ತಿಪಟೂರು: ಮಾಜಿ ಶಾಸಕ ಹಾಗೂ ಮಾಜಿ ಸಚಿವ ಬಿ.ಸಿ. ನಾಗೇಶ್ ಅವರ ನಿಧನದ ಹಿನ್ನೆಲೆಯಲ್ಲಿ ನಡೆದ ನುಡಿನಮನ ಕಾರ್ಯಕ್ರಮದಲ್ಲಿ ಸಾನಿಧ್ಯವಹಿಸಿ ಮಾತನಾಡುವ ವೇಳೆ , ಬಿ.ಸಿ ನಾಗೇಶ್ ಪುತ್ರ ವಿಶ್ವದೀಪ್ ಅವರಿಗೆ ಬಿಜೆಪಿ ಟಿಕೆಟ್ ನೀಡುವ ಮೂಲಕ ಕುಟುಂಬಕ್ಕೆ ರಾಜಕೀಯವಾಗಿ ಬಲ ತುಂಬಬೇಕು ಎಂಬ ವಿಚಾರವನ್ನು ಪ್ರಸ್ತಾಪಿಸಿರುವುದು ಆ ವೇದಿಕೆಗೆ ಅಪ್ರಸ್ತುತವಾಗಿತ್ತು ಎಂದು ತಿಪಟೂರು ಷಡಕ್ಷರ ಮಠದ ಶ್ರೀ ರುದ್ರಮುನಿಸ್ವಾಮೀಜಿ ತಿಳಿಸಿದರು.
ನಗರದ ಶ್ರೀಮಠದ ಆವರಣದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಶ್ರೀಗಳು, ಬಿ.ಸಿ. ನಾಗೇಶ್ ಅವರ ಸಂತಾಪ ಸಭೆಯಲ್ಲಿ ಟಿಕೆಟ್ ವಿಚಾರವನ್ನು ಪ್ರಸ್ತಾಪಿಸಿರುವುದು ಆ ವೇದಿಕೆಗೆ ಸೂಕ್ತವಲ್ಲ ಎಂಬುದು ತಮ್ಮ ಅಭಿಪ್ರಾಯವಾಗಿದೆ ಎಂದರು.
ಪಕ್ಷದ ವಿಚಾರ ವೈಯಕ್ತಿಕವಾಗಿದ್ದು, ಸಂತಾಪ ಸಭೆಯಲ್ಲಿ ಟಿಕೆಟ್ ವಿಚಾರ ಪ್ರಸ್ತಾಪಿಸಿರುವುದರಿಂದ ಪಕ್ಷಕ್ಕಾಗಿ ಹಲವು ವರ್ಷಗಳಿಂದ ದುಡಿದಿರುವ ಅನೇಕ ಕಾರ್ಯಕರ್ತರು ಹಾಗೂ ಮುಖಂಡರಿಗೆ ನೋವಾಗಿರಬಹುದು. ಯಾರನ್ನು ನಾಯಕರನ್ನಾಗಿ ಮಾಡಬೇಕು, ಯಾರಿಗೆ ಟಿಕೆಟ್ ನೀಡಬೇಕು ಎಂಬುದನ್ನು ತೀರ್ಮಾನಿಸುವುದು ಪಕ್ಷದ ಹಿರಿಯರು ಹಾಗೂ ವರಿಷ್ಠರಿಗೆ ಬಿಟ್ಟ ವಿಚಾರವಾಗಿದೆ ಎಂದು ಹೇಳಿದರು.
ಶ್ರೀಮಠ ಯಾವುದೇ ರಾಜಕೀಯ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಯಾವುದೇ ಪಕ್ಷದ ಮುಖಂಡರು ಅಥವಾ ಯಾವುದೇ ಸಮಾಜದ ವ್ಯಕ್ತಿಗಳು ಮಠಕ್ಕೆ ಬಂದರೂ ಅವರನ್ನು ಗೌರವದಿಂದ ಬರಮಾಡಿಕೊಂಡು ಆಶೀರ್ವದಿಸುವುದು ಮಠದ ಪರಂಪರೆಯಾಗಿದೆ. ಎಲ್ಲರನ್ನೂ ಸಮಾನವಾಗಿ ಕಾಣುವ ಮೂಲಕ ಮಠವು ತನ್ನ ಧಾರ್ಮಿಕ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ನಿರ್ವಹಿಸುತ್ತಿದೆ ಎಂದು ಶ್ರೀ ರುದ್ರಮುನಿಸ್ವಾಮೀಜಿ ತಿಳಿಸಿದರು.
ವರದಿ: ಆನಂದ್, ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
