ಬೆಂಗಳೂರು: ತಮಿಳುನಾಡಿ ಕಾವೇರಿ ನೀರನ್ನು ಎಷ್ಟು ಬಳಸಿಕೊಂಡಿದೆ ಎಂದು ವಾದ ಮಾಡದೇ ರಾಜ್ಯ ಸರ್ಕಾರ ನಮ್ಮ ರೈತರನ್ನು ಇಕ್ಕಟ್ಟಿಗೆ ಸಿಲುಕಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.
ಅನಾರೋಗ್ಯದಿಂದ ಬೆಂಗಳೂರಿನ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ. ಕುಮಾರಸ್ವಾಮಿಯನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿ, ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಮೊನ್ನೆಯೇ ಕುಮಾರಸ್ವಾಮಿಯವರ ಆರೋಗ್ಯ ವಿಚಾರಿಸಿದ್ದೇನೆ. ಅವರು ಈಗ ಲವಲವಿಕೆಯಿಂದ ಇದ್ದಾರೆ. ಹಾಗಾಗಿ ಬೇಗ ಗುಣಮುಖ ಆಗಲಿ ಅಂತ ಆಶಿಸುತ್ತೇನೆ ಎಂದು ಹೇಳಿದರು.
ಇದೇ ವೇಳೆ ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸೆಪ್ಟಂಬರ್ 6 ರಂದು ಕಾವೇರಿ ನದಿ ನೀರಿನ ಹಂಚಿಕೆ ಕುರಿತು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಬರಲಿದೆ. ಕಾವೇರಿ ವಿಚಾರದಲ್ಲಿ ಸಿಡಬ್ಲೂಎಂಎ ಆದೇಶದಂತೆ ನೀರು ಬಿಡುತ್ತಿದ್ದಾರೆ. ನಮ್ಮವರು ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗದಿರುವ ಬಗ್ಗೆ ಸಮಗ್ರವಾಗಿ ಯಾಕೆ ವಾದ ಮಾಡುತ್ತಿಲ್ಲವೊ ಗೊತ್ತಿಲ್ಲ. ಕಾವೇರಿ ಜಲಾನಯನ ಪ್ರದೇಶದಲ್ಲಿ ಎಷ್ಟು ಮಳೆ ಬಿದ್ದಿದೆ ಎನ್ನುವುದನ್ನು ಮನವರಿಕೆ ಮಾಡಿಕೊಂಡು ನಿರ್ಧಾರ ತೆಗೆದುಕೊಳ್ಳಬೇಕು ಎಂದರು.


