ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಸಿಎಂ ಬದಲಾವಣೆ ಮತ್ತು ಅಧಿಕಾರ ಹಂಚಿಕೆಯ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ, ಮಾಜಿ ಸಚಿವ ಕೆ.ಎನ್. ರಾಜಣ್ಣ ನೀಡಿರುವ ಹೇಳಿಕೆ ಈಗ ಹೊಸ ಸಂಚಲನ ಮೂಡಿಸಿದೆ. “ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ದಲಿತ ನಾಯಕರೊಬ್ಬರು ಮುಖ್ಯಮಂತ್ರಿಯಾಗಬೇಕು ಎನ್ನುವುದು ನಮ್ಮ ಪ್ರಬಲ ಒತ್ತಾಯ” ಎಂದು ಹೇಳುವ ಮೂಲಕ ರಾಜಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಕ್ತ ಮನಸ್ಸಿನಲ್ಲಿದ್ದಾರೆ. ಹೈಕಮಾಂಡ್ ಸೂಚಿಸಿದರೆ ಅವರು ಅಧಿಕಾರ ಬಿಟ್ಟುಕೊಡಲು ಅಥವಾ ಪದತ್ಯಾಗ ಮಾಡಲು ಮಾನಸಿಕವಾಗಿ ಸಿದ್ಧರಿದ್ದಾರೆ ಎಂದು ರಾಜಣ್ಣ ತಿಳಿಸಿದ್ದಾರೆ.
ರಾಜ್ಯದ ಹಿತದೃಷ್ಟಿಯಿಂದ ಮತ್ತು ದಲಿತ ಸಮುದಾಯಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಮುಂದಿನ ಬಾರಿ ದಲಿತ ಮುಖ್ಯಮಂತ್ರಿ ಆಗಬೇಕು ಎಂಬ ವಿಚಾರವನ್ನು ಈಗಾಗಲೇ ಹೈಕಮಾಂಡ್ ಗಮನಕ್ಕೆ ತರಲಾಗಿದೆ ಎಂದು ಅವರು ಹೇಳಿದ್ದಾರೆ.
ಆಡಳಿತದಲ್ಲಿ ಹೊಸ ವೇಗ ತರಲು ಸಂಪುಟ ಪುನಾರಚನೆಯ ಅಗತ್ಯವಿದೆ. ಹೊಸಬರಿಗೆ ಅವಕಾಶ ನೀಡುವ ಮೂಲಕ ಪಕ್ಷವನ್ನು ಬಲಪಡಿಸಬೇಕು ಎಂಬುದು ರಾಜಣ್ಣ ಅವರ ಅಭಿಪ್ರಾಯ.
2013ರ ಅವಧಿಗೂ ಈಗಿಗೂ ವ್ಯತ್ಯಾಸವಿದೆ. ಅಹಿಂದ ವರ್ಗದ ನಿರೀಕ್ಷೆಗಳು ಸರಿಯಾಗಿ ಈಡೇರುತ್ತಿಲ್ಲ ಎಂಬ ಅಸಮಾಧಾನ ಜನರಲ್ಲಿದೆ. ಹೀಗಾಗಿ ಹೈಕಮಾಂಡ್ ಶೀಘ್ರವೇ ಗಟ್ಟಿಯಾದ ತೀರ್ಮಾನ ಕೈಗೊಳ್ಳಬೇಕು ಎಂದು ಅವರು ಎಚ್ಚರಿಸಿದ್ದಾರೆ.
ಡಿಕೆಶಿ ಬಣಕ್ಕೆ ಟಕ್ಕರ್?
ಒಂದೆಡೆ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಮೇ 15ರೊಳಗೆ ಹೈಕಮಾಂಡ್ ‘ಬಂಪರ್ ಗಿಫ್ಟ್’ ನೀಡಲಿದೆ ಎಂದು ಅವರ ಬೆಂಬಲಿಗ ಶಾಸಕರು ಹೇಳುತ್ತಿದ್ದಾರೆ. ಈ ಮಧ್ಯೆ ಸಿದ್ದರಾಮಯ್ಯ ಆಪ್ತ ವಲಯದ ರಾಜಣ್ಣ ಅವರು ‘ದಲಿತ ಸಿಎಂ’ ಕಾರ್ಡ್ ಪ್ಲೇ ಮಾಡಿರುವುದು ಕಾಂಗ್ರೆಸ್ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


