ತುಮಕೂರು : ಡೇಟಾ ಸೆಂಟರ್, ಎಐ ತಂತ್ರಜ್ಞಾನ ಬಳಕೆಯಿಂದ ಪರಿಸರ, ಸಮಾಜ ಹಾಗೂ ಗ್ರಾಮೀಣ ಜೀವನೋಪಾಯದ ಮೇಲೆ ಉಂಟು ಮಾಡುವ ಪರಿಣಾಮಗಳ ಬಗ್ಗೆ ಮತ್ತು ಲಿಂಕ್ ಕೆನಾಲ್ ಹಾಗೂ ಕೃಷಿ ಭೂಮಿ ಸ್ವಾಧೀನ ವಿರೋಧಿಸಿ ಆ. 6, 7 ಮತ್ತು 8ರಂದು ಗೊಲ್ಲೂರು ಹೋಬಳಿಯ ದೊಡ್ಡ ಹೊಸೂರು ಗ್ರಾಮದ ಗಾಂಧೀಜಿ ಸಹಜ ಬೇಸಾಯ ಆಶ್ರಮದಲ್ಲಿ ಚಳುವಳಿ ರೂಪದ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ರೈತ ಮುಖಂಡ ಎ. ಗೋವಿಂದರಾಜು ತಿಳಿಸಿದರು.
ನಗರದ ವಿಜ್ಞಾನ ಕೇಂದ್ರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ಸರ್ಕಾರ ಸುಮಾರು 9,460 ಎಕರೆ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ನಡೆಸುತ್ತಿದೆ. ಗುಬ್ಬಿ ಲಿಂಕ್ ಕೆನಾಲ್ನ ನೀರನ್ನು ಎಲ್ಲಿಗೆ ಕೊಂಡೊಯ್ಯಲಾಗುತ್ತದೆ ಎಂಬುದರ ಕುರಿತು ಸ್ಪಷ್ಟನೆ ನೀಡಬೇಕು. ಕೃಷಿ ಭೂಮಿ ಸ್ವಾಧೀನವನ್ನು ವಿರೋಧಿಸುವುದು ಹಾಗೂ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬಾರದು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಎಐ ಆಧಾರಿತ ಡೇಟಾ ಸೆಂಟರ್ಗಳ ವಿಸ್ತರಣೆಯಿಂದ ನೀರಿನ ಬಳಕೆ ಹೆಚ್ಚಾಗಿ ಕೃಷಿ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಉಂಟಾಗುವ ಸಾಧ್ಯತೆ ಇದೆ.
ಈ ಕುರಿತು ಅಮೆರಿಕ ಸೇರಿದಂತೆ ವಿವಿಧ ದೇಶಗಳಲ್ಲಿ ನಡೆದಿರುವ ಅಧ್ಯಯನಗಳ ಮಾಹಿತಿಯನ್ನು ತಜ್ಞರು ಆ. 6ರಂದು ಸಮಾಲೋಚನೆಯಲ್ಲಿ ಮಂಡಿಸಲಿದ್ದಾರೆ ಎಂದು ಹೇಳಿದರು.
ಆ. 7ರಂದು ಗಾಂಧಿ ಸಹಜ ಬೇಸಾಯ ಆಶ್ರಮದಿಂದ ತುಮಕೂರು ಜಿಲ್ಲಾಧಿಕಾರಿ ಕಚೇರಿವರೆಗೆ ಶಾಂತಿಯುತ ಪಾದಯಾತ್ರೆ ನಡೆಸಿ, ಸತ್ಯಾಗ್ರಹದಲ್ಲಿ ಅಂಗೀಕರಿಸುವ ನಿರ್ಣಯಗಳೊಂದಿಗೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಆ. 8ರಂದು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಭೂಮಿ ಮತ್ತು ನೀರಿನ ಬಳಕೆ ನೀತಿ, ನೈಸರ್ಗಿಕ ಸಂಪನ್ಮೂಲಗಳ ಖಾಸಗೀಕರಣ ಹಾಗೂ ಸತ್ಯಾಗ್ರಹದ ಮುಂದಿನ ರೂಪುರೇಷೆಗಳ ಕುರಿತು ಸಮಾಲೋಚನೆ ನಡೆಯಲಿದೆ. ಆ. 10ರಂದು ಎಸ್ಕೆಎಂ ಹಾಗೂ ಜೆಟಿಸಿಯು ಸಂಘಟನೆಗಳ ನೇತೃತ್ವದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ರೈತ-ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ದೇಶವ್ಯಾಪಿ ಪ್ರತಿಭಟನೆ ನಡೆಸಲಾಗುವುದು. ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬಾರದು ಎಂದು ಆಗ್ರಹಿಸಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಗೋವಿಂದರಾಜು ಹೇಳಿದರು.
