ಪಾವಗಡ: ತಾಲೂಕಿನ ವೈ.ಎನ್.ಹೊಸಕೋಟೆ ಪಟ್ಟಣದ ಸರ್ಕಾರಿ ಪ್ರೌಢಶಾಲೆಯ ಮಕ್ಕಳು ಕೊಳಚೆ ನೀರಿನಲ್ಲೇ ನಡೆದುಕೊಂಡು ಹೋಗುವ ದುಸ್ಥಿತಿ ಎದುರಿಸುತ್ತಿದ್ದಾರೆ.
ಈ ಶಾಲೆಯು ದೊಡ್ಡಹಳ್ಳಿ ರಸ್ತೆಯಲ್ಲಿದೆ. ಮುಖ್ಯರಸ್ತೆಯಿಂದ 100 ಮೀಟರ್ ದೂರದಲ್ಲಿರುವ ಈ ಶಾಲೆಗೆ ಮಳೆಗಾಲದಲ್ಲಿ ಪ್ರತಿ ವರ್ಷವೂ ವಿದ್ಯಾರ್ಥಿಗಳು ಕೊಳಚೆ ನೀರಿನಲ್ಲಿ ನಡೆದುಕೊಂಡು ಹೋಗಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.
ಸುಮಾರು 160 ವಿದ್ಯಾರ್ಥಿಗಳು ಈ ಶಾಲೆಯಲ್ಲಿ ವಿದ್ಯಾಭ್ಯಾಸ ನಡೆಸುತ್ತಿದ್ದಾರೆ. ಈ ಶಾಲೆಯ ವಿದ್ಯಾರ್ಥಿಗಳು ಮನೆಯಿಂದ ಶಾಲೆಗೆ ಮತ್ತು ಶಾಲೆಯಿಂದ ಮನೆಗೆ ಹೋಗಬೇಕಾದರೆ ಈ ಕೊಳಚೆ ನೀರನ್ನೇ ಮೆಟ್ಟಿಕೊಂಡು ಹೋಗಬೇಕಾದ ಪರಿಸ್ಥಿತಿಯಿದೆ.
ಕೊಳಚೆ ನೀರಿನಿಂದ ಸಮಸ್ಯೆಯಾಗುತ್ತಿರುವ ಬಗ್ಗೆ ಸ್ಥಳೀಯ ಪಂಚಾಯತ್ ನ ಗಮನಕ್ಕೆ ತಂದರೂ ಪಂಚಾಯತ್ ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ.
ಸಂಬಂಧಪಟ್ಟ ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಂಡು ಶಾಲಾ ಮಕ್ಕಳಿಗೆ ಓಡಾಡಲು ಸರಿಯಾದ ರಸ್ತೆ ನಿರ್ಮಿಸಿಕೊಡಬೇಕಿದೆ. ಗ್ರಾಮಸ್ಥರಿಗೆ ಸ್ವಚ್ಛತೆಯ ಪಾಠ ಹೇಳಿಕೊಡುವ ಪಂಚಾಯತ್ ಗಳು, ತಾವೇ ತಮ್ಮ ಜವಾಬ್ದಾರಿಯನ್ನು ಮರೆತು, ವಿದ್ಯಾರ್ಥಿಗಳು ಆರೋಗ್ಯದ ಜೊತೆಗೆ ಚೆಲ್ಲಾಟವಾಡುತ್ತಿರುವುದು ಎಷ್ಟು ಸರಿ ಎನ್ನುವ ಪ್ರಶ್ನೆ ಕೇಳಿ ಬಂದಿದೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296