ಸಿಎಂ ಸಿದ್ದರಾಮಯ್ಯ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಶಾಸಕ ಯು.ಟಿ. ಖಾದರ್ ಹೆಸರು ಪ್ರಸ್ತಾವನೆ ಮಾಡಿದ್ದಾರೆ. ಸಿಎಂ ಪ್ರಸ್ತಾವವನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅನುಮೋದಿಸಿದ್ದಾರೆ. ವಿಧಾನಸಭೆ ಸ್ಪೀಕರ್ ಆಗಿ ಯು.ಟಿ. ಖಾದರ್ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ನೂತನ ಸ್ಪೀಕರ್ ಆಗಿ ಆಯ್ಕೆಯಾದ ಯು.ಟಿ.ಖಾದರ್ಗೆ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಸ್ಪೀಕರ್ ಯು.ಟಿ.ಖಾದರ್ಗೆ ಅತಿ ಹೆಚ್ಚು ಪ್ರಶ್ನೆ ಕೇಳಿದ್ದಕ್ಕೆ ಸದನವೀರ ಪ್ರಶಸ್ತಿಯೂ ಸಿಕ್ಕಿತ್ತು. ವಿಪಕ್ಷ ಉಪನಾಯಕರಾಗಿಯೂ ಯು.ಟಿ.ಖಾದರ್ ಉತ್ತಮ ಕೆಲಸ ಮಾಡಿದ್ದಾರೆ. ವಿಧಾನಸಭೆ ಪ್ರಜಾಪ್ರಭುತ್ವದ ದೇಗುಲ. ಸದನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕು. ನಾಡಿನ ಅಭಿವೃದ್ಧಿ, 7 ಕೋಟಿ ಕನ್ನಡಿಗರ ಹಿತರಕ್ಷಣೆ ಆಗಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ಪೀಕರ್ ಸ್ಥಾನ ಅತ್ಯುನ್ನತವಾದುದು. ರಾಜ್ಯದ ಜಿಡಿಪಿ ಬೆಳವಣಿಗೆ ಕೂಡ ಆಗಬೇಕು ಎಂದರು.
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅಭಿನಂದನೆ ಸಲ್ಲಿಸಿ ಕರ್ನಾಟಕದ ವಿಧಾನಮಂಡಲಕ್ಕೆ ತನ್ನದೇ ಆದ ಇತಿಹಾಸವಿದೆ. ಇಡೀ ದೇಶಕ್ಕೆ ಮಾರ್ಗದರ್ಶನ ನೀಡಿದ ವಿಧಾನಮಂಡಲವಿದು. ಯು.ಟಿ.ಖಾದರ್ ಶಾಸಕರಾಗಿ, ಸಚಿವರಾಗಿ ಕೆಲಸ ಮಾಡಿದ್ದಾರೆ. ಯು.ಟಿ.ಖಾದರ್ ವಿಪಕ್ಷ ಉಪನಾಯಕರಾಗಿಯೂ ಉತ್ತಮ ಕೆಲಸ ಮಾಡಿದ್ದಾರೆ. ಈ ಹಿಂದೆ ಸ್ಪೀಕರ್ಗಳು ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ನ್ಯಾಯಾಂಗಕ್ಕಿಂತ ಎತ್ತರವಾದದ್ದು ಸ್ಪೀಕರ್ ಸ್ಥಾನ. ನಿಷ್ಪಕ್ಷಪಾತವಾಗಿ ತಾವು ಸದನವನ್ನು ನಡೆಸಬೇಕು.
ವಿಪಕ್ಷ ಸದಸ್ಯರ ಹೇಳಿಕೆಗೆ ಸ್ಪೀಕರ್ ಹೆಚ್ಚು ಅವಕಾಶ ಕೊಡಬೇಕು. ಚರ್ಚೆ ವೇಳೆ ಕೊನೆಯ ಸಾಲಿನವರಿಗೆ ಹೆಚ್ಚು ಅವಕಾಶ ಕೊಡಬೇಕು. ಸ್ಪೀಕರ್ ಹೊಸ ವಿಚಾರಕ್ಕೆ ಅವಕಾಶ ಮಾಡಿಕೊಡುವ ವಿಶ್ವಾಸವಿದೆ. ಎಲ್ಲರನ್ನೂ ಸಮಾನವಾಗಿ ತೆಗೆದುಕೊಂಡು ಹೋಗುವ ಶಕ್ತಿ ನಿಮ್ಮಲ್ಲಿದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