ಈ ವೇಳೆ ಗಾಂಧೀಜಿ ಸಹಜ ಬೇಸಾಯ ಆಶ್ರಮ ಮುಖ್ಯಸ್ಥ ಡಾ. ಮಂಜುನಾಥ್ ಮಾತನಾಡಿ, ಎಐ ಆಧಾರಿತ ಡೇಟಾ ಕೇಂದ್ರಗಳ ಸ್ಥಾಪನೆ ಉಂಟುಮಾಡುವ ಪರಿಣಾಮಗಳ ಬಗ್ಗೆ ಮತ್ತು ಭಾರತದ ಆಹಾರ ಭದ್ರತೆಯನ್ನು ಖಾತರಿಪಡಿಸುವ ರೈತರು, ಕೃಷಿ ಕಾರ್ಮಿಕರು ಮತ್ತು ಗ್ರಾಮೀಣ ಸಮುದಾಯಗಳ ಹಿತಾಸಕ್ತಿಯನ್ನು ಕಾಪಾಡಲು ಫಲವತ್ತಾದ ಕೃಷಿ ಭೂಮಿಯನ್ನು ಸಂರಕ್ಷಿಸಬೇಕು. ನೈಸರ್ಗಿಕ ಸಂಪನ್ಮೂಲಗಳನ್ನು ರಕ್ಷಿಸುವುದರ ಜೊತೆಗೆ ಈಗಿನ ಹಾಗೂ ಮುಂದಿನ ಪೀಳಿಗೆಗಳ ಹಕ್ಕುಗಳನ್ನು ಉಳಿಸಿಕೊಳ್ಳಲು ಸರ್ಕಾರಗಳು ಭೂ ಬಳಕೆ ಕಾಯ್ದೆ ಜಾರಿಗೆ ತರಬೇಕೆಂದು ಒತ್ತಾಯಿಸಿದರು.
ಮೂರು ದಿನಗಳ ಸತ್ಯಾಗ್ರಹದಲ್ಲಿ ರಾಜ್ಯದ ರೈತ ಸಂಘಟನೆಗಳು, ಭೂಮಿ ಮತ್ತು ನೀರಿನ ಹಕ್ಕುಗಳ ಹೋರಾಟಗಾರರು, ಕಾರ್ಮಿಕ ಸಂಘಟನೆಗಳು ಹಾಗೂ ವಿವಿಧ ಸಂಸ್ಥೆಗಳ ಪ್ರತಿನಿಧಿಗಳು ಒಟ್ಟು 2 ಸಾವಿರಕ್ಕೂ ಹೆಚ್ಚು ಸಾರ್ವಜನಿಕ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಈ ವೇಳೆ ಮುಖಂಡರಾದ ಯತ್ತಿರಾಜ್, ನಾಗರತ್ನ ಬಿ.ಕೆ. ಲಕ್ಷ್ಮಣ, ಮೋಹನ್, ರಂಗಯ್ಯ, ವೆಂಕಟೇಗೌಡರು, ಚಿಕ್ಕಬೋರೇಗೌಡ, ನಾಗರಾಜು, ರವೀಶ್, ಲೋಕೇಶ್, ಲಿಂಗರಾಜು, ತಿಮ್ಮೇಗೌಡರು ಸೇರಿದಂತೆ ಅನೇಕರು ಇದ್ದರು.
“ಎಐ, ಸ್ವಯಂಚಾಲಿತ ವ್ಯವಸ್ಥೆಗಳು ಹಾಗೂ ಮಾನವಸಮಾನ ತಂತ್ರಜ್ಞಾನಗಳ ವೇಗದ ಬೆಳವಣಿಗೆಯಿಂದ ಮುಂದಿನ ದಶಕಗಳಲ್ಲಿ ದೇಶದ ಯುವಜನರು ಮತ್ತು ಕಾರ್ಮಿಕರಿಗೆ ನಿರುದ್ಯೋಗದ ಸವಾಲು ಎದುರಾಗುವ ಸಾಧ್ಯತೆ ಇದೆ. ಈ ವಿಷಯ ರಾಷ್ಟ್ರಮಟ್ಟದಲ್ಲಿ ಗಂಭೀರ ಚರ್ಚೆಗೆ ಬರಬೇಕಾಗಿದೆ.”
ಡಾ. ಮಂಜುನಾಥ್, ಮುಖ್ಯಸ್ಥ, ಗಾಂಧೀಜಿ ಸಹಜ ಬೇಸಾಯ ಆಶ್ರಮ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
