ಕೊರಟಗೆರೆ: ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಯಾವುದೇ ಕೊರತೆಯಿಲ್ಲ, ಆದರೆ ಪ್ರಾಮಾಣಿಕತೆಯ ಕೊರತೆ ಕಂಡುಬರುತ್ತಿದೆ. ಇದನ್ನು ಹೋಗಲಾಡಿಸಲು ಶಿಕ್ಷಣದ ಜೊತೆಗೆ ಸಂಸ್ಕಾರ, ಮಾನವೀಯತೆ ಹಾಗೂ ಸಾಮಾಜಿಕ ಕಾಳಜಿಯನ್ನು ಬೆಳೆಸಿಕೊಳ್ಳುವುದು ಅತ್ಯಗತ್ಯ ಎಂದು ಸಾಹಿತಿ ಹಾಗೂ ದೊಗ್ಗನಹಳ್ಳಿ ಸರ್ಕಾರಿ ಶಾಲೆಯ ಮುಖ್ಯಶಿಕ್ಷಕ ರಿಜ್ವಾನ್ ಪಾಷಾ ತಿಳಿಸಿದರು.
ತಾಲೂಕಿನ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮೀ ದೇವಾಲಯದ ಕಲ್ಯಾಣ ಮಂಟಪದಲ್ಲಿ ಶ್ರೀ ಮಹಾಲಕ್ಷ್ಮಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಏರ್ಪಡಿಸಲಾಗಿದ್ದ ೨೬ನೇ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು.
ವಿದ್ಯಾರ್ಥಿಗಳ ಯಶಸ್ಸಿನ ಹಿಂದೆ ತಂದೆ-ತಾಯಿಗಳ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಮತ್ತು ಸಮಾಜದ ಪ್ರೋತ್ಸಾಹವಿರುತ್ತದೆ. ಮಕ್ಕಳನ್ನು ಮತ್ತೊಬ್ಬರೊಂದಿಗೆ ಹೋಲಿಕೆ ಮಾಡದೆ ಅವರಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಇಂದು ದೊರೆತಿರುವ ಪುರಸ್ಕಾರವು ಸಾಧನೆಯ ಅಂತ್ಯವಲ್ಲ, ಮುಂದಿನ ದೊಡ್ಡ ಸಾಧನೆಗೆ ಮೊದಲ ಹೆಜ್ಜೆಯಾಗಬೇಕು ಎಂದು ರಿಜ್ವಾನ್ ಪಾಷಾ ಹೇಳಿದರು.
ಸಮಾಜದಲ್ಲಿ ವಿದ್ಯಾವಂತರಿಂದಲೇ ಕೆಲವೊಮ್ಮೆ ದೇಶಕ್ಕೆ ಗಂಡಾಂತರ ಉಂಟಾಗುತ್ತಿದ್ದು, ಅವಿದ್ಯಾವಂತರಿಂದಲ್ಲ ಎಂದ ಅವರು, ವಿದ್ಯಾರ್ಥಿಗಳು ಶಿಸ್ತು, ಪರಿಶ್ರಮ ಮತ್ತು ಸತತ ಅಧ್ಯಯನವನ್ನು ಜೀವನದ ಭಾಗವಾಗಿಸಿಕೊಳ್ಳಬೇಕು ಎಂದರು.
ಪ್ರಾಚಾರ್ಯ ರವಿಕುಮಾರ್ ಮಾತನಾಡಿ, ಯಶಸ್ಸು ಯಾರಿಗೂ ಸುಲಭವಾಗಿ ಸಿಗುವುದಿಲ್ಲ; ನಿರಂತರ ಪರಿಶ್ರಮ, ಆತ್ಮವಿಶ್ವಾಸ ಮತ್ತು ಸಮಯದ ಸದುಪಯೋಗವೇ ಯಶಸ್ಸಿನ ಮೆಟ್ಟಿಲು ಎಂದು ತಿಳಿಸಿದರು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ:
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಾಸು ದೇವರಾವ್ ಅವರು ತಾಲೂಕಿನ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರೌಢಶಾಲೆ ಮತ್ತು ಪಿಯು ಕಾಲೇಜುಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತಿ ಶಾಲೆಯ ಇಬ್ಬರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಿದರು.
ಶ್ರೀ ಮಹಾಲಕ್ಷ್ಮಿ ಶಿಕ್ಷಣ ಸಂಸ್ಥೆಯ ಮುಖ್ಯ ಶಿಕ್ಷಕ ಸೋಮಶೇಖರ್ ಮಾತನಾಡಿ, ಟ್ರಸ್ಟ್ ಕಳೆದ ೨೬ ವರ್ಷಗಳಿಂದ ವಿದ್ಯಾರ್ಥಿಗಳಿಗೆ ಉಚಿತ ದಾಖಲಾತಿ, ಸಮವಸ್ತ್ರ, ಪಠ್ಯಪುಸ್ತಕ, ಉಚಿತ ಊಟದ ವ್ಯವಸ್ಥೆ ಹಾಗೂ ಪ್ರತಿಭಾ ಪುರಸ್ಕಾರ ನೀಡುವ ಮೂಲಕ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸುತ್ತಿದೆ ಎಂದರು.
