ತುಮಕೂರು: ರೈತರ ಫಲವತ್ತಾದ ಭೂಮಿ ಕಿತ್ತುಕೊಂಡು ನಂದಿಹಳ್ಳಿ ಮಲ್ಲಸಂದ್ರ, ವಸಂತನರಸಾಪುರ ವರ್ತುಲ ರಸ್ತೆ ನಿರ್ಮಾಣಕ್ಕೆ ರೈತರು ಹಾಗೂ ರೈತ ಸಂಘಟನೆ ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ನಂದಿಹಳ್ಳಿ—ಮಲ್ಲಸಂದ್ರ– ವಸಂತನರಸಾಪುರ ಬೈಪಾಸ್ ರಸ್ತೆ ವಿರೋಧಿ ಹೋರಾಟ ಸಮಿತಿ ರಚಿಸಿಕೊಂಡು ಪ್ರತಿಭಟನೆಗೆ ಅಣಿಯಾಗಿದ್ದಾರೆ. ಭೂಸ್ವಾಧೀನ ಕಾಯ್ದೆ–2013ಅನ್ನು ಜಿಲ್ಲಾ ಆಡಳಿತ ಸ್ಪಷ್ಟವಾಗಿ ಉಲ್ಲಂಘಿಸಿದೆ. ರೈತರ ಒಪ್ಪಿಗೆ ಇಲ್ಲದೆ ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಲಾಗಿದೆ. ಯಾವುದೇ ಕಾರಣಕ್ಕೂ ಭೂಮಿ ಕಿತ್ತುಕೊಳ್ಳಲು ಅವಕಾಶ ನೀಡದಿರಲು ಪಣ ತೊಟ್ಟಿದ್ದಾರೆ.
ಸಂಯುಕ್ತ ಹೋರಾಟ– ಕರ್ನಾಟಕ ಸಂಚಾಲಕ ಸಿ.ಯತಿರಾಜು, ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎ.ಗೋವಿಂದರಾಜು, ಎಐಕೆಎಂಎಸ್ ಮುಖಂಡ ಎಸ್.ಎನ್.ಸ್ವಾಮಿ, ಎಸ್.ಎಂ.ಸಂಯೋಜಕ ಬಿ.ಉಮೇಶ್, ಎಐಕೆಎಸ್ ಮುಖಂಡ ಕಂಬೇಗೌಡ, ಕೆಪಿಆರ್ ಎಸ್ ಅಜ್ಜಪ್ಪ ನಗರದಲ್ಲಿ ಶನಿವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಹೋರಾಟದ ರೂಪುರೇಷೆ ಬಗ್ಗೆ ಮಾಹಿತಿ ನೀಡಿದರು.
ಔಟರ್ ರಿಂಗ್ ರೋಡ್ ಹೆಸರಿನಲ್ಲಿ ರೈತರ ಫಲವತ್ತಾದ ಭೂಮಿ ಕಬಳಿಸುವ ಹುನ್ನಾರ ನಡೆದಿದೆ. ಜಮೀನು ಕಳೆದುಕೊಳ್ಳುವ ಹಳ್ಳಿಗಳಿಗೆ ಭೇಟಿ ನೀಡಿ ಅ.4ರಿಂದ 6ರವರೆಗೆ ಜಾಗೃತಿ ಜಾಥಾ ನಡೆಸಲಾಗುವುದು. ಅ.13ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಈ ರಸ್ತೆಗೆ 44 ಹಳ್ಳಿಗಳ ಸುಮಾರು 650 ಎಕರೆ ಜಮೀನು ವಶಪಡಿಸಿಕೊಳ್ಳಲಾಗುತ್ತಿದೆ. 750ಕ್ಕೂ ಹೆಚ್ಚು ಕುಟುಂಬಗಳು ಬೀದಿಗೆ ಬೀಳಲಿವೆ. ಯೋಜನೆಯಿಂದಾಗುವ ಸಾಮಾಜಿಕ ಪರಿಣಾಮಗಳ ಬಗ್ಗೆ ಸರ್ವೆ ನಡೆಸದೆ ಭೂಸ್ವಾಧೀನಕ್ಕೆ ಮುಂದಾಗಿದೆ ಎಂದು ದೂರಿದರು.
ದಾಬಸ್ ಪೇಟೆಯಿಂದ ಗುಬ್ಬಿ ವರೆಗೆ ಸುಮಾರು 120 ಅಡಿ ಅಗಲದ ನಕಾಸೆ ರಸ್ತೆ ಇದೆ. ಈ ರಸ್ತೆಯನ್ನು ಔಟರ್ ರಿಂಗ್ ರಸ್ತೆಗೆ ಬಳಸುವಂತೆ ಒತ್ತಾಯಿಸಿದ್ದರೂ ಜಿಲ್ಲಾಧಿಕಾರಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.
ಮುಖಂಡರಾದ ರಮೇಶ್ ಭೈರಸಂದ್ರ, ಸಿದ್ದಗಂಗಮ್ಮ, ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಚಿಕ್ಕಬೋರೇಗೌಡ ಇತರರು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC