ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿ ಇಲಾಖಾ ಸಚಿವ ನಾಗೇಂದ್ರ ಅವರು ಕೂಡಲೇ ರಾಜೀನಾಮೆ ಕೊಟ್ಟು ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ತನಿಖಾ ಸಂಸ್ಥೆಗಳಿಂದ ಇದರ ಸಮಗ್ರ ನಿಷ್ಪಕ್ಷಪಾತ ತನಿಖೆ ಮಾಡಲು ಅಸಾಧ್ಯ. ಆದ್ದರಿಂದ ಕೇಂದ್ರ ಸರ್ಕಾರದ ಏಜೆನ್ಸಿಗಳ ಮೂಲಕ ತನಿಖೆ ನಡೆಸಿ ಎಂದು ಒತ್ತಾಯಿಸಿದರು.
ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರ್ ಅವರು ಮಂತ್ರಿಗಳ ಮೌಖಿಕ ಆದೇಶದನ್ವಯ ಹಣ ವರ್ಗಾವಣೆ ಮಾಡಿದ್ದಾಗಿ ಬರೆದಿದ್ದಾರೆ. ಹಾಗಾದರೆ ಎಫ್ಐಆರ್ ನಲ್ಲಿ ಸಚಿವರ ಹೆಸರು ಯಾಕೆ ಬಂದಿಲ್ಲ ಎಂದು ಪ್ರಶ್ನಿಸಿದರು. ಇದು ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ ಎಂದರು. ಸರ್ಕಾರದ ಅಧೀನ ಸಂಸ್ಥೆಯಾದ ಸಿಐಡಿಯವರು ಮುಖ್ಯಮಂತ್ರಿಗಳು, ಸಚಿವರ ಬಗ್ಗೆ ತನಿಖೆ ಮಾಡಲು ಎಷ್ಟರಮಟ್ಟಿಗೆ ಸಾಧ್ಯ ಎಂದ ಅವರು, ನೈತಿಕತೆ ಇದ್ದರೆ ಸಚಿವರು ರಾಜೀನಾಮೆ ಕೊಡಬೇಕಿತ್ತು.
ಬ್ಯಾಂಕ್ ಖಾತೆಯು ಎಂಡಿ ಮತ್ತು ಅಕೌಂಟ್ಸ್ ಅಧಿಕಾರಿಯ ಜಂಟಿ ಖಾತೆಯಾಗಿರುತ್ತದೆ. ಮಾರ್ಚ್ನಲ್ಲಿ ಹಣ ವರ್ಗಾವಣೆ ಆಗಿದೆ. ಮಾರ್ಚ್ 4ರಂದು 25 ಕೋಟಿ, 6ರಂದು 25 ಕೋಟಿ, ಮಾರ್ಚ್ 21ರಂದು 44 ಕೋಟಿ ವರ್ಗಾವಣೆ ಆಗಿದೆ. ರಾಜ್ಯ ಹುಜೂರ್ ಖಜಾನೆಯಿಂದ 43.33 ಕೋಟಿ ವರ್ಗಾವಣೆ ಆಗಿದೆ. ಬಳಿಕ ಮೇ 21ರಂದು 50 ಕೋಟಿ ವರ್ಗಾವಣೆ ಆಗಿದೆ ಎಂದು ವಿವರಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