ಸಾರ್ವಜನಿಕರ ಗಮನ ಸೆಳೆದ ಬಾಲಪ್ರತಿಭೆ ಬಿ.ಸಿ. ವೈನವಿ:
ಕಾರ್ಯಕ್ರಮದಲ್ಲಿ ೧೧ ವರ್ಷದ ಬಾಲಕಿ ಬಿ.ಸಿ. ವೈನವಿ ಭಗವದ್ಗೀತಾ ಶ್ಲೋಕಗಳು, ಲಲಿತಾ ಸಹಸ್ರನಾಮ, ವಿಷ್ಣು ಸಹಸ್ರನಾಮ, ಶ್ರೀ ವೆಂಕಟೇಶ್ವರ ಸುಪ್ರಭಾತ ಹಾಗೂ ಲಕ್ಷ್ಮೀ ಶ್ಲೋಕಗಳನ್ನು ಸುಲಲಿತವಾಗಿ ಪಠಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತಡಸೀಘಟ್ಟ ಗ್ರಾಮದ ಮೇಘನಾ ಮತ್ತು ಚಿನ್ನಮೂರ್ತಿ ದಂಪತಿಯ ಪುತ್ರಿಯಾದ ವೈನವಿ, ತಮ್ಮ ೫ನೇ ವಯಸ್ಸಿನಲ್ಲೇ ಶ್ರೀಮದ್ ಭಗವದ್ಗೀತೆಯ ೧೮ ಅಧ್ಯಾಯಗಳ ೭೦೦ ಶ್ಲೋಕಗಳನ್ನು ಕಂಠಪಾಠ ಮಾಡಿದ್ದಾರೆ.
ಪ್ರಶಸ್ತಿ ಮತ್ತು ಗೌರವಗಳು: ೨೦೨೨ರಲ್ಲಿ ೫ ನಿಮಿಷದಲ್ಲಿ ೬೦ ಶ್ಲೋಕಗಳನ್ನು ಪಠಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವಕ್ಕೆ ಪಾತ್ರರಾಗಿದ್ದಾರೆ. ಇದರ ಜೊತೆಗೆ ಕರ್ನಾಟಕ ಸರ್ಕಾರದ ಕೆಳದಿ ಚೆನ್ನಮ್ಮ ಪ್ರಶಸ್ತಿ, ಬಿಬಿಎಂಪಿಯ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ, ಏಷ್ಯನ್ ಬುಕ್ ಆಫ್ ರೆಕಾರ್ಡ್ಸ್ನಿಂದ ಗ್ರಾಂಡ್ ಮಾಸ್ಟರ್ ಗೌರವ, ಏಷ್ಯಾ ಇಂಟರ್ನೇಷನಲ್ ಕಲ್ಚರ್ ರಿಸರ್ಚ್ ಯುನಿವರ್ಸಿಟಿಯಿಂದ ಗೌರವ ಡಾಕ್ಟರೇಟ್ ಹಾಗೂ ಸಾವಿತ್ರಿಬಾಯಿ ಫುಲೆ ರಾಷ್ಟ್ರೀಯ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳನ್ನು ಪಡೆದಿದ್ದಾರೆ. ಈ ಬಾಲಪ್ರತಿಭೆಗೆ ಸರ್ಕಾರ ಸೂಕ್ತ ಪ್ರೋತ್ಸಾಹ ನೀಡಬೇಕಾಗಿದೆ.
ಕಾರ್ಯಕ್ರಮದಲ್ಲಿ ಟ್ರಸ್ಟ್ ಕಾರ್ಯದರ್ಶಿ ಮುರಳಿಕೃಷ್ಣ, ಖಜಾಂಚಿ ಜಗದೀಶ್, ಧರ್ಮದರ್ಶಿಗಳಾದ ಶ್ರೀಪ್ರಸಾದ್, ನಟರಾಜು, ಮಂಜುನಾಥ್, ರವಿರಾಜ ಅರಸ್, ಲಕ್ಷ್ಮಿ ನರಸಯ್ಯ, ರಾಜಣ್ಣ, ಶ್ರೀಲಕ್ಷ್ಮೀಪ್ರಸಾದ್, ನರಸಿಂಹರಾಜು, ನರಸಿಂಹಮೂರ್ತಿ, ಶಿಕ್ಷಣ ಇಲಾಖೆಯ ಅನುಸೂಯಮ್ಮ, ಗಂಗಮ್ಮ ಹಾಗೂ ಕಾರ್ಯನಿರ್ವಹಣಾಧಿಕಾರಿ ರಂಗಸ್ವಾಮಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
