭಿವೃದ್ಧಿಗೆ ಸಹಾಯಹಸ್ತ ಚಾಚಬೇಕು,” ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಿವೃತ್ತ ಡಿವೈಎಸ್ಪಿ ಎಂ. ಪಾಷ ಮಾತನಾಡಿ, “ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದ, ಮಹಾತ್ಮ ಗಾಂಧಿ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಎ.ಪಿ.ಜೆ. ಅಬ್ದುಲ್ ಕಲಾಂ ಅವರಂತಹ ಮಹನೀಯರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇಂದಿನ ತಂತ್ರಜ್ಞಾನವನ್ನು ಸದ್ಬಳಕೆ ಮಾಡಿಕೊಂಡು, ಪ್ರಾಮಾಣಿಕತೆಯಿಂದ ಉತ್ತಮ ಜ್ಞಾನ ಪಡೆದು ಸಮಾಜಕ್ಕೆ ಮಾದರಿಯಾಗಬೇಕು,” ಎಂದರು.
ಟ್ರಸ್ಟ್ ನ ಸದಸ್ಯರಾದ ಮಂಜುನಾಥ ರೆಡ್ಡಿ ಮಾತನಾಡಿ, “ನಮ್ಮ ಕಾಲದಲ್ಲಿ ಅಭ್ಯಾಸ ಮಾಡಲು ಸಾಕಷ್ಟು ಕಷ್ಟವಿತ್ತು. ಆದರೆ ಇಂದು ಸರ್ಕಾರಿ ಶಾಲೆಯ ಮಕ್ಕಳಿಗೆ ಸರ್ಕಾರ ಹಾಗೂ ಟ್ರಸ್ಟ್ಗಳಿಂದ ಎಲ್ಲಾ ಸೌಲಭ್ಯಗಳು ಸಿಗುತ್ತಿವೆ. ಇವುಗಳನ್ನು ಬಳಸಿಕೊಂಡು ಹೆಚ್ಚು ಅಂಕ ಗಳಿಸುವ ಮೂಲಕ ಶಾಲೆ ಹಾಗೂ ಹೆತ್ತವರಿಗೆ ಒಳ್ಳೆಯ ಹೆಸರು ತರಬೇಕು,” ಎಂದು ಹಾರೈಸಿದರು.
ನಿವೃತ್ತ ಪ್ರಾಂಶುಪಾಲರಾದ ಡಾ. ಅಮರೇಂದ್ರ ಮಾತನಾಡಿ, “ಡಾ. ಅಬ್ದುಲ್ ಕಲಾಂ ಅವರ ಜೀವನ ಸಾಧನೆ ಪ್ರತಿಯೊಬ್ಬ ವಿದ್ಯಾರ್ಥಿಗೂ ಪ್ರೇರಣೆ. ಮುಂದೆ ನೀವು ಕೂಡ ವಿಜ್ಞಾನಿಗಳಾಗಿ ದೇಶಕ್ಕೆ ಕೊಡುಗೆ ನೀಡುವಂತಾಗಬೇಕು. ಎಸ್.ಎಸ್.ಎಲ್.ಸಿ (10ನೇ ತರಗತಿ) ವಿದ್ಯಾರ್ಥಿಗಳು ಹೆಚ್ಚು ಅಂಕ ಗಳಿಸಲು ಅನುಕೂಲವಾಗುವಂತೆ ಸಾಧನ ಪುಸ್ತಕಗಳನ್ನು ನೀಡಲಾಗುತ್ತಿದ್ದು, ಇದರ ಸೌಲಭ್ಯ ಪಡೆಯಿರಿ,” ಎಂದು ತಿಳಿಸಿದರು.
ಲೇಖಕರಾದ ಎನ್.ಎಸ್. ಈಶ್ವರಪ್ರಸಾದ್ ಮಾತನಾಡಿ, “ಇಂದಿನ ಪರಿಸ್ಥಿತಿಯಲ್ಲಿ ಕನ್ನಡ ಹಾಗೂ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳುವುದು ಮತ್ತು ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ನೆರವಾಗುವುದು ಅತ್ಯಗತ್ಯ. ಉನ್ನತ ಹುದ್ದೆಗೆ ಹೋಗಿ ಆರ್ಥಿಕವಾಗಿ ಸಬಲರಾದವರು ತಾವು ಓದಿದ ಶಾಲೆ ಮತ್ತು ಗ್ರಾಮಕ್ಕೆ ಕೊಡುಗೆ ನೀಡದಿದ್ದರೆ ಅವರ ಹೆಸರಿಗೆ ಯಾವುದೇ ಮೌಲ್ಯವಿರುವುದಿಲ್ಲ. ಶಿವರಾಮ ಶೆಟ್ಟಿಯವರ ಈ ನಿಸ್ವಾರ್ಥ ಸೇವೆಯನ್ನು ಮುಂದಿನ ಪೀಳಿಗೆಯೂ ನೇರಳೇಕೆರೆ ಗ್ರಾಮದ ಇತಿಹಾಸದಲ್ಲಿ ನೆನಪಿಟ್ಟುಕೊಳ್ಳುತ್ತದೆ,” ಎಂದು ಶ್ಲಾಘಿಸಿದರು.
ಕಾರ್ಯಕ್ರಮದಲ್ಲಿ ಎಂ.ಎಸ್.ಎ. ಟ್ರಸ್ಟ್ನ ಸದಸ್ಯ ಚಂದ್ರು, ದಾನಿಗಳಾದ ಶ್ರೀಮತಿ ರಮಾ, ಲಾವಣ್ಯ, ಸರೋಜ, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಇಂದ್ರಕುಮಾರ್, ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಹನುಮಂತರಾಯಪ್ಪ, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಮಲ್ಲಿಕಾರ್ಜುನ್, ನಿವೃತ್ತ ಶಿಕ್ಷಕ ರಂಗಶ್ಯಾಮಯ್ಯ ಹಾಗೂ ಶಾಲೆಯ ಬೋಧಕ-ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಶಿಕ್ಷಕಿ ಪಲ್ಲವಿ ಅವರು ಕಾರ್ಯಕ್ರಮದ ನಿರೂಪಣೆ, ಸ್ವಾಗತ ಹಾಗೂ ವಂದನಾರ್ಪಣೆ ನೆರವೇರಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
