ತುಮಕೂರು: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, ನನಗೆ ಯಾವ ಸ್ಥಾನ ಕೊಡಬೇಕು ಎಂಬುದು ಹೈಕಮಾಂಡ್ ಗೆ ಬಿಟ್ಟ ವಿಚಾರವಾಗಿದ್ದು, ಆಯಾ ಕಾಲಕ್ಕೆ ಏನೇನು ಆಗಬೇಕೋ ಅದು ಆಗುತ್ತದೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದರು.
ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವ್ಯಕ್ತಿಗಿಂತ ಪಕ್ಷ ದೊಡ್ಡದು, ಪಕ್ಷಕ್ಕಿಂತ ದೇಶ ದೊಡ್ಡದು ಎಂದು ತಿಳಿಸಿದ ಅವರು, ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಕ್ಕೆ ನಮ್ಮೆಲ್ಲರ ಬದ್ಧತೆ ಇರುತ್ತದೆ ಎಂದು ಸ್ಪಷ್ಟಪಡಿಸಿದರು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬಿಡದಿ ಟೌನ್ ಶಿಪ್ ನಿರ್ಮಾಣದ ವಿಚಾರವಾಗಿ ಮಾತನಾಡಿ, ಇದನ್ನು ಅವರು ಪ್ರತಿಷ್ಠೆಯಾಗಿ ತೆಗೆದುಕೊಳ್ಳಬಾರದು ಎಂದರು. ರಾಜ್ಯ ಸರ್ಕಾರ ಮನಸ್ಸು ಮಾಡಿದರೆ ಒಂದಲ್ಲ, 50 ಬಿಡದಿಗಳನ್ನು ಮಾಡಬಹುದು. ಆದರೆ ಅಲ್ಲಿನ ಜನರಿಗೆ ಬೇಡ ಎಂದಾಗ ಬಲವಂತವಾಗಿ ಅದನ್ನು ಮಾಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.
ತಿಪಟೂರು ತಾಲೂಕನ್ನು ಬರಪೀಡಿತ ಪಟ್ಟಿಯಿಂದ ಕೈಬಿಟ್ಟಿರುವ ಬಗ್ಗೆ ಜಿಲ್ಲಾಧಿಕಾರಿಗಳ ಜತೆ ಮಾತನಾಡಿದ್ದು, ಸೋಮವಾರ ಕಚೇರಿಗೆ ಬಂದು ಎರಡನೇ ಪಟ್ಟಿಯಲ್ಲಿ ಸೇರಿಸುವುದಾಗಿ ತಿಳಿಸಿದ್ದಾರೆ ಎಂದು ತಿಳಿಸಿದರು. ಈ ವಿಚಾರದಲ್ಲಿ ಯಾರೂ ಉಪ್ಪು–ಖಾರ ಹಾಕಿ ದೊಡ್ಡದು ಮಾಡುವುದು ಬೇಡ ಎಂದು ಮನವಿ ಮಾಡಿದರು.
ತುಮಕೂರು ರೈಲ್ವೆ ನಿಲ್ದಾಣದ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡು ಉದ್ಘಾಟನೆಯಾದ ಕೂಡಲೇ, ನಡೆದಾಡುವ ದೇವರು ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ ಹೆಸರನ್ನು ಅಧಿಕೃತವಾಗಿ ನಾಮಕರಣ ಮಾಡಲಾಗುವುದು ಎಂದು ತಿಳಿಸಿದರು. ಬರುವ ವರ್ಷ ಮೇ ಅಥವಾ ಜೂನ್ ತಿಂಗಳಲ್ಲಿ ಈ ನವೀಕೃತ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಲು ತೀರ್ಮಾನಿಸಲಾಗಿದೆ ಎಂದರು.
ಮಾಜಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಯನ್ನು ಸ್ವಾಗತಿಸುವುದಾಗಿ ತಿಳಿಸಿದ ಸೋಮಣ್ಣ, ವಿರೋಧ ಪಕ್ಷವಾಗಿ ತಮ್ಮ ಕರ್ತವ್ಯವನ್ನು ತಾವು ಮಾಡಿರುವುದಾಗಿ ಹೇಳಿದರು. ತಾನೊಬ್ಬ ಆರೋಪಿ ಎಂಬುದು ಅವರಿಗೆ ಗೊತ್ತಿದೆ ಮತ್ತು ಆರೋಪ ಮುಕ್ತರಾಗುವ ವರೆಗೆ ಅವರು ತೆಗೆದುಕೊಂಡಿರುವ ನಿರ್ಧಾರ ಸರಿಯಾಗಿದೆ ಎಂದರು. ದಲಿತ, ಸವರ್ಣೀಯ ಎಂಬೆಲ್ಲಾ ಭೇದಭಾವಗಳನ್ನು ಬದಿಗಿಟ್ಟು ವ್ಯಕ್ತಿಗಿಂತ ರಾಜ್ಯ ಮತ್ತು ದೇಶ ದೊಡ್ಡದು ಎಂಬುದನ್ನು ಎಲ್ಲರೂ ಗಮನಿಸಬೇಕು ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
