ವೈ.ಎನ್. ಹೊಸಕೋಟೆ (ಪಾವಗಡ): ತಾಲ್ಲೂಕಿನ ವೈ.ಎನ್. ಹೊಸಕೋಟೆ ಹೋಬಳಿ ಕೇಂದ್ರದ ಹೃದಯಭಾಗದಲ್ಲಿರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆಯ ಆವರಣವು ಇತ್ತೀಚೆಗೆ ಮದ್ಯಪಾನಿಗಳ ಅಡ್ಡೆಯಾಗಿ ಮಾರ್ಪಡುತ್ತಿದ್ದು, ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಶಾಲಾ ಆವರಣದಲ್ಲಿ ಪ್ರತಿನಿತ್ಯ ರಾತ್ರಿ ವೇಳೆ ಕಿಡಿಗೇಡಿಗಳು ಮದ್ಯಪಾನ ಮಾಡಿ, ಖಾಲಿ ಬಾಟಲಿಗಳನ್ನು ಎಲ್ಲೆಂದರಲ್ಲಿ ಎಸೆದು ಹೋಗುತ್ತಿದ್ದಾರೆ. ಮರುದಿನ ಶಾಲೆಗೆ ಬರುವ ಶಿಕ್ಷಕರು ಮತ್ತು ಪುಟ್ಟ ವಿದ್ಯಾರ್ಥಿಗಳು ಈ ಮದ್ಯದ ಬಾಟಲಿಗಳು, ಗುಟ್ಕಾ ಪ್ಯಾಕೆಟ್ಗಳು ಮತ್ತು ಇತರ ಕಸವನ್ನು ಸ್ವಚ್ಛಗೊಳಿಸಬೇಕಾದ ಅನಿವಾರ್ಯತೆ ಎದುರಾಗಿದೆ.
ಈ ಶಾಲಾ ಸಂಕೀರ್ಣದಲ್ಲಿ ಉರ್ದು ಶಾಲೆ, ಸಾರ್ವಜನಿಕ ಗ್ರಂಥಾಲಯ ಹಾಗೂ ವಾಲಿಬಾಲ್ ಕ್ರೀಡಾಂಗಣವೂ ಇದೆ. ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿ ಓದುಗರು, ಕ್ರೀಡಾಪಟುಗಳು ಹಾಗೂ ಪೋಷಕರು ಇಲ್ಲಿಗೆ ಭೇಟಿ ನೀಡುತ್ತಾರೆ. ಆದರೆ, ಸಂಜೆಯಾಗುತ್ತಿದ್ದಂತೆ ಕಿಡಿಗೇಡಿಗಳು ಶಾಲೆಯ ಆವರಣ ಗೋಡೆ ಹಾಗೂ ಗೇಟ್ ಹಾರಿ ಒಳಬಂದು, ರಂಗಮಂದಿರ ಮತ್ತು ಶಾಲಾ ಕಟ್ಟಡಗಳ ಬಳಿ ಕುಳಿತು ಮದ್ಯಪಾನ, ಧೂಮಪಾನದಂತಹ ಅನೈತಿಕ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ.
ಕ್ರೀಡಾಂಗಣದಲ್ಲಿ ಮದ್ಯದ ಬಾಟಲಿಗಳನ್ನು ಒಡೆದು ಹಾಕುತ್ತಿರುವುದರಿಂದ ಕ್ರೀಡಾಪಟುಗಳಿಗೆ ಗಾಯವಾಗುವ ಭೀತಿ ಎದುರಾಗಿದೆ. ಶೈಕ್ಷಣಿಕ ವಾತಾವರಣ ಸಂಪೂರ್ಣವಾಗಿ ಹದಗೆಡುತ್ತಿದೆ ಎಂದು ಶಾಲೆಯ ಮುಖ್ಯ ಶಿಕ್ಷಕ ಐ.ಎ. ನಾರಾಯಣಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶಾಲಾ ಆವರಣದಲ್ಲಿ ನಡೆಯುತ್ತಿರುವ ಈ ಅನಿಷ್ಟ ಚಟುವಟಿಕೆಗಳಿಗೆ ಕೂಡಲೇ ಬ್ರೇಕ್ ಹಾಕಬೇಕು. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸರು ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಶಾಲೆಯ ಪಾವಿತ್ರ್ಯತೆಯನ್ನು ಕಾಪಾಡಬೇಕು ಎಂದು ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಎ.ಒ.ನಾಗರಾಜು ಒತ್ತಾಯಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


